ತಮಿಳುನಾಡಿಗೆ ರಾತ್ರೋರಾತ್ರಿ ಕೆಆರ್ಎಸ್ ನಿಂದ ನೀರು, ರೈತರ ಪ್ರತಿಭಟನೆ
ಮಂಡ್ಯ, ಜೂನ್ 30: ಈಗಷ್ಟೆ ಮಳೆಯಾಗಿ ಇನ್ನಷ್ಟೆ ನೀರು ಹರಿದು ಬರಬೇಕಾದ ಪರಿಸ್ಥಿತಿ ಕೆಆರ್ಎಸ್ ಜಲಾಶಯದಲ್ಲಿದೆ. ಹೀಗಿರುವಾಗ ಸರ್ಕಾರ ರಾತ್ರೋರಾತ್ರಿ ತಮಿಳುನಾಡಿಗೆ ನೀರು ಬಿಟ್ಟಿರುವುದು ಸಂಶಯಕ್ಕೆಡೆ ಮಾಡಿದ್ದು, ಮಂಡ್ಯದಲ್ಲಿ ರೈತರು ಆಕ್ರೋಶಗೊಂಡಿದ್ದಾರೆ.
ಈಗ ಕೆ.ಆರ್.ಎಸ್.ಗೆ 17 ಸಾವಿರ ಕ್ಯೂಸೆಕ್ ನೀರು ಹರಿದು ಬರುತ್ತಿದ್ದು, ಜಲಾಶಯದ ಮಟ್ಟ 73.65 ಅಡಿ ತಲುಪಿದೆ. ಹೀಗಿರುವಾಗಲೇ ರಾಜ್ಯ ಸರ್ಕಾರವು ತಮಿಳುನಾಡಿಗೆ 2500 ಕ್ಯೂಸೆಕ್ ನೀರನ್ನು ಹರಿಸುತ್ತಿರುವುದು ರೈತರ ಆಕ್ರೋಶಕ್ಕೆ ಕಾರಣವಾಗಿದೆ.
ಈ ಹಿನ್ನಲೆಯಲ್ಲಿ ಮಂಡ್ಯದಾದ್ಯಂತ ಇಂದು ರೈತರು ಬೀದಿಗಿಳಿದಿದ್ದು ಇವರಿಗೆ ವಿವಿಧ ಸಂಘಟನೆಗಳು ಕೈ ಜೋಡಿಸಿವೆ.
ಮಂಡ್ಯ, ಮಳವಳ್ಳಿ, ಮದ್ದೂರು, ಶ್ರೀರಂಗಪಟ್ಟಣ ತಾಲೂಕುಗಳಲ್ಲಿ ನೀರು ಬಿಟ್ಟಿರುವುದಕ್ಕೆ ತೀವ್ರ ವಿರೋಧ ವ್ಯಕ್ತವಾಗಿದ್ದು ಬೀದಿಗಿಳಿದು ಪ್ರತಿಭಟನೆ ನಡೆಸಿದ್ದಾರೆ.
ಮಂಡ್ಯ ನಗರದಲ್ಲಿ ರೈತ ಸಂಘದ ಕಾರ್ಯಕರ್ತರು ಪ್ರತ್ಯೇಕವಾಗಿ ಹೋರಾಟ ನಡೆಸಿ, ಮಂಡ್ಯದ ಸರ್ ಎಂ.ವಿಶ್ವೇಶ್ವರಯ್ಯ ಪ್ರತಿಮೆ ಬಳಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ರಸ್ತೆ ತಡೆ ಪ್ರತಿಭಟನೆ ನಡೆಸಿದರು. ಇನ್ನೊಂದು ಕಡೆ ಕಾವೇರಿ ನೀರಾವರಿ ನಿಗಮದ ಕಚೇರಿಗೆ ಮುತ್ತಿಗೆ ಹಾಕಿದ್ದಾರೆ. ಎಲ್ಲೆಡೆ ವಿರೋಧ ವ್ಯಕ್ತವಾಗಿರುವ ಹಿನ್ನಲೆಯಲ್ಲಿ ಜಿಲ್ಲಾದ್ಯಂತ ಹೈ ಅಲರ್ಟ್ ಘೋಷಿಸಲಾಗಿದ್ದು ಭಿಗಿ ಭದ್ರತೆ ಏರ್ಪಡಿಸಲಾಗಿದೆ.
ಕೃಷ್ಣರಾಜಸಾಗರ ಬಳಿ ರೈತರು ಪ್ರತಿಭಟನೆ ನಡೆಸುವ ಸಾಧ್ಯತೆ ಹಾಗೂ ನದಿಗೆ ಇಳಿದು ಪ್ರತಿಭಟನೆ ನಡೆಸುವರೆಂಬ ಕಾರಣದಿಂದಾಗಿ ಕೆ.ಆರ್.ಎಸ್. ಸುತ್ತಮುತ್ತ ಬಿಗಿ ಪೊಲೀಸ್ ಕಾವಲು ಹಾಕಲಾಗಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸಲಾಗುತ್ತಿರುವುದರಿಂದ ವಿರೋಧಗಳು ಎದ್ದಿದ್ದು, ಈ ಹಿನ್ನಲೆಯಲ್ಲಿ ಮಂಡ್ಯದ ತಮಿಳು ಕಾಲೋನಿಗೆ ಮುಂಜಾಗ್ರತಾ ಕ್ರಮವಾಗಿ ಬಿಗಿ ಬಂದೋಬಸ್ತ್ ಮಾಡಲಾಗಿದೆ.
ದಕ್ಷಿಣ ವಲಯ ಪೊಲೀಸ್ ವರಿಷ್ಠಾಧಿಕಾರಿ ವಿಫುಲ್ ಕುಮಾರ್ ಕೆಆರ್ಎಸ್ ಜಲಾಶಯಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪೊಲೀಸ್ ಬಂದೋಬಸ್ತ್ ಕುರಿತು ಪರಿಶೀಲನೆ ನಡೆಸಿದ್ದಾರೆ.