ಪ್ರಧಾನಿಗೆ ಬಲೂಚಿಸ್ತಾನ ಬಗ್ಗೆ ಇರುವಷ್ಟು ಕಾಳಜಿ ಕಾವೇರಿ ಬಗೆಗಿಲ್ಲ
ಮಂಗಳೂರು, ಸೆಪ್ಟೆಂಬರ್ 21: ಬಲೂಚಿಸ್ತಾನದ ಬಗ್ಗೆ ಕಾಳಜಿ ತೋರುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರು, ಕಾವೇರಿ ನದಿ ನೀರಿನ ವಿವಾದದಲ್ಲಿ ತೋರುತ್ತಿಲ್ಲ. ಸಮಸ್ಯೆ ಪರಿಹರಿಸಲು ಮಧ್ಯಪ್ರವೇಶ ಮಾಡದೆ ಕರ್ನಾಟಕದ ಜನತೆಗೆ ಅವಮಾನ ಮಾಡುತ್ತಿದ್ದಾರೆ ಎಂದು ಸಚಿವ ಯು. ಟಿ. ಖಾದರ್ ಆರೋಪಿಸಿದ್ದಾರೆ.
'ನದಿ ನೀರಿನ ಹಂಚಿಕೆ ವಿಷಯದಲ್ಲಿ ಕರ್ನಾಟಕಕ್ಕೆ ಇಷ್ಟೊಂದು ಅನ್ಯಾಯ ಆಗುತ್ತಿದ್ದರೂ ಪ್ರಧಾನಿಯವರು ರಾಜ್ಯದ ನೆರವಿಗೆ ಬಾರದೆ ನಿರ್ಲಕ್ಷ್ಯ ತೋರುತ್ತಿದ್ದಾರೆ' ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.[ತಮಿಳುನಾಡಿಗೆ ಕಾವೇರಿ ನೀರು ಹರಿಸದಿರಲು ಕರ್ನಾಟಕ ನಿರ್ಧಾರ?]
ಕಾವೇರಿ ನದಿ ನೀರು ಹಂಚಿಕೆ ಬಗ್ಗೆ ಸುಪ್ರೀಂ ಕೋರ್ಟ್ ನೀಡಿದ ತೀರ್ಪು ದುರದೃಷ್ಟಕರ. ಈ ವಿಚಾರದಲ್ಲಿ ರಾಜ್ಯಕ್ಕೆ ಪದೇ ಪದೇ ಅನ್ಯಾಯವಾಗುತ್ತಿದೆ. ಕರ್ನಾಟಕ ಮತ್ತು ತಮಿಳುನಾಡು ರಾಜ್ಯಗಳ ನಡುವೆ ನೀರಿನ ಹಂಚಿಕೆ ಸಮಸ್ಯೆ ಬಗೆಹರಿದಿಲ್ಲ. ಈ ಮಧ್ಯೆ ಕಾವೇರಿ ನದಿ ನೀರು ನಿರ್ವಹಣಾ ಸಮಿತಿ ರಚನೆಗೆ ಆದೇಶಿಸಿರುವುದು ಆಶ್ಚರ್ಯ ಉಂಟು ಮಾಡಿದೆ ಎಂದಿದ್ದಾರೆ.
ಸುಪ್ರೀಂ ಕೋರ್ಟ್ನ ಈ ಆದೇಶ ಎರಡು ರಾಜ್ಯಗಳ ನಡುವಿನ ನೀರಿನ ಸಮಸ್ಯೆಗೆ ಪರಿಹಾರ ಒದಗಿಸುವ ಬದಲಿಗೆ ಸಮಸ್ಯೆಗಳನ್ನು ಮತ್ತಷ್ಟು ಜಟಿಲವಾಗಿಸಿದೆ. ಸುಪ್ರೀಂ ಕೋರ್ಟ್ ಕಾವೇರಿ ವಿವಾದದ ಬಗ್ಗೆ ತೀರ್ಪು ಕೊಟ್ಟಿದೆಯೇ ಹೊರತು ನ್ಯಾಯ ಕೊಟ್ಟಿಲ್ಲ ಎಂದು ಪ್ರತಿಕ್ರಿಯಿಸಿದ್ದಾರೆ.[ಸರ್ವಪಕ್ಷ ಸಭೆಗೆ ಬಿಜೆಪಿಯಿಂದ ಯಾರೂ ಹೋಗುತ್ತಿಲ್ಲ!]
ಕಾವೇರಿ ನದಿ ನೀರಿನ ವಿವಾದದ ಕುರಿತು ಪ್ರಧಾನಿ ಭೇಟಿಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಒಂದು ವಾರದಿಂದ ಪ್ರಯತ್ನಿಸುತ್ತಿದ್ದಾರೆ. ಆದರೆ ಭೇಟಿಗೆ ಸಮಯ ನಿಗದಿ ಮಾಡುತ್ತಿಲ್ಲ. ಇದು ಪ್ರಧಾನಿ ಕಚೇರಿಯು ರಾಜ್ಯದ ಜನತೆಗೆ ಮಾಡುವ ಅವಮಾನ. ರಾಜ್ಯದ ಎಲ್ಲ ಸಂಸದರು ಒಟ್ಟಾಗಿ ಪ್ರಧಾನೀಯವರನ್ನು ಭೇಟಿಯಾಗಿ, ಕಾವೇರಿ ನದಿ ನೀರು ಹಂಚಿಕೆ ವಿಷಯದಲ್ಲಿ ಮಧ್ಯ ಪ್ರವೇಶಿಸಲು ಒತ್ತಡ ಹೇರಬೇಕು ಎಂದು ಮನವಿ ಮಾಡಿದ್ದಾರೆ.