ಪಕ್ಷದ ಸಂಘಟನೆಯೇ ನನ್ನ ಗುರಿ : ಶ್ರೀನಿವಾಸ್ ಪ್ರಸಾದ್
ನನ್ನ ಮೇಲೆ ನಂಬಿಕೆಯಿಟ್ಟು ಪಕ್ಷ ನೀಡಿರುವ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸಿ ಪಕ್ಷವನ್ನು ತಳಮಟ್ಟದಿಂದ ಸಂಘಟಿಸಲು ಮುಂದಾಗುತ್ತೇನೆ ಎಂದು ರಾಜ್ಯ ಬಿಜೆಪಿ ನೂತನ ಉಪಾಧ್ಯಕ್ಷ ವಿ.ಶ್ರೀನಿವಾಸಪ್ರಸಾದ್ ತಿಳಿಸಿದರು.
ಮೈಸೂರು, ಮೇ 4 : ನನ್ನ ಮೇಲೆ ನಂಬಿಕೆಯಿಟ್ಟು ಪಕ್ಷ ನೀಡಿರುವ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸಿ ಪಕ್ಷವನ್ನು ತಳಮಟ್ಟದಿಂದ ಸಂಘಟಿಸಲು ಮುಂದಾಗುತ್ತೇನೆ ಎಂದು ರಾಜ್ಯ ಬಿಜೆಪಿ ನೂತನ ಉಪಾಧ್ಯಕ್ಷ ವಿ.ಶ್ರೀನಿವಾಸಪ್ರಸಾದ್ ತಿಳಿಸಿದರು.
ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಹಾಗೂ ಹೈಕಮಾಂಡ್ ನನ್ನ ಮೇಲೆ ನಂಬಿಕೆಯಿಟ್ಟು ಉಪಾಧ್ಯಕ್ಷ ಸ್ಥಾನ ನೀಡಿದೆ. ಆ ಸ್ಥಾನಕ್ಕೆ ಧಕ್ಕೆ ಬಾರದ ರೀತಿಯಲ್ಲಿ ಕಾರ್ಯನಿರ್ವಹಿಸುತ್ತೇನೆ. ಪಕ್ಷದಲ್ಲಿ ಯುವಕರ ಸಂಖ್ಯೆ ಸಾಕಷ್ಟಿದ್ದು, ಅವರಿಗೆ ಸೂಕ್ತ ಮಾರ್ಗದರ್ಶನ ನೀಡುವ ಮೂಲಕ 2018ರ ಚುನಾವಣೆಗೆ ಪಕ್ಷವನ್ನು ಬಲಪಡಿಸುತ್ತೇನೆ ಎಂದು ಹೇಳಿದರು.[ಈಶ್ವರಪ್ಪಗೆ ಟಾಂಗ್, ಶ್ರೀನಿವಾಸ್ ಪ್ರಸಾದ್ ಗೆ ಉಪಾಧ್ಯಕ್ಷ ಪಟ್ಟ ಕಟ್ಟಿದ ಬಿಎಸ್ವೈ]
ನಂಜನಗೂಡು ಉಪಚುನಾವಣೆಯಲ್ಲಿ ಕಾಂಗ್ರೆಸ್ ಯಾವ ರೀತಿ ಗೆದ್ದಿದೆ ಹಾಗೂ ನಾವು ಯಾವುದರಿಂದ ಸೋತಿದ್ದೇವೆ ಎಂದು ಎಲ್ಲರಿಗೂ ಗೊತ್ತಿದೆ. ಸಿದ್ದರಾಮಯ್ಯ ಅವರು ನನ್ನನ್ನು ಏಕಾಏಕಿ ಸಂಪುಟದಿಂದ ಕೈಬಿಟ್ಟು ಅವಮಾನ ಮಾಡಿದ್ದು, ಬಳಿಕ ನಾನು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದನ್ನು ಪುಸ್ತಕ ಬರೆಯುತ್ತೇನೆ ಎಂದು ತಿಳಿಸಿದರು.
ನಂಜನಗೂಡು ಉಪ ಚುನಾವಣೆಯಲ್ಲಿ ಕಣಕ್ಕಿಳಿಸಲು ಜೆಡಿಎಸ್ ಗೆ ಅಭ್ಯರ್ಥಿಗಳೇ ಇರಲಿಲ್ಲ. ಇದರಿಂದ ಅಭ್ಯರ್ಥಿಯನ್ನೇ ಹಾಕದೆ ತಟಸ್ಥರಾಗಿದ್ದರು. ಅಂತಹವರು ಮುಂದಿನ ವಿಧಾನಸಭೆ ಚುನಾವಣೆಯಲ್ಲಿ 115 ರಿಂದ 120 ಸ್ಥಾನ ಗೆಲ್ಲುತ್ತೇವೆ ಎಂದು ಕುಮಾರಸ್ವಾಮಿ ಕನಸು ಕಾಣುತ್ತಿದ್ದಾರೆ. ಅಭ್ಯರ್ಥಿಯನ್ನೇ ಕಣಕ್ಕಿಳಿಸಲಾಗದವರು 120 ಸ್ಥಾನ ಗೆಲ್ಲಲು ಸಾಧ್ಯವೇ ಎಂದು ವ್ಯಂಗ್ಯವಾಡಿದರು.