ಸುಳಿಗಾಳಿ ಪರಿಣಾಮ 2 ದಿನ ಭಾರೀ ಮಳೆ ಸಾಧ್ಯತೆ
ಬೆಂಗಳೂರು, ಆಗಸ್ಟ್, 31: ತಮಿಳುನಾಡಿನಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿ ಪರಿಣಾಮ ಮಂಗಳವಾರ ರಾತ್ರಿಯಿಂದ ಆರಂಭವಾದ ಮಳೆ ಬುಧವಾರವೂ ಮುಂದುವರಿದಿದೆ. ನಗರದಲ್ಲಿ ಮೋಡ ಕವಿದ ವಾತಾವರಣವಿದ್ದು ಸಂಜೆ ಮತ್ತೆ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಮುಂದಿನ 48 ಗಂಟೆಗಳಲ್ಲಿ ರಾಜ್ಯದ ಕರಾವಳಿಯಲ್ಲಿ ಸಾಧಾರಣ ಮಳೆಯಾಗಲಿದೆ. ಆಗಸ್ಟ್ 31 ರಿಂದ ಸಪ್ಟೆಂಬರ್ 2 ರವರೆಗೆ ರಾಜ್ಯದ ದಕ್ಷಿಣ ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಅಧಿಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.[ಪಶ್ಚಿಮ ಘಟ್ಟ ಸಾಲಿನಲ್ಲಿ ಮಳೆ ಆರ್ಭಟ ಹೇಗಿತ್ತು?]
ತಮಿಳುನಾಡಿನಲ್ಲಿ ಆಗಿರುವ ಹವಾಮಾನ ಬದಲಾವಣೆ ಅಂದರೆ ಮೇಲ್ಮೈ ಸುಳಿಗಾಳಿ ಪ್ರಭಾವ ಇರಲಿರುವುದರಿಂದ ಬುಧವಾರ ಬೆಂಗಳೂರು ಸೇರಿದಂತೆ ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.[ಮಡಿಕೇರಿಯ ಅಜ್ಞಾತ ಜಲಧಾರೆ ಹಾಲೇರಿ ಫಾಲ್ಸ್]
ಬೀದರ್ ಜಿಲ್ಲೆಯ ಚಿಟಗುಪ್ಪ 5(ಸೆಂಮೀ), ಉತ್ತರ ಕನ್ನಡ ಜಿಲ್ಲೆ ಮಂಕಿ, ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ, ಹಾಸನ ಜಿಲ್ಲೆ ಶ್ರವಣಬೆಳಗೊಳ 4 (ಸೆಂಮೀ) , ಸುಬ್ರಹ್ಮಣ್ಯ, ಆಗುಂಬೆ 3, (ಸೆಂಮೀ), ಶಿರಾಲಿ, ಬಾಗೇವಾಡಿ, ಇಂಡಿ, ಅಫ್ಜಲ್ಪುರದಲ್ಲಿ 2 (ಸೆಂಮೀ) ಮಳೆ ಮಂಗಳವಾರ ಸುರಿದಿದೆ.
ಬೆಳಗಾವಿ, ಧಾರವಾಡ, ಗದಗದಲ್ಲಿ ಮಳೆಯಾಗಿದೆ. ಹುಬ್ಬಳ್ಳಿ ನಗರದಲ್ಲಿ ಸಾಧಾರಣ ಮಳೆಯಾಗಿದೆ. ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದಲ್ಲಿ ಉತ್ತಮ ಮಳೆಯಾಗಿದ್ದು, ಭಟ್ಕಳ, ಮುಂಡಗೋಡ, ಶಿರಸಿ, ಯಲ್ಲಾಪುರದಲ್ಲಿ ಸಹ ಮಳೆಯಾಗಿದೆ.