ಪೇಜಾವರ ಶ್ರೀಗಳಿಯೆ ಯಶಸ್ವೀ ಹರ್ನಿಯಾ ಶಸ್ತ್ರಚಿಕಿತ್ಸೆ
ಉಡುಪಿ, ಆಗಸ್ಟ್ 21: ಪೇಜಾವರ ಮಠಾಧೀಶ ಶ್ರೀ ವಿಶ್ವೇಶತೀರ್ಥ ಶ್ರೀಪಾದರಿಗೆ ಯಶಸ್ವಿಯಾಗಿ ಹರ್ನಿಯಾ ಶಸ್ತ್ರಚಿಕಿತ್ಸೆ ನಡೆಸಲಾಗಿದೆ.
ಉಡುಪಿ ಶ್ರೀಕೃಷ್ಣ ಮಠದಿಂದ ಭಾಣುವಾರ ಬೆಳಿಗ್ಗೆ ಹತ್ತು ಗಂಟೆ ಸುಮಾರಿಗೆ ಮಣಿಪಾಲ ಕೆಎಂಸಿ ಆಸ್ಪತ್ರೆಗೆ ಪೇಜಾವರ ಸ್ವಾಮೀಜಿ ತೆರಳಿದ್ದರು.
ಪೇಜಾವರ ಶ್ರೀಗಳಿಗೆ ಇಂದು (ಆಗಸ್ಟ್ 20) ಹರ್ನಿಯ ಶಸ್ತ್ರಚಿಕಿತ್ಸೆ
ಕೆಎಂಸಿ ಆಸ್ಪತ್ರೆಯ ಹಿರಿಯ ವೈದ್ಯಾಧಿಕಾರಿಗಳು ಬಿಪಿ ಶುಗರ್ ಮತ್ತಿತರ ಎಲ್ಲಾ ಚೆಕಪ್ ಗಳನ್ನು ಮಾಡಿದ ನಂತರ ಪೇಜಾವರ ಸ್ವಾಮೀಜಿ ಅವರನ್ನು ಭಾನುವಾರ ಮಧ್ಯಾಹ್ನ ಎರಡು ಗಂಟೆ ಸುಮಾರಿಗೆ ಶಸ್ತ್ರಚಿಕಿತ್ಸೆಗೆ ಒಳಪಡಿಸಲಾಯಿತು.
ಉಡುಪಿ ಪೇಜಾವರ ಮಠಾಧೀಶ ವಿಶ್ವೇಶತೀರ್ಥ ಶ್ರೀಪಾದರ ಹರ್ನಿಯಾ ಆಪರೇಷನ್ ಸಕ್ಸಸ್ ಆಗಿದೆ. ಸುಮಾರು ಒಂದು ಗಂಟೆಗಳ ಕಾಲ ಹಿರಿಯ ವೈದ್ಯ ಪದ್ಮರಾಜ್ ನೇತೃತ್ವದ ತಂಡ ಸ್ವಾಮೀಜಿಯವರಿಗೆ ಶಸ್ತ್ರಚಿಕಿತ್ಸೆಯನ್ನು ನಡೆಸಿತು.
ಸೊಂಟದಿಂದ ಕೆಳಭಾಗಕ್ಕೆ ಅನಸ್ತೇಷಿಯಾ ನೀಡಿ ಆಪರೇಷನ್ ಮಾಡಲಾಯಿತು ಎಂದು ಆಸ್ಪತ್ರೆಯ ಮೂಲಗಳು ತಿಳಿಸಿದೆ. ಆಪರೇಷನ್ ಕೊಠಡಿಯ ಪಕ್ಕದ ಸ್ಪೆಷಲ್ ರೂಂ ನಲ್ಲಿ ವಿಶ್ರಾಂತಿಯನ್ನು ಪಡೆಯುತ್ತಿರುವ ಪೇಜಾವರ ಸ್ವಾಮೀಜಿಗಳು, ತಮ್ಮ ಶಿಷ್ಯ ವೃಂದದ ಜತೆ ಎಂದಿನಂತೆ ಮಾತನಾಡುತ್ತಿದ್ದಾರೆ.
ವೈದ್ಯರ ಚಿಕಿತ್ಸೆಗೆ ಸ್ಪಂದಿಸುತ್ತಿರುವ ಪೇಜಾವರ ಸ್ವಾಮೀಜಿ ಅವರು ಸೋಮವಾರ ಸಂಜೆಯ ವೇಳೆಗೆ ವಾರ್ಡ್ ಗೆ ಶಿಫ್ಟ್ ಮಾಡುವ ಸಾಧ್ಯತೆ ಇದೆ ಎಂಬ ಮಾಹಿತಿ ಸಿಕ್ಕಿದೆ.
ಕಳೆದ ಒಂದು ತಿಂಗಳಿಂದ ಪೇಜಾವರ ಸ್ವಾಮೀಜಿ ಅವರಿಗೆ ಹರ್ನಿಯಾ ನೋವು ಕಾಣಿಸಿಕೊಳ್ಳುತ್ತಿತ್ತು. ವೈದ್ಯರು ಶಸ್ತ್ರಚಿಕಿತ್ಸೆ ಒಳಪಡಿಸಬೇಕು ಎಂದು ಒತ್ತಡ ಹಾಕಿದ ನಂತರ ಸ್ವಾಮೀಜಿಯವರು ಶಸ್ತ್ರಚಿಕಿತ್ಸೆಗೆ ಒಪ್ಪಿಕೊಂಡಿದ್ದರು. ಈ ಹಿನ್ನೆಲೆಯಲ್ಲಿ ಭಾನುವಾರ ಮಣಿಪಾಲ ಕೆಎಂಸಿಯಲ್ಲಿ ಶಸ್ತ್ರಚಿಕಿತ್ಸೆ ಮಾಡಲಾಯಿತು.
ಇದಕ್ಕೂ ಮುನ್ನ ಪೇಜಾವರ ಸ್ವಾಮೀಜಿ ಅವರ ಶಿಷ್ಯ ವೃಂದ, ಹಿರಿಯ ಅರ್ಚಕರ ತಂಡ ಕೃಷ್ಣಮಠದ ರಾಜಾಂಗಣದಲ್ಲಿ ಧನ್ವಂತರಿ ಹೋಮ ಮತ್ತು ನರಸಿಂಹ ಮಂತ್ರ ಜಪವನ್ನು ಮಾಡಿತ್ತು. ಧನ್ವಂತರಿ ಹೋಮದಲ್ಲಿ ಪಾಲ್ಗೊಂಡು ಪೇಜಾವರ ಸ್ವಾಮೀಜಿ ಅವರು ಪೂರ್ಣಾಹುತಿ ಕಾರ್ಯದಲ್ಲಿ ಪಾಲ್ಗೊಂಡರು. ಕಿರಿಯ ಸ್ವಾಮೀಜಿ ವಿಶ್ವಪ್ರಸನ್ನ ತೀರ್ಥ ಶ್ರೀಪಾದರು ಮಂಗಳಾರತಿಯನ್ನು ಈ ಸಂದರ್ಭದಲ್ಲಿ ನೆರವೇರಿಸಿದ್ದರು.
ಇದೇ ಸಂದರ್ಭ ಕರಂಬಳ್ಳಿ ದೇವಸ್ಥಾನದಲ್ಲಿ ಪೇಜಾವರ ಸ್ವಾಮೀಜಿ ಅಭಿಮಾನಿಗಳು ನಂದಾದೀಪ ಪೂಜೆ, ವಿಷ್ಣುಸಹಸ್ರನಾಮ ಮತ್ತಿತರ ಹಲವು ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಿದರು. ನವೆಂಬರ್ ಮತ್ತು ಡಿಸೆಂಬರ್ ತಿಂಗಳಲ್ಲಿ ಪೇಜಾವರ ಮಠದಲ್ಲಿ ಹತ್ತಾರು ಧಾರ್ಮಿಕ ಕಾರ್ಯಕ್ರಮಗಳು, ಧರ್ಮಸಂಸತ್ತು ಇರುವುದರಿಂದ ಅದಕ್ಕೆ ಮುಂಚಿತವಾಗಿ ಪೇಜಾವರ ಸ್ವಾಮೀಜಿ ಅವರು ತಮ್ಮನ್ನು ಶಸ್ತ್ರ ಚಿಕಿತ್ಸೆಗೆ ಒಳಪಡಿಸಿಕೊಂಡರು.
ಹರ್ನಿಯ ಆಪರೇಷನ್ ಗೆ ಸುಮಾರು ಒಂದು ವಾರದಿಂದ ಹತ್ತು ದಿನಗಳ ಕಾಲ ವಿಶ್ರಾಂತಿ ಬೇಕಾಗಬಹುದು ಎಂದು ವೈದ್ಯರು ತಿಳಿಸಿದ್ದಾರೆ. ವಿಶ್ರಾಂತಿಯನ್ನು ಮಠದಲ್ಲಿ ಪಡೆದುಕೊಳ್ಳುವುದಾಗಿ ಪೇಜಾವರ ಸ್ವಾಮೀಜಿ ಈ ಹಿಂದೆ ತಿಳಿಸಿದ್ದರು.
ಪೇಜಾವರ ಸ್ವಾಮೀಜಿ ಅವರು ವಿಶ್ರಾಂತಿಯಲ್ಲಿರುವಾಗ ಕಿರಿಯ ಶ್ರೀಪಾದರು ಶ್ರೀಕೃಷ್ಣನ ಪೂಜಾ ಕೈಂಕರ್ಯವನ್ನು ನೆರವೇರಿಸುತ್ತಿದ್ದಾರೆ. ಒಟ್ಟಿನಲ್ಲಿ ಹಿರಿಯ ಪೇಜಾವರ ಶ್ರೀಗಳು ಶೀಘ್ರ ಗುಣಮುಖವಾಗಿ ಬರಲಿ. ಮತ್ತೆ ತನ್ನ ದೈನಂದಿನ ಪೂಜಾ ಕೈಂಕರ್ಯಗಳಲ್ಲಿ ಪಾಲ್ಗೊಳ್ಳಲಿ ಎಂದು ಲಕ್ಷಾಂತರ ಮಂದಿ ಹಾರೈಸುತ್ತಿದ್ದಾರೆ.