ಭಾರತ-ಇಸ್ರೇಲ್ ಕೃಷಿ ಯೋಜನೆ: ಕರ್ನಾಟಕದಲ್ಲಿ 3 ಉತ್ಕೃಷ್ಟತಾ ಕೇಂದ್ರ ಸ್ಥಾಪನೆ
ನವದೆಹಲಿ, ಜೂನ್ 16: ಭಾರತ-ಇಸ್ರೇಲ್ ಕೃಷಿ ಯೋಜನೆ (ಐಐಎಪಿ) ಅಡಿ ಕರ್ನಾಟಕದಲ್ಲಿ ಸ್ಥಾಪಿಸಿರುವ 3 ಉತ್ಕೃಷ್ಟತಾ ಕೇಂದ್ರಗಳನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವ ನರೇಂದ್ರ ಸಿಂಗ್ ತೋಮರ್ ಜಂಟಿಯಾಗಿ ಉದ್ಘಾಟಿಸಿದರು. ತೋಟಗಾರಿಕೆ ಕ್ಷೇತ್ರದಲ್ಲಿ ಇಸ್ರೇಲಿ ತಂತ್ರಜ್ಞಾನಗಳನ್ನು ಅಳವಡಿಸಿಕೊಳ್ಳಲು ಈ ಯೋಜನೆ ಹೆಚ್ಚು ಸಹಕಾರಿ ಆಗಲಿದೆ.
ಭಾರತ ಸರ್ಕಾರದ ಕೃಷಿ ಮತ್ತು ರೈತ ಕಲ್ಯಾಣ ಸಚಿವಾಲಯದ ಎಂಐಡಿಎಚ್ ವಿಭಾಗ ಮತ್ತು ಇಸ್ರೇಲ್ನ ಅಂತರರಾಷ್ಟ್ರೀಯ ಅಭಿವೃದ್ಧಿ ಸಹಕಾರ ಸಂಸ್ಥೆ - ಎಂಎಎಸ್ಎಚ್ಎವಿ ಇಸ್ರೇಲ್ನ ಅತಿದೊಡ್ಡ ಸರ್ಕಾರದಿಂದ ಸರ್ಕಾರದ (ಜಿ 2 ಜಿ) ಸಹಕಾರವನ್ನು ಮುನ್ನಡೆಸುತ್ತಿವೆ. ದೇಶದಾದ್ಯಂತ 12 ರಾಜ್ಯಗಳಲ್ಲಿ 29 ಉತ್ಕೃಷ್ಟತಾ ಕೇಂದ್ರ (ಸಿಒಇ) ಗಳೊಂದಿಗೆ ಸುಧಾರಿತ ಇಸ್ರೇಲಿ ಕೃಷಿ- ತಂತ್ರಜ್ಞಾನವನ್ನು ಸ್ಥಳೀಯ ಪರಿಸ್ಥಿತಿಗಳಿಗೆ ಅನುಗುಣವಾಗಿ ಅಳವಡಿಸಿ ಅನುಷ್ಠಾನಗೊಳಿಸಲಾಗುತ್ತಿದೆ.
ಇಸ್ರೇಲ್ ಮಾದರಿ ಕೃಷಿ ಪದ್ಧತಿ ಅನುಷ್ಠಾನಕ್ಕೆ ಇಸ್ರೇಲ್ ತಂತ್ರಜ್ಞರ ನೆರವು
ಈ 29 ಕೇಂದ್ರ ಸ್ಥಾಪನೆಯ ಕಾರ್ಯಾಚರಣೆಯಲ್ಲಿ 3 ಸಿಒಇಗಳು ಕೇಂದ್ರಗಳು ಕರ್ನಾಟಕದಲ್ಲಿವೆ. ಕೋಲಾರದಲ್ಲಿ ಮಾವು ಬೆಳೆ, ಬಾಗಲಕೋಟೆಯಲ್ಲಿ ದಾಳಿಂಬೆ, ಧಾರವಾಡದಲ್ಲಿ ತರಕಾರಿಗಳಿಗೆ ಉತ್ಕೃಷ್ಟತಾ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಈ ಉತ್ಕೃಷ್ಟತಾ ಕೇಂದ್ರಗಳು ಜ್ಞಾನ ವೃದ್ಧಿ ಉತ್ತಮ ಅಭ್ಯಾಸ ಪ್ರದರ್ಶನದ ಜೊತೆಗೆ ಅಧಿಕಾರಿಗಳು ಮತ್ತು ರೈತರಿಗೆ ತರಬೇತಿ ನೀಡುತ್ತವೆ.
ಈ ಉದ್ಘಾಟನಾ ಸಮಾರಂಭದಲ್ಲಿ ಭಾರತ ಸರ್ಕಾರದ ಕೃಷಿ, ಸಹಕಾರ ಮತ್ತು ರೈತರ ಕಲ್ಯಾಣ ಇಲಾಖೆಯ ಕಾರ್ಯದರ್ಶಿ ಸಂಜಯ್ ಅಗರ್ವಾಲ್, ಇಸ್ರೇಲಿ ವಿದೇಶಾಂಗ ಸಚಿವಾಲಯದ ಹಿರಿಯ ಅಧಿಕಾರಿಗಳು, ಭಾರತ ಸರ್ಕಾರದ ಕೃಷಿ ಮತ್ತು ರೈತ ಕಲ್ಯಾಣ ಸಚಿವಾಲಯ ಮತ್ತು ಕರ್ನಾಟಕ ಸರ್ಕಾರದ ಅಧಿಕಾರಿಗಳು ಭಾಗವಹಿಸಿದ್ದರು. ವರ್ಚುವಲ್ ಸಮಾರಂಭಕ್ಕೆ ಎಲ್ಲಾ ರಾಜ್ಯ ತೋಟಗಾರಿಕೆ ಮಿಷನ್ಗಳ ಹಿರಿಯ ಅಧಿಕಾರಿಗಳು ಸಾಕ್ಷಿಯಾದರು.
ದೇಶೀಯ ಕೃಷಿಯಲ್ಲಿ ಇಸ್ರೇಲ್ ತಂತ್ರಜ್ಞಾನ
ಕರ್ನಾಟಕದಲ್ಲಿ ಭಾರತ-ಇಸ್ರೇಲ್ ಕೃಷಿ ಯೋಜನೆ (ಐಐಎಪಿ) ಅಡಿಯಲ್ಲಿ ಅತ್ಯಾಧುನಿಕ ತಂತ್ರಜ್ಞಾನಗಳನ್ನು ವರ್ಗಾಯಿಸಲು ಸಮ್ಮತಿಸಿದ ಇಸ್ರೇಲ್ ದೇಶಕ್ಕೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಧನ್ಯವಾದ ತಿಳಿಸಿದರು. ರೈತರ ಆರ್ಥಿಕ ಸ್ಥಿತಿ ಸುಧಾರಿಸಿ ತೋಟಗಾರಿಕೆ ಉತ್ಪನ್ನಗಳ ಉತ್ಪಾದಿಸುವುದು. ಉತ್ಪಾದಕತೆ ಮತ್ತು ಗುಣಮಟ್ಟವನ್ನು ಸುಧಾರಿಸುವುದರ ಜೊತೆ ಸುಸ್ಥಿರತೆ ಸಾಧಿಸಲು ಈ ಉತ್ಕೃಷ್ಟತಾ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಇದಕ್ಕಾಗಿ ಆರ್ಥಿಕ ಮತ್ತು ತಾಂತ್ರಿಕ ನೆರವು ನೀಡಿದ ಭಾರತ ಸರ್ಕಾರ ಮತ್ತು ಇಸ್ರೇಲ್ ದೇಶ ಸಹಕಾರ ನೀಡಿವೆ.
ಇಸ್ರೇಲ್ ತಂತ್ರಜ್ಞಾನ ಬಳಕೆ ಬಗ್ಗೆ ತೋಮರ್ ಉಲ್ಲೇಖ
"ಕೇಂದ್ರ ಸರ್ಕಾರವು ಕರ್ನಾಟಕದ ಕೃಷಿಕ ಸಮುದಾಯಕ್ಕೆ ಇತ್ತೀಚಿನ ಇಸ್ರೇಲಿ ತಂತ್ರಜ್ಞಾನಗಳು ಲಭ್ಯವಾಗಲು ಸಹಾಯ ಮಾಡುತ್ತದೆ. ಉತ್ಪಾದನೆ ಮತ್ತು ಉತ್ಪಾದಕತೆಯನ್ನು ಹೆಚ್ಚಿಸಲು ರೈತರ ಆದಾಯವನ್ನು ಹೆಚ್ಚಿಸಲು ಸಹಾಯ ಮಾಡುತ್ತೇವೆ," ಎಂದು ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವ ಶ್ರೀ ನರೇಂದ್ರ ಸಿಂಗ್ ತೋಮರ್ ಭರವಸೆ ನೀಡಿದರು. "ಈ ಸಿಒಇಗಳು ವಾರ್ಷಿಕವಾಗಿ 50,000 ಕಸಿ ಉತ್ಪಾದನೆ ಮತ್ತು 25 ಲಕ್ಷ ತರಕಾರಿ ಸಸಿಗಳ ಉತ್ಪಾದನೆಯ ಸಾಮರ್ಥ್ಯವನ್ನು ಹೊಂದಿವೆ. ತೋಟಗಾರಿಕೆಯಲ್ಲಿ ಆಧುನಿಕ ಕೃಷಿ ಪದ್ಧತಿಗಳ ಬಗ್ಗೆ ಜ್ಞಾನ ಪಡೆಯಲು ಸುಮಾರು 20,000 ರೈತರು ಈ ಸಿಒಇಗಳಿಗೆ ಭೇಟಿ ನೀಡಿದ್ದಾರೆ," ಎಂದು ತಿಳಿಸಿದ್ದಾರೆ.
ರಾಜ್ಯದಲ್ಲಿ ತಂತ್ರಜ್ಞಾನ ಅಳವಡಿಸಿಕೊಳ್ಳಲು ಅವಕಾಶ
"ಕರ್ನಾಟಕದಲ್ಲಿ ತೋಟಗಾರಿಕೆ ಉತ್ಪನ್ನಗಳ ಉತ್ಪಾದನೆ ಮತ್ತು ಉತ್ಪಾದಕತೆ ಹೆಚ್ಚಿಸಲು, ಬೆಳೆ ಉತ್ಪಾದನೆ ಮತ್ತು ಕೊಯ್ಲಿನ ನಂತರದ ನಿರ್ವಹಣೆಯಲ್ಲಿ ಹೊಸ ತಂತ್ರಜ್ಞಾನ ಅಳವಡಿಸಿಕೊಳ್ಳಲು ಸಾಕಷ್ಟು ಅವಕಾಶಗಳಿವೆ. ಇತ್ತೀಚಿನ ತಂತ್ರಜ್ಞಾನಗಳನ್ನು ರೈತರಿಗೆ ಒದಗಿಸಲು, ಭಾರತ ಸರ್ಕಾರವು ಇಸ್ರೇಲ್ ಸಹಯೋಗದೊಂದಿಗೆ ಕೋಲಾರದಲ್ಲಿ ಮಾವಿನ ಉತ್ಕೃಷ್ಟ ಕೇಂದ್ರ, ಬಾಗಲಕೋಟೆಯಲ್ಲಿ ದಾಳಿಂಬೆ ಮತ್ತು ಧಾರವಾಡದಲ್ಲಿ ತರಕಾರಿಗಳ ಉತ್ಕೃಷ್ಟ ಕೇಂದ್ರಗಳನ್ನು ಇಂಡೋ ಇಸ್ರೇಲ್ ಕೃಷಿ ಯೋಜನೆ (ಐಐಎಪಿ) ಅಡಿಯಲ್ಲಿ ಸ್ಥಾಪಿಸಲು ಸಹಾಯ ಮಾಡಿದೆ. ಈ ಕೇಂದ್ರಗಳು ಅಭಿವೃದ್ಧಿಪಡಿಸಿದ ನವೀನ ತಂತ್ರಜ್ಞಾನಗಳನ್ನು ಅಳವಡಿಸಿಕೊಳ್ಳಲು ಕರ್ನಾಟಕ ರೈತರು ಬಹಳ ಪ್ರಗತಿಪರರಾಗಿದ್ದಾರೆ. ಈ ಕೇಂದ್ರಗಳು ಉತ್ಪಾದನೆಯಲ್ಲಿ ಹೆಚ್ಚಳ, ಉತ್ಪಾದಕತೆಯ ವೆಚ್ಚವನ್ನು ಕಡಿಮೆ ಮಾಡುವುದರ ಮೂಲಕ ರೈತರ ಆದಾಯವನ್ನು ಹೆಚ್ಚಿಸುತ್ತವೆ," ಎಂದು ಕರ್ನಾಟಕದ ತೋಟಗಾರಿಕೆ ಮತ್ತು ರೇಷ್ಮೆ ಸಚಿವ ಆರ್. ಶಂಕರ್ ಹೇಳಿದ್ದಾರೆ.
ಇಂಡೋ-ಇಸ್ರೇಲ್ ನಡುವಿನ ಸಂಬಂಧ ಬಲಪಡಿಸಲು ಉತ್ಸುಕ
"ಇಂಡೋ-ಇಸ್ರೇಲಿ ಸಹಭಾಗಿತ್ವದ ಮಹತ್ವದ ಭಾಗವಾಗಿರುವ ಕೃಷಿಯಲ್ಲಿ ಕರ್ನಾಟಕ ಸರ್ಕಾರದೊಂದಿಗೆ ಸಹಯೋಗ ಹೊಂದಲು ನಾವು ಹೆಮ್ಮೆ ಪಡುತ್ತೇವೆ ಮತ್ತು ಉತ್ಸುಕರಾಗಿದ್ದೇವೆ. ನಮ್ಮ ದೇಶಗಳ ನಡುವಿನ ಸಂಬಂಧಗಳು ಬಲಗೊಳ್ಳುತ್ತಿರುವ ಮತ್ತು ವೇಗವಾಗಿ ವಿಸ್ತರಿಸುತ್ತಿರುವ ಸಂದರ್ಭದಲ್ಲಿ ನಾವು ಮೂರು ವಿಭಿನ್ನ ಕೇಂದ್ರಗಳನ್ನು ಉದ್ಘಾಟಿಸಿದ್ದೇವೆ. ಇದು ರಾಜ್ಯದ ಕೃಷಿ ಕ್ಷೇತ್ರದ ಅಭಿವೃದ್ಧಿಯಲ್ಲಿ ಒಂದು ಮೈಲಿಗಲ್ಲಾಗಿದ್ದು, ಸ್ಥಳೀಯ ರೈತರಿಗೆ ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಸ್ಪರ್ಧೆಯ ಅವಕಾಶ ನೀಡುತ್ತದೆ. ಪ್ರಧಾನಿ ನರೇಂದ್ರ ಮೋದಿ ದೂರದೃಷ್ಟಿ ಅನುಗುಣವಾಗಿ ರೈತರ ಆದಾಯ ದ್ವಿಗುಣಗೊಳಿಸಲು ಇದು ಸಹಕಾರಿಯಾಗುತ್ತದೆ" ಎಂದು ಭಾರತದಲ್ಲಿನ ಇಸ್ರೇಲ್ ರಾಯಭಾರಿ ಡಾ.ರಾನ್ ಮಲ್ಕಾ ಹೇಳಿದ್ದಾರೆ.