ಕಲಬುರಗಿ; ಕೃಷಿ ಚಟುವಟಿಕೆ ಆರಂಭ, 3.64 ಲಕ್ಷ ಟನ್ ಉತ್ಪಾದನೆ ಗುರಿ
ಕಲಬುರಗಿ, ಜೂನ್ 02 : ಕಲಬುರಗಿ ಜಿಲ್ಲೆಯಲ್ಲಿ ಮಳೆ ಆರಂಭವಾಗಿದೆ. ರೈತರು ತಮ್ಮ ಜಮೀನುಗಳನ್ನು ಬಿತ್ತನೆಗೆ ಪೂರ್ವ ತಯಾರಿಯನ್ನು ಮಾಡಿಕೊಳ್ಳಲು ಅನುಕೂಲಕರವಾದ ವಾತಾವರಣ ನಿರ್ಮಾಣವಾಗಿದೆ.
"ಕಲಬುರಗಿ ತಾಲೂಕಿನಲ್ಲಿ 2020-21ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಒಟ್ಟು 99,671 ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಗುರಿ ಹೊಂದಲಾಗಿದೆ. 3.64 ಲಕ್ಷ ಟನ್ ಉತ್ಪಾದನಾ ಗುರಿಯನ್ನು ಹೊಂದಲಾಗಿದೆ" ಎಂದು ಸಹಾಯಕ ಕೃಷಿ ನಿರ್ದೇಶಕ ಚಂದ್ರಕಾಂತ ಜೀವಣಗಿ ಹೇಳಿದ್ದಾರೆ.
ಕೃಷಿ ಚಟುವಟಿಕೆಗಳು ಆರಂಭವಾಗುತ್ತಿವೆ. ಪ್ರಸಕ್ತ ಹಂಗಾಮಿಗಾಗಿ ಬೇಕಾಗುವ ರಸಗೊಬ್ಬರವನ್ನು ಎಲ್ಲಾ ಹೋಬಳಿಗಳ ವ್ಯವಸಾಯ ಸೇವಾ ಸಹಕಾರ ಸಂಘಗಳ ಮೂಲಕ ಹಾಗೂ ಅಧಿಕೃತ ರಸಗೊಬ್ಬರ ಮಾರಾಟಗಾರರ ಮೂಲಕ ವಿತರಣೆ ಮಾಡಲು ವ್ಯವಸ್ಥೆ ಮಾಡಲಾಗಿದೆ ಎಂದು ರೈತರಿಗೆ ಮಾಹಿತಿ ನೀಡಲಾಗಿದೆ.

ರೈತರು ತಮ್ಮ ತಮ್ಮ ವ್ಯಾಪ್ತಿಯಲ್ಲಿ ಬರುವ ವ್ಯವಸಾಯ ಸೇವಾ ಸಹಕಾರ ಸಂಘಗಳ ಮೂಲಕ ಹಾಗೂ ಅಧಿಕೃತ ಮಾರಾಟಗಾರರ ಮೂಲಕ ಮಾತ್ರ ರಸಗೊಬ್ಬರವನ್ನು ಖರೀದಿಸಬೇಕು. ಏಜೆಂಟ್ಗಳ ಮೂಲಕ ಬಿತ್ತನೆ ಬೀಜ, ಗೊಬ್ಬರ ಖರೀದಿ ಬೇಡ ಎಂದು ಸಲಹೆ ನೀಡಲಾಗಿದೆ.
ರೈತರಿಗೆ ರಿಯಾಯಿತಿ ದರದಲ್ಲಿ ಬಿತ್ತನೆ ಬೀಜಗಳಾದ ತೊಗರಿ, ಹೆಸರು, ಉದ್ದು, ಸಜ್ಜೆ, ಮೆಕ್ಕೆಜೋಳ, ಸೂರ್ಯಕಾಂತಿ ಮತ್ತು ಸೊಯಾಬಿನ್ ವಿತರಣೆ ಮಾಡಲು ರೈತ ಸಂಪರ್ಕ ಕೇಂದ್ರಗಳಲ್ಲಿ ದಾಸ್ತಾನು ಮಾಡಲಾಗಿದೆ.
ಪ್ರಸ್ತುತ ಕೊರೊನಾ ವೈರಸ್ ಸೋಂಕಿನ ಕಾರಣಕ್ಕಾಗಿ ರೈತ ಸಂಪರ್ಕ ಕೇಂದ್ರವಲ್ಲದೇ ಹೆಚ್ಚುವರಿ ಕೇಂದ್ರಗಳನ್ನು ಸ್ಥಾಪಿಸಿ ರೈತರಿಗೆ ಬೀಜ ವಿತರಣೆಗೆ ಕ್ರಮ ಕೈಗೊಳ್ಳಲಾಗುತ್ತಿದೆ. ನಕಲಿ ಬೀಜ ಮಾರಾಟದ ಬಗ್ಗೆ ಎಚ್ಚರದಿಂದ ಇರುವಂತೆ ಸಲಹೆ ನೀಡಲಾಗಿದೆ.
ರೈತರು ಬಿತ್ತನೆಗೆ ಪೂರ್ವ ತಯಾರಿಯನ್ನು ಕೈಗೊಳ್ಳಲು ಈಗ ವಾತಾವರಣ ಅನುಕೂಲವಾಗಿದೆ. ಕನಿಷ್ಠ 60 ರಿಂದ 80 ಮಿ.ಮೀ ಮಳೆಯಾದ ನಂತರ ಭೂಮಿಯು ಹದವಾಗಿ ಬಿತ್ತನೆಗೆ ಯೋಗ್ಯವಾಗುತ್ತದೆ. ನಂತರ ಬಿತ್ತನೆ ಕೈಗೊಳ್ಳಬಹುದು ಎಂದು ಸೂಚನೆ ನೀಡಲಾಗಿದೆ.












Click it and Unblock the Notifications