ದಕ್ಷಿಣ ಕನ್ನಡ ಡಿಸಿಯಾಗಿ ಡಾ.ಕೆ.ಜಿ.ಜಗದೀಶ್ ಅಧಿಕಾರ ಸ್ವೀಕಾರ
ಮಂಗಳೂರು, ಆಗಸ್ಟ್ 02 : ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಾಗಿ ಡಾ.ಕೆ.ಜಿ.ಜಗದೀಶ್ ಅವರು ಅಧಿಕಾರ ಸ್ವೀಕರಿಸಿದರು. ಕೆಲವು ದಿನಗಳ ಹಿಂದೆ ಸರ್ಕಾರ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಾಗಿದ್ದ ಎ.ಬಿ.ಇಬ್ರಾಹಿಂ ಅವರನ್ನು ಸಾರಿಗೆ ಮತ್ತು ರಸ್ತೆ ಸುರಕ್ಷತಾ ಇಲಾಖೆ ಆಯುಕ್ತರಾಗಿ ವರ್ಗಾವಣೆ ಮಾಡಿತ್ತು.
ಸೋಮವಾರ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ನಡೆದ ಸರಳ ಸಮಾರಂಭದಲ್ಲಿ ಪ್ರಭಾರ ಜಿಲ್ಲಾಧಿಕಾರಿ ಪಿ.ಐ.ಶ್ರೀವಿದ್ಯಾ ಅವರು ಡಾ.ಕೆ.ಜಿ.ಜಗದೀಶ್ ಅವರಿಗೆ ಅಧಿಕಾರ ಹಸ್ತಾಂತರಿಸಿದರು. ಐಎಎಸ್ ಅಧಿಕಾರಿ ಡಾ.ಕೆ.ಜಿ. ಜಗದೀಶ್ (38) ಮೂಲತಃ ತುಮಕೂರು ಜಿಲ್ಲೆಯ ಕೊರಟಗೆರೆಯವರು.[ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಎ.ಬಿ.ಇಬ್ರಾಹಿಂ ವರ್ಗಾವಣೆ]
2005ನೇ ಬ್ಯಾಚ್ ಐಎಎಸ್ ಅಧಿಕಾರಿಯಾದ ಕೆ.ಜಿ.ಜಗದೀಶ್ ಅವರು ಕಲಬುರಗಿಯಲ್ಲಿ ಸಹಾಯಕ ಆಯುಕ್ತಾರಾಗಿ ಸೇವೆ ಆರಂಭಿಸಿದರು. ರಾಮನಗರ, ಯಾದಗಿರಿ, ಹಾಸನ ಜಿಲ್ಲಾಧಿಕಾರಿಯಾಗಿ ಕೆಲಸ ಮಾಡಿದ್ದಾರೆ. 2013 ಜೂ. 14ರಿಂದ ರಾಜೀವ್ ಗಾಂಧಿ ಗ್ರಾಮೀಣ ವಸತಿ ನಿಗಮ ಲಿ. ನ ವ್ಯವಸ್ಥಾಪಕ ನಿರ್ದೇಶಕರಾಗಿ ಕಾರ್ಯನಿರ್ವಹಿಸಿದ ಅವರನ್ನು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಾಗಿ ವರ್ಗಾವಣೆ ಮಾಡಲಾಗಿತ್ತು.[ವರ್ಗಾವಣೆಯ ಗೊಂದಲಕ್ಕೆ ತೆರೆ ಎಳೆದ ಎ.ಬಿ.ಇಬ್ರಾಹಿಂ]
ಅಧಿಕಾರ ಸ್ವೀಕರಿಸಿದ ಬಳಿಕ ಮಾತನಾಡಿದ ಕೆ.ಜಿ.ಜಗದೀಶ್ ಅವರು, 'ಜಿಲ್ಲಾಧಿಕಾರಿಯಾಗಿ ಕೆಲಸ ಮಾಡಿರುವ ಇತರೆ ಜಿಲ್ಲೆಗಳಿಗೆ ಹೋಲಿಸಿದರೆ ದಕ್ಷಿಣ ಕನ್ನಡ ಸಾಕಷ್ಟು ಅಭಿವೃದ್ಧಿ ಹೊಂದಿದೆ. ಸಾಕ್ಷರತೆಯ ಪ್ರಮಾಣದಲ್ಲಿ ಇಲ್ಲಿನ ಜನರು ಸಾಕಷ್ಟು ಮುಂದಿದ್ದಾರೆ' ಎಂದು ಹೇಳಿದರು.[24 ಐಎಎಸ್ ಅಧಿಕಾರಿಗಳ ವರ್ಗಾವಣೆ]
'ಜಿಲ್ಲೆಯ ಜನರ ಆಶೋತ್ತರಗಳನ್ನು ಈಡೇರಿಸಲು ಪ್ರಯತ್ನಿಸುತ್ತೇನೆ. ಜಿಲ್ಲೆಯಲ್ಲಿ ನಡೆಯುತ್ತಿರುವ ಯಾಂತ್ರೀಕೃತ ಮರಳುಗಾರಿಕೆ ಮತ್ತು ಅಕ್ರಮ ಮರಳುಗಾರಿಕೆ ಕುರಿತಂತೆ ಎರಡು ವಾರದೊಳಗೆ ಸಮಗ್ರ ಅಧ್ಯಯನ ನಡೆಸಿ ಮರಳು ನೀತಿಯ ಬಗ್ಗೆ ಕ್ರಮ ಕೈಗೊಳ್ಳುವುದಾಗಿ' ನೂತನ ಜಿಲ್ಲಾಧಿಕಾರಿಗಳು ಭರವಸೆ ನೀಡಿದರು.
'ಮಂಗಳೂರು ನಗರವನ್ನು ಇನ್ನು 10 ವರ್ಷಗಳ ಅಗತ್ಯಕ್ಕೆ ಅನುಗುಣವಾಗಿ ಸಿದ್ಧಪಡಿಸುವ ಕೆಲಸ ಆಗಬೇಕಿದೆ. ನಗರದಲ್ಲಿನ ಸಮಸ್ಯೆಗಳ ಕುರಿತಂತೆ ಜಿಲ್ಲಾ ಉಸ್ತುವಾರಿ ಸಚಿವರು, ಸ್ಥಳೀಯ ಆಡಳಿತಾಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ಜತೆ ಮಾತುಕತೆ ನಡೆಸಿ, ಅಭಿವೃದ್ದಿಗೆ ಪೂರಕವಾದ ಕ್ರಮಗಳನ್ನು ಕೈಗೊಳ್ಳಲಾಗುವುದು' ಎಂದು ತಿಳಿಸಿದರು.