ಶಿರಾಡಿ ಘಾಟಿಯಲ್ಲಿ ಸಂಪೂರ್ಣ ವಾಹನ ನಿರ್ಬಂಧ ಬೇಡ: ಸಚಿವ
ಮಂಗಳೂರು, ನವೆಂಬರ್ 2: ಶಿರಾಡಿ ಘಾಟಿ ದ್ವಿತೀಯ ಹಂತದ ರಸ್ತೆ ಕಾಮಗಾರಿ ಸಂದರ್ಭದಲ್ಲಿ ವಾಹನಗಳ ಸಂಪೂರ್ಣ ನಿರ್ಬಂಧ ಮಾಡುವುದು ಬೇಡ. ಈ ಕುರಿತು ಸ್ಥಳಕ್ಕೆ ತೆರಳಿ ಪರಿಶೀಲಿಸಿ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ, ಜಿಲ್ಲಾಧಿಕಾರಿಗೆ ಸೂಚನೆ ನೀಡಿದರು.
ನಗರದಲ್ಲಿ ಮಂಗಳವಾರ ಶಿರಾಡಿ ಘಾಟಿ ರಸ್ತೆ ಕಾಮಗಾರಿಯ ಕುರಿತು ನಡೆದ ಸಭೆಯಲ್ಲಿ ಮಾತನಾಡಿದ ಅವರು, ಕಾಮಗಾರಿಯ ಸಂದರ್ಭದಲ್ಲಿ ವಾಹನಗಳ ಸಂಚಾರವನ್ನು ಸಂಪೂರ್ಣ ನಿರ್ಬಂಧಿಸುವುದರಿಂದ ಸಾರ್ವಜನಿಕರಿಗೆ ತೊಂದರೆ ಆಗಲಿದೆ. ಅಲ್ಲದೇ ಈ ರಸ್ತೆ ಬಂದ್ ಮಾಡುವುದರಿಂದ ಚಾರ್ಮಾಡಿ ಘಾಟಿ ರಸ್ತೆಯಲ್ಲಿ ವಾಹನಗಳ ದಟ್ಟಣೆ ಹೆಚ್ಚಾಗಲಿದೆ ಎಂದರು.[ಅ.15ರಿಂದ ರಾಷ್ಟ್ರೀಯ ಹೆದ್ದಾರಿ 75 ಶಿರಾಡಿ ಘಾಟ್ ರಸ್ತೆ ಬಂದ್]
ಈ ಬಗ್ಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಮುಖ್ಯ ಇಂಜಿನಿಯರ್ ಲಕ್ಷ್ಮಣ ರಾವ್ ಪೇಶ್ವೆ ಅವರ ಜತೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ, ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಸಂಬಂಧ ಪಟ್ಟ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ, ಸೂಕ್ತ ನಿರ್ಧಾರ ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು.
ತೀರಾ ಅಗತ್ಯವಿರುವ ಸ್ಥಳಗಳಲ್ಲಿ ಒಂದು ವಾರದಿಂದ 15 ದಿನ ರಸ್ತೆ ಬಂದ್ ಮಾಡಬಹುದು. ಆ ನಂತರ ಲಘು ವಾಹನಗಳ ಸಂಚಾರಕ್ಕೆ ಮುಕ್ತ ಮಾಡಬೇಕು. ಈ ರೀತಿ ಮಾಡುವುದರಿಂದ ಪರ್ಯಾಯ ರಸ್ತೆಯಾಗಿರುವ ಚಾರ್ಮಾಡಿ ಘಾಟಿಯಲ್ಲಿ ವಾಹನ ದಟ್ಟಣೆ ಕಡಿಮೆ ಮಾಡಲು ಸಾಧ್ಯವಾಗಲಿದೆ ಎಂದು ಹೇಳಿದರು.[ಶಿರಾಡಿ ಘಾಟ್ ಸುರಂಗ ಮಾರ್ಗಕ್ಕೆ ಒಪ್ಪಿಗೆ ಕೊಟ್ಟ ಪರಿಸರ ಇಲಾಖೆ]
ಶಿರಾಡಿ ಘಾಟ್ ರಸ್ತೆ ಕಾಮಗಾರಿ ಹಿನ್ನೆಲೆಯಲ್ಲಿ ಪರ್ಯಾಯವಾಗಿ ರಾಷ್ಟ್ರೀಯ ಹೆದ್ದಾರಿ 234 ಅನ್ನು ಬಿ.ಸಿ. ರೋಡ್ ಜಂಕ್ಷನ್ನಿಂದ ಚಾರ್ಮಾಡಿ ಘಾಟಿ ರಸ್ತೆವರೆಗೆ ಅಭಿವೃದ್ದಿ ಪಡಿಸಲು 6 ಕೋಟಿ ವೆಚ್ಚದ ಯೋಜನಾ ವರದಿ ಸಿದ್ಧಪಡಿಸಲಾಗಿದೆ.
ಈ ರಸ್ತೆಯು 4.50 ರಿಂದ 5.50 ಮೀಟರ್ ಅಗಲವಿದ್ದು, 482 ಮೊನಚಾದ ತಿರುವುಗಳಿವೆ. ಮಳೆಯಿಂದಾಗಿ ರಸ್ತೆಯ ಇಕ್ಕೆಲಗಳು ಕೊರೆದಿದ್ದು, ಇಲ್ಲಿ ಗಟ್ಟಿ ಮಣ್ಣಿನಿಂದ ಬಲಪಡಿಸಬೇಕಾಗಿದೆ ಎಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಕಾರ್ಯನಿರ್ವಾಹಕ ಇಂಜಿನಿಯರ್ ರಮೇಶ್ ತಿಳಿಸಿದರು.[ಶೀಘ್ರದಲ್ಲೇ ಶಿರಾಡಿ ಘಾಟ್ ಬೈಪಾಸ್ ಕಾಮಗಾರಿ : ಗಡ್ಕರಿ]
ತಾತ್ಕಾಲಿಕ ಆಸ್ಪತ್ರೆ ನಿರ್ಮಾಣ: ಶಿರಾಡಿ ಹಾಗೂ ಚಾರ್ಮಾಡಿ ಘಾಟಿಯ 3-4 ಕಡೆ ತಾತ್ಕಾಲಿಕ ಆಸ್ಪತ್ರೆ ತೆರೆಯಲು ಜಿಲ್ಲಾ ಆರೋಗ್ಯ ಇಲಾಖೆ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ.ಕೆ.ಜಿ.ಜಗದೀಶ್ ಸೂಚನೆ ನೀಡಿದರು. ಘಾಟಿಗಳಲ್ಲಿ ಸಂಭವಿಸುವ ಅಪಘಾತ ಹಾಗೂ ತುರ್ತು ಸಂದರ್ಭದಲ್ಲಿ ತ್ವರಿತವಾಗಿ ಚಿಕಿತ್ಸೆ ನೀಡಲು ಇದರಿಂದ ಅನುಕೂಲವಾಗಲಿದೆ. ಹೆದ್ದಾರಿ ಪ್ರಾಧಿಕಾರ ಹಾಗೂ ಆರೋಗ್ಯ ಇಲಾಖೆ ಅಧಿಕಾರಿಗಳು ಸ್ಥಳ ಗುರುತಿಸಿ, ಆಸ್ಪತ್ರೆ ಆರಂಭಿಸಬೇಕು ಎಂದು ಹೇಳಿದರು.