ಮೈಸೂರು ಜಿಲ್ಲಾ ಕೆಡಿಪಿ ಸಭೆಯಲ್ಲಿ ಸಿಇಒ ಕೆಂಡಾಮಂಡಲ
ಮೈಸೂರು, ಡಿಸೆಂಬರ್. 19 : ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಸೋಮವಾರ ಮೈಸೂರು ಜಿಲ್ಲಾ ಪಂಚಾಯತ್ ಪ್ರಗತಿ ಪರಿಶೀಲನಾ ಸಭೆ ನಡೆಯಿತು.
ಜಿಲ್ಲೆಯ ಯಾವ ಇಲಾಖೆಯಲ್ಲಿಯೂ ಸರಿಯಾಗಿ ಕೆಲಸಗಳು ನಡೆಯುತ್ತಿಲ್ಲ ಎನ್ನುವ ದೂರುಗಳು ಬರುತ್ತಿದ್ದು, ಅಧಿಕಾರಿಗಳು ಏನೆಲ್ಲಾ ಕೆಲಸವನ್ನು ಮಾಡಿದ್ದೀರಿ ಎಂದು ಮುಖ್ಯಕಾರ್ಯನಿರ್ವಹಣಾಧಿಕಾರಿ ಶಿವಶಂಕರ್ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.
ಅಧಿಕಾರಿಗಳು ಏನೆಲ್ಲಾ ಕೆಲಸವನ್ನು ಮಾಡಿದ್ದೀರಿ ಎನ್ನುವ ಸಂದೇಶವನ್ನು ಇವತ್ತಿನಿಂದಲೇ ನನಗೆ ಸಂದೇಶದ ಮೂಲಕ ರವಾನಿಸಿ ಎಂದು ಕಟ್ಟುನಿಟ್ಟಾಗಿ ಆದೇಶಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾತ್ ಉಪಾಧ್ಯಕ್ಷ ಬೀರಿ ಹುಂಡಿ ಬಸವಣ್ಣ ಮಾತನಾಡಿ, ನಂಜನಗೂಡು ಅಂಬೇಡ್ಕರ್ ಅಭಿವೃದ್ಧಿ ನಿಗಮದಲ್ಲಿ ಸ್ವ-ಉದ್ಯೋಗ ಕೈಗೊಳ್ಳುವ ಕುರಿತಂತೆ ಮಧ್ಯವರ್ತಿಗಳನ್ನು ಅವಲಂಬಿಸುತ್ತಿದ್ದಾರೆ ಎಂಬ ಮಾಹಿತಿ ಲಭಿಸಿದ್ದು ಅಧಿಕಾರಿಗಳು ಏನು ಮಾಡುತ್ತೀದ್ದೀರಿ ಎಂದು ತರಾಟೆಗೆ ತೆಗೆದುಕೊಂಡರು.
ರೈತರು ಬರಗಾಲದ ಪರಿಸ್ಥಿತಿ ಎದುರಿಸುತ್ತಿದ್ದು, ಜಾನುವಾರುಗಳಿಗೆ ಮೇವಿನ ಸಮಸ್ಯೆ ಎದುರಾಗಿದೆ. ಕಂದಾಯ ಇಲಾಖೆಯಲ್ಲಿಯೂ ಯಾವುದೇ ಕೆಲಸ ಕಾರ್ಯಗಳು ನಡೆಯುತ್ತಿಲ್ಲ ಅಧಿಕಾರಿಗಳನ್ನು ವಿಚಾರಿಸಿದರೆ ಸುಳ್ಳು ಉತ್ತರವನ್ನೇ ನೀಡುತ್ತಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಆರೋಗ್ಯ ಇಲಾಖೆಯಲ್ಲಿ 40 ರಷ್ಟು ಹುದ್ದೆ ಖಾಲಿ ಇದ್ದು ಅದರಲ್ಲಿ 250 ಮಂದಿಯನ್ನು ಶೀಘ್ರದಲ್ಲೇ ಭರ್ತಿ ಮಾಡಿಕೊಳ್ಳುತ್ತೇವೆ ಎಂದು ಈ ಸಂದರ್ಭ ಸಭೆಗೆ ಮಾಹಿತಿ ನೀಡಿದರು.