ಅಹಿತಕರ ಘಟನೆಗಳಲ್ಲಿ ನನ್ನ ಹಸ್ತಕ್ಷೇಪವಿಲ್ಲ: ಖಾದರ್
ಬಿಜೆಪಿ ಮುಖಂಡ, ಮಾಜಿ ವಿಧಾನ ಪರಿಷತ್ ಸದಸ್ಯ ಮೋನಪ್ಪ ಭಂಡಾರಿ ಅವರು ತಮ್ಮ ವಿರುದ್ಧ ಮಾಡಿರುವ ಆರೋಪಗಳಲ್ಲಿ ಯವುದೇ ಹುರುಳಿಲ್ಲ. ಪ್ರಕರಣಗಳ ಕುರಿತು ತನಿಖೆ ನಡೆಸಲು ಇಲಾಖೆ ಸರ್ವ ಸ್ವತಂತ್ರ್ಯವಾಗಿದೆ ಎಂದು ಸಚಿವ ಯು.ಟಿ.ಖಾದರ್ ತಿಳಿಸಿದ್ದಾರೆ.
ಮಂಗಳೂರು, ನವೆಂಬರ್, 14: ಮಂಗಳೂರಿನಲ್ಲಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಚೂರಿ ಇರಿತ ಪ್ರಕರಣಗಳಲ್ಲಿ ತಮ್ಮ ಹಸ್ತಕ್ಷೇಪ ಇದೆ ಎಂದು ಆರೋಪಿಸಿರುವ ಮಾಜಿ ವಿಧಾನಪರಿತಷತ್ ಸದಸ್ಯ ಮೋನಪ್ಪ ಭಂಡಾರಿ ಅವರ ಆರೋಪವನ್ನು ಸಚಿವ ಯು.ಟಿ. ಖಾದರ್ ಅಲ್ಲಗೆಳೆದಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಖಾದರ್, ಇತ್ತೀಚೆಗೆ ಮಂಗಳೂರಿನಲ್ಲಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಚೂರಿ ಇರಿತ ಮತ್ತು ದಾಳಿ ಪ್ರಕರಣಗಳಿಗೆ ಸಂಬಂಧಿಸಿದಂತೆ ಪೊಲೀಸ್ ಇಲಾಖೆಯಲ್ಲಿ ನನ್ನ ಹಸ್ತಕ್ಷೇಪವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಪ್ರಕರಣಗಳಿಗೆ ಸಂಬಂಧಿಸಿದಂತೆ ತನಿಖೆ ನಡೆಸಲು ಇಲಾಖೆ ಸರ್ವ ಸ್ವತಂತ್ರ್ಯವಾಗಿದೆ ಎಂದು ಅವರು ಹೇಳಿದ್ದಾರೆ. ಮೋನಪ್ಪ ಭಂಡಾರಿ ಅವರ ಆರೋಪದಲ್ಲಿ ಯಾವುದೇ ಹುರುಳಿಲ್ಲ ಎಂದು ಅವರು ಹೇಳಿದ್ದಾರೆ.
ಯಾರೇ ಅಹಿತಕರ ಘಟನೆ ಮಾಡಿದರೂ ಅದು ಖಂಡನೀಯ. ಶಾಂತಿಯನ್ನು ಬಯಸುವ ನಾಗರಿಕರು ಯಾರೂ ಇಂತಹ ಕೃತ್ಯಕ್ಕೆ ಮುಂದಾಗುವುದಿಲ್ಲ. ಪ್ರಕರಣಗಳಿಗೆ ಸಂಬಂಧಿಸಿದಂತೆ ಸೂಕ್ತ ತನಿಖೆ ನಡೆಸಲು ಸೂಚಿಸಿದ್ದೇನೆ ಎಂದು ಅವರು ಹೇಳಿದರು.
ರಾಜ್ಯದ ಯಾವುದೇ ಗೋದಾಮುಗಳಲ್ಲಿ ಯಾವುದೇ ಆಹಾರ ಸಾಮಗ್ರಿಗಳನ್ನು ಅಕ್ರಮವಾಗಿ ದಾಸ್ತಾನಿಟ್ಟರೆ ಸೂಕ್ತ ಕ್ರಮ ಜರಗಿಸಲಾಗುವುದು ಎಂದು ಅವರು ಸಚಿವ ಯು.ಟಿ. ಖಾದರ್ ಪ್ರತಿಕ್ರಿಯಿಸಿದ್ದಾರೆ.
ರಾಷ್ಟ್ರಾದಾದ್ಯಂತ 500 ಮತ್ತು 1,000 ರೂ. ನೋಟು ಅಮಾನ್ಯಗೊಂಡ ಬಳಿಕ ಉದ್ಭವಿಸಿದ 'ಚಿಲ್ಲರೆ' ಸಮಸ್ಯೆಯ ನಡುವೆ ಆಹಾರಗಳನ್ನು ದಾಸ್ತಾನುಗೈದು ಗೊಂದಲ ಸೃಷ್ಟಿಸುವ ಪ್ರಕ್ರಿಯೆ ರಾಜ್ಯದೆಲ್ಲೆಡೆ ನಡೆಯುತ್ತಿದೆ ಎಂದರು.
ರಖಂ ಮಳಿಗೆಗಳಲ್ಲಿ 1 ಸಾವಿರ ಟನ್ಗಿಂತ ಮತ್ತು ಚಿಲ್ಲರೆ ಅಂಗಡಿಗಳಲ್ಲಿ 100 ಟನ್ಗಿಂತ ಅಧಿಕ ಆಹಾರ ಸಾಮಗ್ರಿ ದಾಸ್ತಾನು ಇಡುವಂತಿಲ್ಲ. ಈ ಬಗ್ಗೆ ಈಗಾಗಲೆ ಸೂಚನೆ ನೀಡಲಾಗಿದೆ.
ಅದನ್ನು ಮೀರಿ ಅಕ್ರಮವಾಗಿ ದಾಸ್ತಾನಿಟ್ಟು ಕೃತಕವಾಗಿ ಆಹಾರ ಅಭಾವ ಸೃಷ್ಟಿಸಿದರೆ ದಾಳಿ ನಡೆಸಲು ಆಹಾರ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.
ಒಂದು ವೇಳೆ ಇಂತಹ ದಾಸ್ತಾನುಗಳು ಕಂಡುಬಂದರೆ ಕಠಿಣ ಕ್ರಮ ಜರಗಿಸಲಾಗುವುದು ಎಂದು ಖಾದರ್ ಎಚ್ಚರಿಸಿದರು.