ಪರಿಶಿಷ್ಟರು ಸ್ವಯಂ ಉದ್ಯೋಗಿಗಳಾಗಬೇಕು: ಸಂಸದ ಧ್ರುವನಾರಾಯಣ್ ಕರೆ
ಮೈಸೂರು, ಜನವರಿ 27 : ಪರಿಶಿಷ್ಟ ಜಾತಿ, ಪಂಗಡಗಳ ವಿದ್ಯಾವಂತ ಯುವಕರು ಖಾಸಗಿ, ಸರ್ಕಾರಿ ಉದ್ಯೋಗಗಳಿಗೆ ಕಾಯದೆ ಸ್ವಯಂ ಉದ್ಯೋಗ ಕೈಗೊಂಡು ದೇಶದ ಅಭಿವೃದ್ಧಿಗೆ ಕಾರಣರಾಗಬೇಕು ಎಂದು ಸಂಸದ ಧ್ರುವನಾರಾಯಣ್ ಕರೆ ನೀಡಿದರು.
ಶುಕ್ರವಾರ ಮೈಸೂರಿನ ರಾಣಿ ಬಹುದ್ದೂರ್ ಸಭಾಂಗಣದಲ್ಲಿ ಭಾರತ ಸರ್ಕಾರದ ಎಂಎಸ್ಎಂಇ ಮಂತ್ರಾಲಯ, ರಾಷ್ಟ್ರೀಯ ಸಣ್ಣ ಕೈಗಾರಿಕೆಗಳ ನಿಗಮ, ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ, ಜಿಲ್ಲಾ ಕೈಗಾರಿಕೆ ಕೇಂದ್ರ, ಭಾರತೀಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ಬ್ಯಾಂಕ್, ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳ ಪರಿಷತ್ತು ಹಾಗೂ ಮೈಸೂರು ಕೈಗಾರಿಕೆಗಳ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಉದ್ಯಮಿಗಳಿಗೆ ದೊರೆಯುವ ಪ್ರೋತ್ಸಾಹ, ರಿಯಾಯಿತಿ ಹಾಗೂ ರಾಷ್ಟ್ರೀಯ ಎನ್ಎಸ್ಐಸಿ, ಎಸ್ಸಿ, ಎಸ್ಟಿ ಹಬ್ ಯೋಜನೆಗಳ ಅರಿವು ಮೂಡಿಸುವ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಮೈಸೂರು, ಮಂಡ್ಯ, ಚಾಮರಾಜನಗರ ಭಾಗದಲ್ಲಿ ದಲಿತ ವಿದ್ಯಾವಂತರ ಸಂಖ್ಯೆ ಹೆಚ್ಚಿದೆ. ಆದರೆ ಎಲ್ಲರೂ ಸರ್ಕಾರಿ ಉದ್ಯೋಗದ ಆಕಾಂಕ್ಷಿಗಳಾಗಿದ್ದು, ಸ್ವಯಂ ಉದ್ಯೋಗ ಮಾಡುವವರ ಸಂಖ್ಯೆ ತೀರಾ ಕಡಿಮೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಪರಶಿಷ್ಟ ಜಾತಿ, ಪಂಗಡಗಳ ಅಭಿವೃದ್ಧಿಗೆ ಅನೇಕ ಯೋಜನೆಗಳನ್ನು ಜಾರಿಗೆ ತಂದಿದ್ದು, ಹತ್ತು ಹಲವು ಸಬ್ಸಿಡಿಗಳನ್ನು ನೀಡುತ್ತಿದೆ. ಯುವಕರು ಇದರ ಸದುಪಯೋಗಪಡೆದುಕೊಂಡು ನೂರಾರು ಜನಕ್ಕೆ ಉದ್ಯೋಗ ನೀಡುವ ಉದ್ಯೋಗದಾತರಾಗಿ ಎಂದು ಸಲಹೆ ನೀಡಿದರು.
ಜನಸಂಖ್ಯೆಗೆ ಅನುಗುಣವಾಗಿ ಅನುದಾನ ಮೀಸಲಿಡುವ ರಾಜ್ಯಗಳಲ್ಲಿ ಆಂಧ್ರಪ್ರದೇಶ ಹಾಗೂ ತೆಲಂಗಾಣದ ನಂತರದ ಸ್ಥಾನದಲ್ಲಿ ಕರ್ನಾಟಕ ಸ್ಥಾನ ಪಡೆದುಕೊಂಡಿದೆ. ಹಿಂದುಳಿದವರಿಗೆ 19,600 ಕೋಟಿ ಅನುದಾನ ಮೀಸಲಿಟ್ಟಿದೆ. ಕೈಗಾರಿಕೆ ಆರಂಭಿಸಲು ಬಯಸುವವರಿಗೆ ನಿವೇಶನ ಕೊಂಡುಕೊಳ್ಳಲು ಶೇ.50ರಷ್ಟು ಸಬ್ಸಿಡಿ ನೀಡುತ್ತಿದ್ದು, ಇದು ದೇಶದಲ್ಲೇ ಮೊದಲು. ಅಲ್ಲದೆ ಚಾಮರಾಜನಗರದಲ್ಲಿ 2500 ಎಕರೆ ಪ್ರದೇಶದಲ್ಲಿ ಕೈಗಾರಿಕೆ ಆರಂಭಿಸಲಾಗುತ್ತಿದೆ. ಜತೆಗೆ ಮುದ್ರಾ ಯೋಜನೆ ಸೇರಿದಂತೆ ಅನೇಕ ಯೋಜನೆಗಳನ್ನು ಸರ್ಕಾರ ಜಾರಿಗೆ ತಂದಿದೆ. ಹಾಗಾಗಿ ಸರ್ಕಾರಿ ಉದ್ಯೋಗದ ಆಸೆ ಬಿಟ್ಟು ಸ್ವಯಂ ಉದ್ಯೋಗ ಕೈಗೊಳ್ಳಿ ಎಂದು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಶಾಸಕ ವಾಸು, ಜಿಲ್ಲಾಧಿಕಾರಿ ಡಿ.ರಂದೀಪ್, ಕರ್ನಾಟಕ ರಾಜ್ಯ ಎಸ್ಸಿ, ಎಸ್ಟಿ ಉದ್ದಿಮೆದಾರರ ಸಂಘದ ಕಾರ್ಯದರ್ಶಿ ಸಿ.ಜಿ.ಶ್ರೀನಿವಾಸನ್, ಕೆಐಎಡಿಬಿ ಮುಖ್ಯ ಅಭಿವೃದ್ಧಿ ಅಧಿಕಾರಿ ಟಿ.ಆರ್.ಸ್ವಾಮಿ, ಕರ್ನಾಟಕ ವೃತ್ತಿಪರ ತರಬೇತಿ ಮತ್ತು ಕೌಶಲ್ಯಾಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷೆ ಎ.ಎಲ್.ಪುಷ್ಪ, ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಹೆಚ್.ರಾಮಕೃಷ್ಣೇಗೌಡ, ಉಪಾಧ್ಯಕ್ಷ ಉಮೇಶ್ ಶೆಣೈ, ಕಾರ್ಯದರ್ಶಿ ಸುರೇಶ್ ಕುಮಾರ್ ಜೈನ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.