ಸಿದ್ದರಾಮಯ್ಯಗೆ ಒಳ್ಳೆ ಬುದ್ಧಿ ಬರಲೆಂದು ಪೂಜೆ ಮಾಡಿಸಿದ ಈಶ್ವರಪ್ಪ!
ಮೈಸೂರು, ಮಾ.2 : ಅಚ್ಚರಿಯಾದರೂ ಇದು ಸತ್ಯ. ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ದೇವರು ಒಳ್ಳೆಯ ಬುದ್ಧಿ ನೀಡಲಿ ಎಂದು ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಪೂಜೆ ಸಲ್ಲಿಸಿದ್ದಾರೆ. ಪೂಜೆ ಮಾಡಿಸಿರುವುದು ನಿಜ ಎಂದು ಅವರೇ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ.
ಭಾನುವಾರ ಮೈಸೂರಿನಲ್ಲಿ ಮಾತನಾಡಿದ ಕೆ.ಎಸ್.ಈಶ್ವರಪ್ಪ ಅವರು, ಕೇಂದ್ರ ಸರ್ಕಾರದ ಆದೇಶಕ್ಕೆ ವಿರುದ್ಧವಾಗಿ ಗಣಿ ಗುತ್ತಿಗೆ ನವೀಕರಣ ಮಾಡಿರುವ ಸಿಎಂ ಸಿದ್ದರಾಮಯ್ಯ ಅವರಿಗೆ ದೇವರು ಒಳ್ಳೆಯ ಬುದ್ಧಿ ನೀಡಲಿ ಎಂದು ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದೇನೆ ಎಂದು ಹೇಳಿದರು. [ಗಣಿಗಾರಿಕೆ ಹೋರಾಟಕ್ಕೆ ತಿಲಾಂಜಲಿ ಇಟ್ಟ ಸಿದ್ದರಾಮಯ್ಯ]
ಕರ್ನಾಟಕದಲ್ಲಿ 108 ಗಣಿ ಕಂಪನಿಗಳಿದ್ದರೂ ಕೇವಲ 10 ಕಂಪನಿಗಳಿಗೆ ಮಾತ್ರ ಗಣಿ ಗುತ್ತಿಗೆ ನವೀಕರಣ ಮಾಡಲಾಗಿದೆ. ಇದರಿಂದ ರಾಜ್ಯಕ್ಕೆ ಸಾವಿರಾರು ಕೋಟಿ ರೂ. ನಷ್ಟವಾಗಿದೆ ಎಂದು ಈಶ್ವರಪ್ಪ ಆರೋಪಿಸಿದರು. ಸಿಎಂ ಸಿದ್ದರಾಮಯ್ಯ ಈ ಕಂಪನಿಗಳಿಂದ ಕಿಕ್ ಬ್ಯಾಕ್ ಪಡೆದಿದ್ದಾರೆಯೇ? ಎಂಬ ಅನುಮಾನ ಉಂಟಾಗಿದೆ ಎಂದು ಈಶ್ವರಪ್ಪ ತಿಳಿಸಿದರು.
ಈಶ್ವರಪ್ಪ ಆರೋಪಕ್ಕೆ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದು, ಕಾನೂನು ತಜ್ಞರ ಜೊತೆ ಸಮಾಲೋಚನೆ ನಡೆಸಿ ನವೀಕರಣ ಮಾಡಲಾಗಿದೆ. ಇದರಲ್ಲಿ ಯಾವುದೇ ಅಕ್ರಮ ನಡೆದಿಲ್ಲ, ಪ್ರಚಾರಪ್ರಿಯರಾದ ಈಶ್ವರಪ್ಪ ಈ ರೀತಿ ಮಾತನಾಡುತ್ತಿದ್ದಾರೆ ಎಂದು ಹೇಳಿದ್ದಾರೆ.
ಚಾಮುಂಡಿ ಬೆಟ್ಟದಲ್ಲಿ ಈಶ್ವರಪ್ಪ ವಿಶೇಷ ಪೂಜೆ
ವಿಧಾನಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಭಾನುವಾರ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಸಿಎಂ ಸಿದ್ದರಾಮಯ್ಯ ಅವರಿಗೆ ದೇವರು ಒಳ್ಳೆ ಬುದ್ಧಿ ಕೊಡಲಿ ಎಂದು ಪೂಜೆ ಮಾಡಿಸಿದ್ದಾರೆ.
ಸಿದ್ದರಾಮಯ್ಯಗಾಗಿ ಪೂಜೆ ಮಾಡಿಸಿದೆ
ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಕೆ.ಎಸ್.ಈಶ್ವರಪ್ಪ ಅವರು, ದೇವರು ಸಿಎಂ ಸಿದ್ದರಾಮಯ್ಯ ಅವರಿಗೆ ಒಳ್ಳೆ ಬುದ್ಧಿಕೊಡಲಿ ಎಂದು ಬೇಡಿಕೊಂಡು ಪೂಜೆ ಮಾಡಿಸಿದ್ದೇನೆ ಎಂದು ಹೇಳಿದರು.
ಗಣಿ ಕಂಪನಿಗಳ ಪರವಾನಿಗೆ ನವೀಕರಣ
ರಾಜ್ಯದಲ್ಲಿ 108 ಗಣಿ ಕಂಪನಿಗಳಿದ್ದರೂ ಕೇವಲ 10 ಕಂಪನಿಗಳಿಗೆ ಮಾತ್ರ ಗಣಿ ಗುತ್ತಿಗೆ ನವೀಕರಣ ಮಾಡಲಾಗಿದೆ. ಇದರಿಂದ ರಾಜ್ಯಕ್ಕೆ ಸಾವಿರಾರು ಕೋಟಿ ರೂ. ನಷ್ಟವಾಗಿದೆ ಎಂದು ಆರೋಪಿಸಿದ ಕೆ.ಎಸ್.ಈಶ್ವರಪ್ಪ ಅವರು, ಗಣಿ ಗುತ್ತಿಗೆ ಹರಾಜು ಪ್ರಕ್ರಿಯೆ ಪಾರದರ್ಶಕವಾಗಿ ನಡೆಯಬೇಕೆಂದು ಕೇಂದ್ರ ಸರ್ಕಾರ ಆದೇಶಿಸಿದೆ. ಆದರೆ, ಇದನ್ನು ಸರ್ಕಾರ ಪಾಲಿಸಿಲ್ಲ ಎಂದು ದೂರಿದರು.
ಸಿಎಂ ಸಿದ್ದರಾಮಯ್ಯ ಕಿಕ್ ಬ್ಯಾಕ್ ಪಡೆದಿದ್ದಾರೆಯೇ?
10 ಕಂಪನಿಗಳ ಗಣಿ ಗುತ್ತಿಗೆಯನ್ನು ಮಾತ್ರ ಸರ್ಕಾರ ನವೀಕರಣ ಮಾಡಿದೆ. ಈ ಕಂಪನಿಗಳೊಂದಿಗೆ ಮುಖ್ಯಮಂತ್ರಿಗಳಿಗೆ ಸಂಬಂಧವಿದೆಯೇ? ವೈಯಕ್ತಿಕ ಲಾಭವಿದೆಯೇ ? ಇದಕ್ಕಾಗಿ ಮುಖ್ಯಮಂತ್ರಿಗಳು ಕಿಕ್ ಬ್ಯಾಕ್ ಪಡೆದಿದ್ದಾರೆಯೇ? ಎಂಬ ಅನುಮಾನ ಉಂಟಾಗಿದೆ ಎಂದು ಈಶ್ವರಪ್ಪ ಪ್ರಶ್ನಿಸಿದರು.
ಈಶ್ವರಪ್ಪ ಮನೆಯಲ್ಲಿ ನೋಟು ಎಣಿಸುವ ಯಂತ್ರ ಸಿಕ್ಕಿದೆ
ಕಾನೂನು ಪರಿಮಿತಿಯಲ್ಲಿಯೇ ಗಣಿ ಕಂಪನಿಗಳ ಗುತ್ತಿಗೆಯನ್ನು ನವೀಕರಣ ಮಾಡಲಾಗಿದೆ. ಭ್ರಷ್ಟಾಚಾರದ ಬಗ್ಗೆ ಮಾತನಾಡುವ ಯಾವುದೇ ನೈತಿಕತೆ ಕೆ.ಎಸ್. ಈಶ್ವರಪ್ಪ ಅವರಿಗೆ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ಪ್ರಚಾರಕ್ಕಾಗಿ ಈಶ್ವರಪ್ಪ ಅವರು ಹೀಗೆ ಮಾತನಾಡುತ್ತಾರೆ. ಈಶ್ವರಪ್ಪ ತಮ್ಮ ಮನೆಯಲ್ಲಿಯೇ ನೋಟು ಎಣಿಸುವ ಯಂತ್ರ ಇಟ್ಟುಕೊಂಡಿದ್ದರು. ಅವರು ಅಧಿಕಾರದಲ್ಲಿದ್ದಾಗ ಯಾವ ಪ್ರಮಾಣದಲ್ಲಿ ಭ್ರಷ್ಟಾಚಾರ ಮಾಡಿದ್ದಾರೆ ಎಂಬುದೂ ಗುಟ್ಟಾಗಿ ಉಳಿದಿಲ್ಲ ಎಂದು ಸಿಎಂ ಹೇಳಿದ್ದಾರೆ.