ಚಳ್ಳಕೆರೆಯಲ್ಲಿ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರ ಸ್ಥಾಪನೆ; ಜಾಗ ಮಂಜೂರಾತಿಗೆ ಅನುಮೋದನೆ
ಚಿತ್ರದುರ್ಗ, ಜುಲೈ 6: ಕೃಷಿ ಕ್ಷೇತ್ರದಲ್ಲಿ ಮಹತ್ವದ ಬದಲಾವಣೆ ತರುವ ನಿಟ್ಟಿನಲ್ಲಿ ಚಿತ್ರದುರ್ಗದ ಚಳ್ಳಕೆರೆ ತಾಲೂಕಿನಲ್ಲಿ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರ ಸ್ಥಾಪನೆ ಉದ್ದೇಶಕ್ಕಾಗಿ ಜಾಗ ಮಂಜೂರು ಮಾಡಲು ಸರ್ಕಾರ ಪೂರ್ವಾನುಮೋದನೆ ನೀಡಿರುವುದಾಗಿ ತಿಳಿದುಬಂದಿದೆ.
ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನಲ್ಲಿ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರ ಸ್ಥಾಪನೆಗಾಗಿ ಅಂದಿನ ಕಾಂಗ್ರೆಸ್ ಸರ್ಕಾರಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಲಾಗಿದ್ದು, ಈಗ ಅದರ ಫಲ ದೊರೆತಿದೆ.
ಟೊಮ್ಯಾಟೋ ಬೆಳೆಗಾರರು ವಿಮಾ ನೋಂದಣಿಗೆ ಅರ್ಜಿ ಹಾಕಿ
ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಕಸಬಾ ಹೋಬಳಿಯ ಸಾಣಿಕೆರೆ ಗ್ರಾಮದಲ್ಲಿನ 95.13 ಎಕರೆ ಗೋಮಾಳ ಜಮೀನನ್ನು, ಕರ್ನಾಟಕ ಭೂ ಕಂದಾಯ ನಿಯಮಗಳ 1966ರ, 97(4) ರನ್ವಯ ಗೋಮಾಳ ಶೀರ್ಷಿಕೆಯಿಂದ ತಗ್ಗಿಸಿ, ಕರ್ನಾಟಕ ಭೂ ಮಂಜೂರಾತಿ ನಿಯಮ 1969, 20(1)(ಸಿ) ರನ್ವಯ ಮಾರುಕಟ್ಟೆ ದರದ ಶೇಕಡಾ 50ರಷ್ಟು ದರ ಹಾಗೂ ನಿಯಮಾನುಸಾರ ಇತರೆ ಶುಲ್ಕಗಳನ್ನು ವಿಧಿಸಲಾಗಿದೆ. ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರದ ಸ್ಥಾಪನೆಯ ಉದ್ದೇಶಕ್ಕಾಗಿ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾನಿಲಯ ಶಿವಮೊಗ್ಗ ಇವರಿಗೆ ಮಂಜೂರು ಮಾಡಲು ಸರ್ಕಾರದ ಪೂರ್ವಾನುಮೋದನೆ ನೀಡಲಾಗಿದೆ ಎಂದು ನಿರ್ದೇಶಿಸಿ ಕಂದಾಯ ಇಲಾಖೆ ಸರ್ಕಾರದ ಅಧೀನ ಕಾರ್ಯದರ್ಶಿ, ಚಿತ್ರದುರ್ಗ ಜಿಲ್ಲಾಧಿಕಾರಿಗೆ ಆದೇಶಿಸಿದ್ದಾರೆ.
ಶಾಸಕ ಟಿ. ರಘುಮೂರ್ತಿ ನಿನ್ನೆ ಹಿರಿಯೂರು ತಾಲ್ಲೂಕಿನ ಬಬ್ಬೂರು ಫಾರಂನಲ್ಲಿರುವ ತೋಟಗಾರಿಕಾ ವಿಶ್ವವಿದ್ಯಾಲಯಕ್ಕೆ ಭೇಟಿ ನೀಡಿ ಅಲ್ಲಿನ ಅಧಿಕಾರಿಗಳು ಹಾಗೂ ಕುಲಪತಿಗಳ ಜೊತೆಗೆ ಸಭೆ ನಡೆಸಿದ್ದಾರೆ.