ಯಡಿಯೂರಪ್ಪ ಅವರ ಶಿವಮೊಗ್ಗ ಮನೆ ಮುಂದೆ ಪ್ರತಿಭಟನೆ
ಶಿವಮೊಗ್ಗ, ಜುಲೈ 10: ಶಿವಮೊಗ್ಗ ವಿನೋಬನಗರದಲ್ಲಿರುವ ಬಿ.ಜೆ.ಪಿ. ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ನಿವಾಸಕ್ಕೆ ಯುವ ಕಾಂಗ್ರೆಸ್ ಬೆಂಬಲಿತ ರೈತ ಸಂಘಟನೆಯ ಕಾರ್ಯಕರ್ತ ಮುತ್ತಿಗೆ ಹಾಕಿ, ಪ್ರತಿಭಟನೆ ನಡೆಸಿದರು. ಕೇಂದ್ರ ಸರ್ಕಾರದ ಮೇಲೆ ಒತ್ತಡ ತಂದು ರೈತರ ಸಾಲವನ್ನು ಮನ್ನಾ ಮಾಡಿಸಬೇಕೆಂದು ಆಗ್ರಹಿಸಿದ್ದಾರೆ.
ಕೇಂದ್ರ ಸರ್ಕಾರ ರಾಷ್ಟ್ರೀಕೃತ ಬ್ಯಾಂಕ್ ಗಳಲ್ಲಿನ ರೈತರ ಸಾಲಮನ್ನಾ ಮಾಡಬೇಕೆಂದು ಒತ್ತಾಯಿಸಿ, ಯುವ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಯಡಿಯೂರಪ್ಪ, ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಘೋಷಣೆಗಳನ್ನು ಕೂಗಿದರು. ಪೊಲೀಸರು ಮಧ್ಯೆ ಪ್ರವೇಶಿಸಿ, ಪ್ರತಿಭಟನಾಕಾರರನ್ನು ತಡೆದರು.
ಯುವ ಕಾಂಗ್ರೆಸ್ ಮುಖಂಡರಾದ ರಂಗನಾಥ್, ಮಧುಸೂದನ್, ಚೇತನ್, ಮೊಹಮ್ಮದ್ ಆರೀಫ್ ವುಲ್ಲಾ ಅವರನ್ನು ಪೊಲೀಸರು ವಶಕ್ಕೆ ಪಡೆದರು. ಇದು ಸಣ್ಣ ಮಟ್ಟದ ಪ್ರತಿಭಟನೆಯಾದರೂ, ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಸ್ವಂತ ಊರು, ಮನೆ ಮುಂದೆ ಪ್ರತಿಭಟನೆಯಾಗಿದ್ದು ಅವರಿಗೆ ಮುಜುಗರ ಉಂಟು ಮಾಡಿದೆ ಎಂದು ಯಡಿಯೂರಪ್ಪ ಅವರ ಆಪ್ತ ವಲಯ ಹೇಳಿದೆ.
ಕರ್ನಾಟಕದಲ್ಲಿ ಸಹಕಾರಿ ಸಂಘಗಳಿಂದ ಪಡೆದ 50 ಸಾವಿರ ರುವರೆಗಿನ ಸಾಲವನ್ನು ಮನ್ನಾ ಮಾಡಿ ಇತ್ತೀಚೆಗೆ ಸಿದ್ದರಾಮಯ್ಯ ಸರ್ಕಾರ ಆದೇಶ ಹೊರಡಿಸಿದ್ದನ್ನು ಸ್ಮರಿಸಬಹುದು. ಸಿದ್ದರಾಮಯ್ಯ ಅವರು ಸಾಲ ಮನ್ನಾ ಮಾಡಲು ಬಿಜೆಪಿ ಹಾಕಿದ ಒತ್ತಡವೇ ಕಾರಣ ಎಂದು ಬಿಎಸ್ ಯಡಿಯೂರಪ್ಪ ಅವರು ಹೇಳಿದ್ದರು. ಇದರಿಂದ ಆಕ್ರೋಶಗೊಂಡ ಯುವ ಕಾಂಗ್ರೆಸ್ ಕಾರ್ಯಕರ್ತರು, ಪ್ರತಿಭಟನೆಗೆ ಮುಂದಾಗಿದ್ದಾರೆ.