2016ರ ಕರಾವಳಿ ಉತ್ಸವಕ್ಕೆ ಸಚಿವ ರಮಾನಾಥ ರೈ ಚಾಲನೆ
ಮಂಗಳೂರು, ಡಿಸೆಂಬರ್. 24 : ದಕ್ಷಿಣ ಕನ್ನಡ ಜಿಲ್ಲೆಯ ಕಲೆ, ಸಂಸ್ಕೃತಿ, ಸಾಹಿತ್ಯಗಳನ್ನು ರಾಜ್ಯಕ್ಕೆ ಪರಿಚಯಿಸುವ ಈ ಬಾರಿಯ 2016ರ ಕರಾವಳಿ ಉತ್ಸವಕ್ಕೆ ಶುಕ್ರವಾರ ಚಾಲನೆ ಸಿಕ್ಕಿದೆ. ಡಿಸೆಂಬರ್ 23ರಂದು ಉತ್ಸವ ಆರಂಭಗೊಂಡಿದ್ದು, ಜನವರಿ 1ರ ತನಕ ನಡೆಯಲಿದೆ.
ಕರಾವಳಿಯನ್ನು ಪ್ರತಿಬಿಂಬಿಸುವ ಎಲ್ಲ ಭಾಷೆ, ಧರ್ಮ, ಜೀವನ ಸಂಸ್ಕೃತಿ, ಜನಪದ, ಯಕ್ಷಗಾನ ಇತ್ಯಾದಿ ಪ್ರಕಾರದ ಸುಮಾರು 70ಕ್ಕೂ ಹೆಚ್ಚು ತಂಡಗಳ ಸಾಂಸ್ಕೃತಿಕ ಮೆರವಣಿಗೆ - ದಿಬ್ಬಣ ಹಾಗೂ ವಸ್ತು ಪ್ರದರ್ಶನದೊಂದಿಗೆ ಕರಾವಳಿ ಉತ್ಸವ ಮೈದಾನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ರಮಾನಾಥ ರೈ ಚಾಲನೆ ನೀಡಿದರು.
ಸಾಂಸ್ಕೃತಿಕ ಮೆರವಣಿಗೆ ನಗರದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ಕದ್ರಿ ಉದ್ಯಾನವನದ ಒಳಗಡೆ ಇರುವ ಕರಾವಳಿ ಉತ್ಸವ ವೇದಿಕೆ ತಲುಪಿತು.
ಮೆರವಣಿಗೆಯಲ್ಲಿ ಮಂಗಳವಾದ್ಯ, ತಟ್ಟಿರಾಯ, ಪಕ್ಕಿನಿಶಾನೆ, ಕೊಂಬು, ಚೆಂಡೆ, ರಣಕಹಳೆ, ಜಿಲ್ಲಾ ಪೊಲೀಸ್ ಬ್ಯಾಂಡ್, ಬಣ್ಣದ ಕೊಡೆಗಳು, ಬಸವ ತಂಡ, ಶಂಖದಾಸರು, ಕನ್ನಡ ಭುವೇಶ್ವರಿ ಸ್ತಬ್ಧ ಚಿತ್ರ, ಕೀಲು ಕುದುರೆ, ಕರಗ, ಕುಸ್ತಿಪಟುಗಳ ತಂಡ, ಹಾಸ್ಯಗೊಂಬೆ ತಂಡ, ದಪ್ಪು, ಅರೆಭಾಷೆ ಜನರ ಕುದುರೆ ಸವಾರಿ, ಒಪ್ಪಣಿ ತಂಡ, ಕೋಲ್ಕಳಿ, ಕೊಡವ ನೃತ್ಯ, ತಾಲೀಮು, ಮರಕಾಲು ಹುಲಿವೇಷ, ಕರಡಿ ಕುಣಿತ, ಆಟಿಕಳಂಜ, ಛತ್ರ ಕುಣಿತ ಇತ್ಯಾದಿ ಕಲಾತಂಡಗಳಿಂದ ಸಾಂಸ್ಕೃತಿಕ ಕಲಾ ಪ್ರದರ್ಶನಗೊಂಡಿತು.
ಈ ಸಂದರ್ಭ ಮೇಯರ್ ಹರಿನಾಥ್, ಮುಡಾ ಅಧ್ಯಕ್ಷ ಸುರೇಶ್ ಬಲ್ಲಾಳ್, ಬ್ಯಾರಿ ಅಕಾಡಮಿಯ ಅಧ್ಯಕ್ಷ ಬಿ.ಎ.ಮುಹಮ್ಮದ್ ಹನೀಫ್, ರಾಜ್ಯ ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷ ಬಿ.ಎಚ್.ಖಾದರ್, ಮಾಜಿ ಮೇಯರ್ ಶಶಿಧರ ಹೆಗ್ಡೆ, ಜಿಲ್ಲಾ ಕರಾವಳಿ ಉತ್ಸವ ಮೆರವಣಿಗೆ ಸಮಿತಿಯ ಅಧ್ಯಕ್ಷ ಎಸ್. ಪ್ರದೀಪ ಕುಮಾರ ಕಲ್ಕೂರ ಮತ್ತಿತರರು ಉಪಸ್ಥಿತರಿದ್ದರು