ಡಿಸೆಂಬರ್ 23ರಿಂದ ಕರಾವಳಿ ಉತ್ಸವದ ಸಡಗರ
ಮಂಗಳೂರು, ಡಿಸೆಂಬರ್ 17 : 2016-17ನೇ ಸಾಲಿನ ದಕ್ಷಿಣ ಕನ್ನಡ ಜಿಲ್ಲಾ ಕರಾವಳಿ ಉತ್ಸವ ಇದೇ ಡಿಸೆಂಬರ್ 23ರಿಂದ ಬರುವ ಜನವರಿ 1ರವರೆಗೆ ನಡೆಯಲಿದೆ. ಈ ಬಾರಿಯ ಕರಾವಳಿ ಉತ್ಸವವನ್ನು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳ ಮೂಲಕ ಸಡಗರದಿಂದ ಆಚರಿಸಲು ಜಿಲ್ಲಾ ಕರಾವಳಿ ಉತ್ಸವ ಸಮಿತಿ ತೀರ್ಮಾನಿಸಿದೆ.
ಕರಾವಳಿ ಉತ್ಸವವನ್ನು ಕರಾವಳಿ ಉತ್ಸವ ಮೈದಾನ, ಕದ್ರಿ ಉದ್ಯಾನವನ, ಪಣಂಬೂರು ಕಡಲ ತೀರದಲ್ಲಿ ಏರ್ಪಡಿಸಲಾಗಿದೆ. ಡಿಸೆಂಬರ್ 23ರ ಶುಕ್ರವಾರ ಸಂಜೆ 4 ಗಂಟೆಗೆ ಕರಾವಳಿ ಉತ್ಸವದ ಅಂಗವಾಗಿ ವಸ್ತು ಪ್ರದರ್ಶನವನ್ನು ಆಯೋಜಿಸಲಾಗಿದೆ. ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಸಚಿವ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ವಸ್ತು ಪ್ರದರ್ಶನ ಉದ್ಫಾಟಿಸಲಿದ್ದಾರೆ.
ಸಂಜೆ 4.30ಕ್ಕೆ ಕರಾವಳಿ ಉತ್ಸವ ಮೈದಾನದಿಂದ ಕದ್ರಿ ಉದ್ಯಾನವನದವರೆಗೆ ಕರಾವಳಿ ಉತ್ಸವದ ಮೆರವಣಿಗೆ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಆಹಾರ ಮತ್ತು ನಾಗರೀಕ ಸರಬರಾಜು ಗ್ರಾಹಕರ ವ್ಯವಹಾರಗಳ ಸಚಿವ ಯು.ಟಿ ಖಾದರ್ ಮೆರವಣಿಗೆಯನ್ನು ಉದ್ಫಾಟಿಸಲಿದ್ದಾರೆ.[ಡಿ.17ರಂದು ಕಟೀಲು ಮೇಳದಿಂದ 50ನೇ ಸೇವಾ ಬಯಲಾಟ]
ಸಂಜೆ ಆರು ಗಂಟೆಗೆ ಕದ್ರಿ ಉದ್ಯಾನವನದಲ್ಲಿ ಪದ್ಮಶ್ರೀ ಪುರಸ್ಕೃತ, ಅಂತಾರಾಷ್ಟ್ರೀಯ ಖ್ಯಾತಿಯ ಸಂಗೀತ ಕಲಾವಿದ ಡಾ. ಕದ್ರಿ ಗೋಪಾಲನಾಥ್ ಕರಾವಳಿ ಉತ್ಸವನ್ನು ಉದ್ಘಾಟಿಸಲಿದ್ದಾರೆ. ಡಿಸೆಂಬರ್ 23ರಿಂದ ಜನವರಿ 1ರವರೆಗೆ ಕರಾವಳಿ ಉತ್ಸವದ ಅಂಗವಾಗಿ ಕರಾವಳಿ ಉತ್ಸವ ಮೈದಾನ ಹಾಗೂ ಕದ್ರಿ ಉದ್ಯಾನವನದಲ್ಲಿ ಸಂಜೆ 6 ಗಂಟೆಗೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನ ಆಯೋಜಿಸಲಾಗಿದೆ.
ವಿಶೇಷ ಯುವ ಉತ್ಸವ : ಈ ಬಾರಿ ವಿಶೇಷವಾಗಿ 'ಯುವ ಉತ್ಸವ'ವನ್ನು ಆಯೋಜಿಸಲಾಗಿದೆ. ಡಿಸೆಂಬರ್ 29ರಿಂದ ಯುವ ಉತ್ಸವ ನಡೆಯಲಿದೆ. ಕದ್ರಿ ಉದ್ಯಾನವನದಲ್ಲಿ ಸಂಜೆ 5 ಗಂಟೆಯಿಂದ ಜಿಲ್ಲೆಯ ವಿವಿಧ ಕಾಲೇಜು ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ.[ಡಿಸೆಂಬರ್ 24, 25ರಂದು ಮಂಗಳೂರಲ್ಲಿ 'ಜನನುಡಿ' ಸಾಹಿತ್ಯ ಸಮಾವೇಶ]
ಕ್ರೀಡಾ ಉತ್ಸವ : ಕ್ರೀಡಾ ಪಂದ್ಯಾಟಗಳನ್ನು ಸಹ ಆಯೋಜಿಸಲಾಗಿದ್ದು, ಡಿಸೆಂಬರ್ 24ರಂದು ಬೆಳಗ್ಗೆ 9.30ಕ್ಕೆ ಮಂಗಳಾ ಕ್ರೀಡಾಂಗಣದಲ್ಲಿ ಪ್ರೌಢ ಮತ್ತು ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ವಾಲಿಬಾಲ್ ಪಂದ್ಯಾಟವನ್ನು ಆಯೋಜಿಸಲಾಗಿದೆ.
ಡಿಸೆಂಬರ್ 31ರ ಬೆಳಿಗ್ಗೆ 10ಕ್ಕೆ ಕರಾವಳಿ ಮೈದಾನದಲ್ಲಿ ಜಿಲ್ಲಾ ಮಟ್ಟದ ಪುರುಷರ ಮುಕ್ತ ಹಾಕಿ ಪಂದ್ಯಾಟ ನಡೆಯಲಿದೆ. ಜನವರಿ ಒಂದರ ಬೆಳಗ್ಗೆ 9ಕ್ಕೆ ಲೇಡಿಹಿಲ್ ನಲ್ಲಿರುವ ಮಹಾನಗರ ಪಾಲಿಕೆ ಈಜುಕೊಳದಲ್ಲಿ ಜಿಲ್ಲಾ ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಈಜು ಸ್ಪರ್ಧೆ ನಡೆಯಲಿದೆ.
ಡಿಸೆಂಬರ್ 30, 31 ಹಾಗೂ ಜನವರಿ 1ರಂದು ಪಣಂಬೂರು ಕಡಲ ಕಿನಾರೆಯಲ್ಲಿ ಬೀಚ್ ಉತ್ಸವವನ್ನು ಆಯೋಜಿಸಲಾಗಿದೆ. ಬೆಳಿಗ್ಗೆ ವಿವಿಧ ಕ್ರೀಡಾ ಪಂದ್ಯಾಟಗಳು ಜರುಗಲಿವೆ. ಸಾಯಂಕಾಲ ಆಹಾರೋತ್ಸವ ಹಾಗೂ ವಿಶೇಷ ಸಾಂಸ್ಕೃತಿಕ ಕಾರ್ಯಕ್ರಮಗಳು, ಗಾಳಿಪಟ ಸ್ಪರ್ಧೆ ಸೇರಿದಂತೆ ಇನ್ನಿತರ ಕಾರ್ಯಕ್ರಮಗಳು ನಡೆಯಲಿವೆ.
ತಾಲೂಕು ಮಟ್ಟದಲ್ಲಿ ಉತ್ಸವ : ಈ ಬಾರಿ ವಿಶೇಷವಾಗಿ ತಾಲೂಕು ಮಟ್ಟದ ಕರಾವಳಿ ಉತ್ಸವವನ್ನ ಆಯೋಜಿಸಲಾಗಿದೆ. ಡಿಸೆಂಬರ್ 19ರಂದು ಬಂಟ್ವಾಳ ತಾಲೂಕಿನಲ್ಲಿ ಹಾಗೂ 18ರಂದು ಸುಳ್ಯ, ಬೆಳ್ತಂಗಡಿ, ಪುತ್ತೂರು ತಾಲೂಕಿನಲ್ಲಿ ಕರಾವಳಿ ಉತ್ಸವವನ್ನ ಆಯೋಜಿಸಲಾಗಿದೆ.
ಜನವರಿ 1ರಂದು ಭಾನುವಾರ ಸಂಜೆ 6 ಗಂಟೆಗೆ ಪಣಂಬೂರು ಕಡಲ ತೀರದಲ್ಲಿ ಕರಾವಳಿ ಉತ್ಸವದ ಸಮಾರೋಪ ಸಮಾರಂಭ ಹಾಗೂ ಕರಾವಳಿ ಗೌರವ ಪ್ರಶಸ್ತಿ ಪ್ರಧಾನ ಸಮಾರಂಭ ನಡೆಯಲಿದೆ. ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಸಚಿವ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ಕರಾವಳಿ ಉತ್ಸವದ ಸಮಾರೋಪ ಸಮಾರಂಭ ಹಾಗೂ ಕರಾವಳಿ ಗೌರವ ಪ್ರಶಸ್ತಿ ಪ್ರಧಾನ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ.