ಹೆಡ್ ಕಾನ್ಸ್ಟೇಬಲ್ ಆತ್ಮಹತ್ಯೆ: ನಿಷ್ಪಕ್ಷಪಾತ ತನಿಖೆಗೆ ಹೆತ್ತವರ ಆಗ್ರಹ
ಮಂಗಳೂರು, ಮಾರ್ಚ್. 28 : ವಿಚಾರಣೆ ದಿನದಂದು ಕೋಟ್ ನ ನಾಲ್ಕನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದ ಪ್ರಕರಣವೊಂದರ ಆರೋಪಿ ಬಜ್ಪೆ ಪೊಲೀಸ್ ಠಾಣೆ ಹೆಡ್ ಕಾನ್ಸ್ಟೇಬಲ್ ಪ್ರವೀಣ್ ಪ್ರಕರಣವನ್ನು ನಿಷ್ಪಕ್ಷಪಾತವಾಗಿ ಸಮಗ್ರ ತನಿಖೆ ನಡೆಸುವಂತೆ ಮೃತನ ತಾಯಿ ಮತ್ತು ಸಂಬಂಧಿಕರು ಆಗ್ರಹಿಸಿದ್ದಾರೆ.
ಪೊಲೀಸ್ ಕಮಿಷನರ್ ಚಂದ್ರಶೇಖರ್ ಅವರನ್ನು ಕಚೇರಿಯಲ್ಲಿ ಭೇಟಿಯಾದ ಪ್ರವೀಣ್ ತಾಯಿ ಕಮಲಮ್ಮ, ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ, ನಿಷ್ಪಕ್ಷವಾಗಿ ತನಿಖೆ ನಡೆಸಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ. ಇದಕ್ಕೆ ಪೂರಕವಾಗಿ ಸ್ಪಂದಿಸಿರುವ ಕಮಿಷನರ್ ಚಂದ್ರಶೇಖರ್, ಸಮಗ್ರ ವಿಚಾರಣೆ ನಡೆಸಿ ತನಿಖೆ ಮಾಡುವ ಬಗ್ಗೆ ಭರವಸೆ ನೀಡಿದ್ದಾರೆ.[ಪೋಕ್ಸೊ ಕಾಯ್ದೆಯಡಿ ದೂರು ದಾಖಲಾಗಿದ್ದ ಹೆಡ್ ಕಾನ್ಸ್ಟೇಬಲ್ ಆತ್ಮಹತ್ಯೆ]
ಮಹಿಳೆಯೋರ್ವಳು ಸ್ನಾನ ಮಾಡುತ್ತಿದ್ದಾಗ ಮೊಬೈಲ್ನಲ್ಲಿ ಚಿತ್ರೀಕರಿಸಲು ಮುಂದಾಗಿದ್ದ ಎನ್ನುವ ಮಹಿಳೆ ದೂರಿನ್ವಯ ಪ್ರವೀಣ್ ನನ್ನು ವಶಕ್ಕೆ ಪಡೆದು ವಿಚಾರಣೆಗೆಂದು ಕೋರ್ಟ್ ಕರೆದೊಯ್ದ ಸಂದರ್ಭದಲ್ಲಿ ಕೋರ್ಟ್ ನ 4ನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದ.
ಗುರುವಾರ ರಾತ್ರಿ ಮಹಿಳೆಯೋರ್ವಳು ಸ್ನಾನ ಮಾಡುತ್ತಿದ್ದಾಗ ಮೊಬೈಲ್ನಲ್ಲಿ ಚಿತ್ರೀಕರಿಸಲು ಮುಂದಾಗಿದ್ದ. ಅದನ್ನು ನೋಡಿದ ಆಕೆಯ ಪುತ್ರಿ ತಾಯಿಗೆ ಮಾಹಿತಿ ನೀಡಿದ್ದಳು. ಶನಿವಾರ ಈ ಬಗ್ಗೆ ಮಹಿಳೆ ಬಜ್ಪೆ ಠಾಣಾಧಿಕಾರಿಗೆ ದೂರು ನೀಡಿದ್ದರು.
ಆರೋಪಿಯು ಬಾಲಕಿಗೂ ಲೈಂಗಿಕ ಕಿರುಕುಳ ನೀಡಿದ್ದ ಎಂದು ದೂರಲಾಗಿದೆ. ಈ ಹಿನ್ನೆಲೆಯಲ್ಲಿ ಪೇದೆ ಪ್ರವೀಣ್ ನ ವಿರುದ್ಧ ಪೋಕ್ಸೊ ಕಾಯಿದೆಯಡಿ ಪ್ರಕರಣ ದಾಖಲಿಸಲಾಗಿತ್ತು.