ಶರತ್ ಮಡಿವಾಳ್ ಹತ್ಯೆಯಲ್ಲಿ ರಮಾನಾಥ್ ರೈ ಕೈವಾಡ: ಆರ್.ಅಶೋಕ್
ಮೈಸೂರು, ಜುಲೈ 22: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದ ಶರತ್ ಮಡಿವಾಳ ಹತ್ಯೆಯ ಹಿಂದೆ ಸಚಿವ ರಮಾನಾಥ್ ರೈ ಕೈವಾಡವಿದೆ ಎಂದು ಮಾಜಿ ಸಚಿವ ಆರ್.ಅಶೋಕ್ ಎಂದು ತಿಳಿಸಿದರು.
ಶರತ್ ಮಡಿವಾಳ ಕೊಲೆ ಪ್ರಕರಣ ಏನಾಯ್ತು ಸ್ವಾಮಿ?
ಹಿಂದೂ ಮುಖಂಡರು ಹಾಗೂ ಹಿಂದೂಪರ ಸಂಘಟನೆಗಳ ಮೇಲೆ ನಡೆಯುತ್ತಿರುವ ಹಿಂಸೆ ಹಾಗೂ ದೌರ್ಜನ್ಯವನ್ನು ಖಂಡಿಸಿ ವಿಶ್ವ ಹಿಂದು ಪರಿಷತ್ ನಡೆಸಿದ ಪ್ರತಿಭಟನಾ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದನಂತರ 24 ಮಂದಿ ಹಿಂದೂಪರ ಸಂಘಟನೆಗಳ ಹಾಗೂ ಬಿಜೆಪಿ ಕಾರ್ಯಕರ್ತರ ಹತ್ಯೆ ನಡೆದಿದೆ.ಇದಕ್ಕೆಲ್ಲಾ ಕಾಂಗ್ರೆಸ್ ಪಕ್ಷದ ಕುಮ್ಮಕ್ಕು ಪ್ರಮುಖ ಕಾರಣವಾಗಿದೆ.
ಬಿಜೆಪಿ ಅಧಿಕಾರದಲ್ಲಿದ್ದ ಅವಧಿಯಲ್ಲಿ ಈ ರೀತಿ ಕಾಂಗ್ರೆಸ್ ಕಾರ್ಯಕರ್ತರ ಕೊಲೆಗಳು ನಡೆದಿಲ್ಲ. ಆದರೆ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದನಂತರ ಬಿಜೆಪಿ ಮತ್ತು ಹಿಂದೂಪರ ಸಂಘಟನೆಗಳ ಕಾರ್ಯಕರ್ತರನ್ನು ಗುರಿಯಾಗಿಸಿಕೊಂಡು ಹತ್ಯೆ ಮಾಡಲಾಗುತ್ತಿದೆ ಎಂದು ಆಪಾದಿಸಿದರು.
ಶರತ್ ಮಡಿವಾಳ ಹತ್ಯೆ ಆರೋಪಿಗಳನ್ನು ಬಂಧಿಸುವ ವ್ಯವಧಾನವಿಲ್ಲದ ಮುಖ್ಯಮಂತ್ರಿ ಸಿದ್ದರಾಮಯ್ಯ ಓಟ್ ಬ್ಯಾಂಕ್ ರಾಜಕಾರಣ ಮಾಡುತ್ತಿದ್ದಾರೆ. ಬೆಂಗಳೂರಿನಲ್ಲಿ ನಡೆದ ರುದ್ರೇಶ್ ಹತ್ಯೆ ಬಳಿಕ ರಾಜ್ಯ ಸರ್ಕಾರ ನೀಡಿದ್ದ ಭರವಸೆ ಹುಸಿಯಾಗಿದೆ. ಶರತ್ ಮಡಿವಾಳ ಹತ್ಯೆ ಪ್ರಕರಣವನ್ನು ಎನ್.ಐ.ಎ ತನಿಖೆಗೆ ವಹಿಸಬೇಕು ಆಗ್ರಹಿಸಿದರು.
ಬೆಂಗಳೂರಿನ ಪರಪ್ಪನ ಅಗ್ರಹಾರ ಕಾರಾಗೃಹ ತಮಿಳುನಾಡಿನ ಶಶಿಕಲಾ ಅವರ ಗೆಸ್ಟ್ ಹೌಸ್ ಆಗಿ ಮಾರ್ಪಟ್ಟಿದೆ. ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ ಶಶಿಕಲಾಗೆ 5 ಕೊಠಡಿಗಳನ್ನು ನೀಡಿ ರಾಜಾತಿಥ್ಯ ನೀಡಲಾಗುತ್ತಿದೆ. ಈ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಶಶಿಕಲಾ ಜೊತೆ ಮ್ಯಾಚ್ ಫಿಕ್ಸಿಂಗ್ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿದರು.ಇನ್ನು ಕಾರ್ಯಕ್ರಮಕ್ಕೆ ತಡವಾಗಿ ಬಂದ ಹಿನ್ನಲೆಯಲ್ಲಿ ಕಾರ್ಯಕರ್ತರ ಮಧ್ಯೆ ಕುಳಿತು ಭಾಷಾಣ ಆರ್.ಅಶೋಕ್ ಆಲಿಸಿದರು.