ಕೆಆರ್ ನಗರದಲ್ಲಿ ತಾತ್ಕಾಲಿಕವಾಗಿ ಉಪವಾಸ ಸತ್ಯಾಗ್ರಹ ಕೈಬಿಟ್ಟ ರೈತರು
ಮೈಸೂರು, ಜನವರಿ 31: ಕೆ.ಆರ್.ನಗರ ತಾಲೂಕಿನ ಚುಂಚನಕಟ್ಟೆಯ ಶ್ರೀರಾಮ ಸಹಕಾರ ಸಕ್ಕರೆ ಕಾರ್ಖಾನೆಯನ್ನು ಪುನಶ್ಚೇನಗೊಳಿಸಬೇಕು ಎಂದು ಕಬ್ಬು ಬೆಳೆಗಾರರ ಸಂಘ, ರೈತ ಮುಖಂಡರು ಮತ್ತು ವಿವಿಧ ರಾಜಕೀಯ ಪಕ್ಷಗಳ ಮುಖಂಡರು ನಡೆಸುತ್ತಿದ್ದ ಉಪವಾಸ ಸತ್ಯಾಗ್ರಹವನ್ನು ರೈತ ಮುಖಂಡ, ಶಾಸಕ ಕೆ.ಎಸ್.ಪುಟ್ಟಣ್ಣಯ್ಯ ಮನವಿ ಮೇರೆಗೆ ತಾತ್ಕಾಲಿಕವಾಗಿ ಕೈ ಬಿಡಲಾಯಿತು.
ಪಟ್ಟಣದ ತಾಲೂಕು ಕಚೇರಿ ಆವರಣದಲ್ಲಿ 13 ದಿನಗಳಿಂದ ನಡೆಯುತ್ತಿದ್ದ ಅಮರಣಾಂತ ಉಪವಾಸ ಸತ್ಯಾಗ್ರಹವನ್ನು ಕೈ ಬಿಡಬೇಕೆಂದು ಮನವಿ ಮಾಡಿದ ಪುಟ್ಟಣ್ಣಯ್ಯ, ಕಾರ್ಖಾನೆ ವಿಚಾರವಾಗಿ ಮುಖ್ಯಮಂತ್ರಿ, ಜಿಲ್ಲಾ ಉಸ್ತುವಾರಿ ಮಂತ್ರಿ ಮತ್ತು ಅಧಿಕಾರಿಗಳೊಂದಿಗೆ ಕೂಡಲೇ ಸಭೆ ನಡೆಸಿ, ಕಾರ್ಖಾನೆ ಪುನಶ್ಚೇತನ ಮಾಡಲು ಕನಿಷ್ಠ 25 ಕೋಟಿ ಬಿಡುಗಡೆ ಮಾಡುವಂತೆ ಮುಖ್ಯಮಂತ್ರಿಗಳಿಗೆ ಒತ್ತಾಯಿಸಲಾಗುತ್ತದೆ ಎಂದರು.[ರಾಮನಗರ: ರೈತರ ಬದುಕು ಬರಡಾಗಿಸಿದ ಕಾಡಾನೆಗಳು]
ಇದಕ್ಕೆ ಸರ್ಕಾರ ಒಪ್ಪದೇ ಇದ್ದಾಗ ಪ್ರತಿಭಟನೆಯನ್ನು ಮತ್ತೊಮ್ಮೆ ಆರಂಭಿಸಲಾಗುತ್ತದೆ ಎಂದು ತಿಳಿಸಿದರು. ಪ್ರತಿಭಟನೆ ನಡೆಸುತ್ತಿದ್ದ ರೈತ ಮುಖಂಡರಿಗೆ ಸ್ಥಳೀಯ ಶಾಸಕರು, ಸಂಸದರು ನೈತಿಕ ಬೆಂಬಲ ನೀಡಿ ಅವರು ಸಹ ಹೋರಾಟದಲ್ಲಿ ಭಾಗಿಯಾಗಬೇಕಾಗಿತ್ತು. ಆದರೆ ರಾಜಕೀಯ ಕಾರಣಗಳಿಂದ ಸತ್ಯಾಗ್ರಹದಲ್ಲಿ ಪಾಲ್ಗೊಳ್ಳದೆ ರೈತರಿಗೆ ದ್ರೋಹ ಮಾಡಿದ್ದಾರೆ. ರೈತರ ವಿಚಾರದಲ್ಲಿ ಯಾವ ಪಕ್ಷದವರೂ ರಾಜಕೀಯ ಮಾಡದೆ ಬೆಂಬಲ ನೀಡಬೇಕಿತ್ತು ಎಂದರು.
ಮದ್ಯ ಮಾರಾಟಗಾರರು, ವೈದ್ಯರು ಸೇರಿದಂತೆ ಯಾವುದೇ ಸಂಘಟನೆಗಳು ಹೋರಾಟ ಮಾಡಿದ ಸಂದರ್ಭದಲ್ಲಿ ಸರಕಾರ ಮತ್ತು ಜನಪ್ರತಿನಿಧಿಗಳು ಅವರನ್ನು ಆಹ್ವಾನಿಸಿ ಸಮಸ್ಯೆಗಳನ್ನು ಆಲಿಸಲಾಗುತ್ತದೆ. ಆದರೆ ಸ್ಥಗಿತಗೊಂಡಿರುವ ಸಹಕಾರ ಕ್ಷೇತ್ರದ ಕಾರ್ಖಾನೆಯನ್ನು ಪುನಶ್ಚೇತನಗೊಳಿಸುವಂತೆ 13 ದಿನಗಳಿಂದ ರೈತ ಮುಖಂಡರು ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದರೂ ಜಿಲ್ಲಾ ಮಂತ್ರಿಗಳಾಗಲಿ, ಅಧಿಕಾರಿಗಳಾಗಲಿ ಬಾರದಿರುವುದು ರೈತರ ಬಗ್ಗೆ ಇರುವ ನಿರ್ಲಕ್ಷ್ಯ ತೋರಿಸುತ್ತದೆ ಎಂದರು.[ಜಾನುವಾರುಗಳಿಗಾಗಿ ಒಂದೂವರೆ ರುಗೆ ಒಂದು ಕೆಜಿ ಮೇವು: ಸಿದ್ದು]
ಚುಂಚನಕಟ್ಟೆಯ ಸಕ್ಕರೆ ಕಾರ್ಖಾನೆಯನ್ನು ಮಾರಾಟ ಮಾಡಿಸಿ ಖಾಸಗಿಯವರಿಗೆ ಅನುಕೂಲ ಮಾಡಿಕೊಡುವ ದೃಷ್ಟಿಯಿಂದ ಅಧಿಕಾರಿಗಳು, ಕಾರ್ಖಾನೆ ಆರಂಭಿಸಲು ಸಾಧ್ಯವಿಲ್ಲ ಎಂಬ ತಪ್ಪು ವರದಿಯನ್ನು ಸರಕಾರಕ್ಕೆ ನೀಡಿರುವುದರಿಂದ ಮುಖ್ಯಮಂತ್ರಿಗಳು ಅಗತ್ಯ ಅನುದಾನವನ್ನು ಬಿಡುಗಡೆ ಮಾಡಿ, ಕಾರ್ಖಾನೆ ಪುನಶ್ಚೇತನಗೊಳಿಸಲು ಕ್ರಮ ಕೈಗೊಂಡಿಲ್ಲ ಎಂದು ದೂರಿದರು.