ಎತ್ತಿನಹೊಳೆ ಯೋಜನೆ ಬಗ್ಗೆ ಆತಂಕ ಬೇಡ : ಸಿದ್ದರಾಮಯ್ಯ
ಮಂಗಳೂರು, ಏಪ್ರಿಲ್ 21 : 'ಎತ್ತಿನಹೊಳೆ ಕುಡಿಯುವ ನೀರಿನ ಯೋಜನೆ ವಿಚಾರದಲ್ಲಿ ಆತಂಕಬೇಡ, ಈ ಯೋಜನೆ ಬಗ್ಗೆ ಜನರಲ್ಲಿ ತಪ್ಪು ಗ್ರಹಿಕೆ ಇದೆ, ನೇತ್ರಾವತಿ ನದಿ ದಿಕ್ಕುಬದಲಿಸುತ್ತಿಲ್ಲ, ಎತ್ತಿನ ಹೊಳೆ ಯೋಜನೆಗೂ ನದಿ ತಿರುವಿಗೂ ಯಾವುದೇ ಸಂಬಂಧವಿಲ್ಲ' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಗುರುವಾರ ಮಂಗಳೂರು ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಮುಖ್ಯಮಂತ್ರಿಗಳು,'ಎತ್ತಿನ ಹೊಳೆ ಯೋಜನೆಯನ್ನು ಆದಷ್ಟು ಬೇಗ ಮುಗಿಸುತ್ತೇವೆ. ಮಳೆಗಾಲದಲ್ಲಿ ಪ್ರವಾಹ ಬಂದಾಗ ಮಾತ್ರ ನೀರು ತಗೆದುಕೊಂಡು ಹೋಗಲಾಗುತ್ತದೆ. ಹೋರಾಟಗಾರರಿಗೆ ಯೋಜನೆ ಬಗ್ಗೆ ಸರಿಯಾದ ಮಾಹಿತಿ ಇಲ್ಲ' ಎಂದರು. ['ಎತ್ತು' ಏರಿಗೆ 'ಹೊಳೆ' ನೀರಿಗೆ ಇದೇ ಎತ್ತಿನಹೊಳೆ ಯೋಜನೆ]
'ಈ ಯೋಜನೆಯಿಂದ 24.01 ಟಿಎಂಸಿ ನೀರು ದೊರೆಯಲಿದೆ. ನೀರಿನ ಲಭ್ಯತೆಯ ಬಗ್ಗೆ ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ. ವಿವಿಧ ಮೂಲಗಳಿಂದ ವೈಜ್ಞಾನಿಕವಾಗಿ ಸಮೀಕ್ಷೆ ಮಾಡಿಸಿ ಸರ್ಕಾರ ನೀರಿನ ಲಭ್ಯತೆಯ ಬಗ್ಗೆ ಖಚಿತಪಡಿಸಿಕೊಂಡಿದೆ' ಎಂದು ಸಿದ್ದರಾಮಯ್ಯ ತಿಳಿಸಿದರು. [ಎತ್ತಿನಹೊಳೆ ಯೋಜನೆ ನೀರಿನ ಲಭ್ಯತೆ ಬಗ್ಗೆ ಆತಂಕ ಬೇಡ]
ಕುಡಿಯುವ ನೀರಿನ ಕೊರತೆ ಇಲ್ಲ : ರಾಜ್ಯದಲ್ಲಿನ ಬರಪರಿಸ್ಥಿತಿ ಬಗ್ಗೆ ಮಾತನಾಡಿದ ಸಿದ್ದರಾಮಯ್ಯ ಅವರು, 'ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲಾಗುತ್ತದೆ. ಕುಡಿಯುವ ನೀರಿಗೆ ಯಾವುದೇ ಕೊರತೆ ಇಲ್ಲದ ಹಾಗೆ ನೋಡಿಕೊಳ್ಳಲಾಗುವುದು' ಎಂದು ಹೇಳಿದರು. [ಎತ್ತಿನಹೊಳೆ ಯೋಜನೆ : ಸರ್ಕಾರದ ಸ್ಪಷ್ಟನೆಗಳು]
ಈ ವೇಳೆ ಸಚಿವರಾದ ರಮಾನಾಥ್ ರೈ, ಯು.ಟಿ.ಖಾದರ್, ವಿನಯ್ ಕುಮಾರ್ ಸೊರಕೆ, ಅಭಯಚಂದ್ರ ಜೈನ್, ಶಾಸಕರಾದ ಜೆ.ಆರ್.ಲೋಬೋ, ಮೊಯಿದ್ದೀನ್ ಬಾಬಾ, ಮೇಯರ್ ಹರಿನಾಥ್ ಬೋಂದೇಲ್ ಮುಂತಾದವರು ಉಪಸ್ಥಿತರಿದ್ದರು.