ನವದೆಹಲಿ, ಜನವರಿ 20: ಭಾರತೀಯ ಕ್ರಿಕೆಟ್ ಮಂಡಳಿಯ (ಬಿಸಿಸಿಐ) ಪಾರದರ್ಶಕ ಆಡಳಿತಕ್ಕಾಗಿ ನ್ಯಾ. ಆರ್. ಎಂ. ಲೋಧಾ ಸಮಿತಿಯು ಸೂಚಿಸಿದ್ದ ಶಿಫಾರಸುಗಳನ್ನು ಅಳವಡಿಸಿಕೊಳ್ಳುವಂತೆ ಕಳೆದ ವರ್ಷ ಜುಲೈ 18ರಂದು ತಾನು ನೀಡಿದ್ದ ತೀರ್ಪನ್ನು ಹಿಂಪಡೆಯಬೇಕೆಂದು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್ ಗೆ ಶುಕ್ರವಾರ ಮನವಿ ಸಲ್ಲಿಸಿದೆ.
ಕೇಂದ್ರ ಸರ್ಕಾರದ ಪರವಾಗಿ, ಅಟಾರ್ನಿ ಜನರಲ್ ಮುಕುಲ್ ರೋಹ್ಟಗಿ ಈ ಮನವಿಯನ್ನು ಸಲ್ಲಿಸಿದ್ದಾರೆ. ಸುಪ್ರೀಂ ಕೋರ್ಟ್ ನ ಈ ತೀರ್ಪಿನಿಂದಾಗಿ, ರಾಜ್ಯ ಮಟ್ಟದಲ್ಲಿ ಸಂಘ, ಸಂಸ್ಥೆಗಳನ್ನು ಸ್ಥಾಪಿಸುವಲ್ಲಿ ಸಂವಿಧಾನ ನೀಡಿರುವ ಸ್ವಾತಂತ್ರ್ಯದ ಹಕ್ಕನ್ನು ಉಲ್ಲಂಘಿಸಲಾಗಿದೆ ಎಂದು ಅವರು ವಿವರಿಸಿದ್ದಾರೆನ್ನಲಾಗಿದೆ.
ಏತನ್ಮಧ್ಯೆ, ಈ ಪ್ರಕರಣದಲ್ಲಿ ಅಮಿಕಸ್ ಕ್ಯೂರಿ ಆಗಿರುವ ಗೋಪಾಲ ಸುಬ್ರಮಣ್ಯಂ ಅವರು, ಭಾರತೀಯ ಕ್ರಿಕೆಟ್ ಮಂಡಳಿಯ ಆಡಳಿತ ಸಮಿತಿಯ ಸದಸ್ಯರ ಹೆಸರುಗಳುಳ್ಳ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದರು. ಮುಚ್ಚಿದ ಲಕೋಟೆಯಲ್ಲಿ ಸಲ್ಲಿಸಲಾದ ಈ ಪಟ್ಟಿಯಲ್ಲಿ ಒಟ್ಟು ಒಂಭತ್ತು ವ್ಯಕ್ತಿಗಳನ್ನು ಬಿಸಿಸಿಐ ಆಡಳಿತ ಮಂಡಳಿಗೆ ಶಿಫಾರಸು ಮಾಡಲಾಗಿದೆ.
ಆದರೆ, ಪಟ್ಟಿಯಲ್ಲಿ 70 ವರ್ಷಕ್ಕಿಂತ ಮೇಲ್ಪಟ್ಟವರೂ ಇದ್ದಾರಲ್ಲವೇ ಎಂದು ಪ್ರಶ್ನಿಸಿದ ನ್ಯಾಯಪೀಠ, ತಾನೇ ಪರಾಮರ್ಶಿಸಿ ಅಂತಿಮ ಪಟ್ಟಿಯನ್ನು ತಯಾರಿಸುವುದಾಗಿ ತಿಳಿಸಿತು.