ಜಲ್ಲಿಕಟ್ಟು ಕ್ರೀಡೆಗಾಗಿ ಮೈಸೂರಿನಲ್ಲಿ ತಮಿಳರ ಪ್ರತಿಭಟನೆ
ಮೈಸೂರು, ಜನವರಿ 20: ತಮಿಳುನಾಡಿನ ಸಾಂಪ್ರದಾಯಿಕ ಕ್ರೀಡೆ ಜಲ್ಲಿಕಟ್ಟುಗೆ ಅವಕಾಶ ನೀಡಬೇಕೆಂದು ಒತ್ತಾಯಿಸಿ ಮೈಸೂರಿಲ್ಲಿ ತಮಿಳು ಮೂಲದ ಐಟಿ, ಬಿಟಿ ಉದ್ಯೋಗಿಗಳು ಶುಕ್ರವಾರ ಪ್ರತಿಭಟನೆ ನಡೆಸಿದರು.
ಮೈಸೂರು ಜಿಲ್ಲಾಧಿಕಾರಿ ಕಚೇರಿ ಎದುರು ನಡೆದ ಧರಣಿಯಲ್ಲಿ ಪಾಲ್ಗೊಂಡ ಪ್ರತಿಭಟನಾಕಾರರು ಮಾತನಾಡಿ ಜಲ್ಲಿಕಟ್ಟುಕ್ರೀಡೆಗೆ ಅವಕಾಶ ನೀಡುವ ಮೂಲಕ ಅದರ ಆಚರಣೆಗೆ ಸುಗ್ರೀವಾಜ್ಞೆ ಹೊರಡಿಸಬೇಕೆಂದು ಒತ್ತಾಯಿಸಿದರು. ತಮಿಳುನಾಡು ಮುಖ್ಯಮಂತ್ರಿ ಪನ್ನೀರ್ ಸೆಲ್ವಂ ಸುಗ್ರೀವಾಜ್ಞೆ ಹೊರಡಿಸುವ ಮೂಲಕ ಜಲ್ಲಿಕಟ್ಟು ಕ್ರೀಡೆಯ ಮೇಲಿನ ಸುಪ್ರೀಂ ನಿಷೇಧವನ್ನು ತೆರವುಗೊಳಿಸಬೇಕು ಎಂದು ಆಗ್ರಹಿಸಿದರು.
ಈ ಕುರಿತು ಮೈಸೂರು ಜಿಲ್ಲಾಧಿಕಾರಿ ಡಿ.ರಂದೀಪ್ ಮನವಿ ಸಲ್ಲಿಸಿದರು. ಪ್ರತಿಭಟನೆಯಲ್ಲಿ ತಮಿಳುನಾಡು ಮೂಲದ ನೂರಾರು ಉದ್ಯೋಗಿಗಳು ಪಾಲ್ಗೊಂಡಿದ್ದರು.[ಜಲ್ಲಿಕಟ್ಟು ಅಖಾಡಕ್ಕೆ ಸೂಪರ್ ಸ್ಟಾರ್ ರಜನೀಕಾಂತ್ ಎಂಟ್ರಿ]
ಅಭಿಷೇಕ್ ಆತ್ಮಹತ್ಯೆ ಪ್ರಕರಣ: ಕಾಣದ ಕೈಗಳನ್ನು ಬಂಧಿಸಲು ಒತ್ತಾಯ
ಮೈಸೂರು: ಶೃಂಗೇರಿಯಲ್ಲಿ ನಡೆದ ಅಭಿಷೇಕ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧ, ಅದರ ಹಿಂದಿರುವ ಕಾಣದ ಕೈಗಳನ್ನು ಪೊಲೀಸರು ವಶಕ್ಕೆ ಪಡೆದು ಅವರನ್ನು ಬಂಧಿಸಬೇಕು ಎಂದು ಒತ್ತಾಯಿಸಿ ಮೈಸೂರು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ಪ್ರತಿಭಟನಾ ಮೆರವಣಿಗೆ ಜರುಗಿತು.
ಪೊಲೀಸರು ಕ್ಷುಲ್ಲಕ ಕಾರಣಕ್ಕಾಗಿ ಪೊಲೀಸರು ಅಭಿಷೇಕ್ ಮೇಲೆ ಎಫ್ಐಆರ್ ದಾಖಲಿಸಿದ್ದರು. ಇದರಿಂದ ಮನನೊಂದ ಅಭಿಷೇಕ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಇದರ ಹಿಂದೆ ಕಾಣದ ವ್ಯಕ್ತಿಗಳ ಕೈವಾಡವಿದೆ. ಅವರು ಎಷ್ಟೇ ಬಲಿಷ್ಠರಾಗಿದ್ದರೂ, ಅವರನ್ನು ಬಂಧಿಸಿ, ನಿಷ್ಪಕ್ಷಪಾತ ತನಿಖೆ ನಡೆಸಿ ಎಂದು ಪರಿಷತ್ ಸಂಚಾಲಕ ರಾಕೇಶ್ ತಿಳಿಸಿದರು.
ಪ್ರತಿಭಟನೆಯಲ್ಲಿ ೩೦೦ ಕ್ಕೂ ಹೆಚ್ಚು ವಿದ್ಯಾರ್ಥಿಗಳ ಪಾಲ್ಗೊಂಡಿದ್ದು, ಮೆರವಣಿಗೆಯು ಮಹಾರಾಣಿ ಜೂನಿಯರ್ ಕಾಲೇಜಿನಿಂದ ಹೊರಟು, ಜೆ.ಎಲ್.ಬಿ.ರಸ್ತೆ, ಹುಣಸೂರು ರಸ್ತೆ ಮೂಲಕ ಸಾಗಿ ಮೈಸೂರು ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಮನವಿ ಸಲ್ಲಿಸಿದರು.