ತೋಟಗಾರಿಕಾ ಬೆಳೆಗಳಿಗೆ ಸಹಾಯಧನ; ಅರ್ಜಿ ಹಾಕಿ
ಬೆಂಗಳೂರು, ನವೆಂಬರ್ 26 : ತೋಟಗಾರಿಕೆ ಇಲಾಖೆ ವತಿಯಿಂದ 2020-21ನೇ ಸಾಲಿನಲ್ಲಿ ತೋಟಗಾರಿಕಾ ಬೆಳೆಗಳಿಗೆ ಸಹಾಯಧನವನ್ನು ನೀಡಲಾಗುತ್ತದೆ. ಬೆಳೆಗಳಿಗೆ ಹನಿ ನೀರಾವರಿ ಅಳವಡಿಸಿರುವ ರೈತರು ಅರ್ಜಿಗಳನ್ನು ಸಲ್ಲಿಸಬಹುದು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ, ದೊಡ್ಡಬಳ್ಳಾಪುರ, ಹೊಸಕೋಟೆ ಮತ್ತು ನೆಲಮಂಗಲ ತಾಲೂಕುಗಳಲ್ಲಿ ಈ ಯೋಜನೆಯನ್ನು ಇಲಾಖೆ ಅನುಷ್ಠಾನಗೊಳಿಸುತ್ತಿದೆ. ಆಸಕ್ತ ರೈತರು ಅರ್ಜಿಗಳನ್ನು ಸಲ್ಲಿಕೆ ಮಾಡಬಹುದು.
ಬೆಳೆಗಳಿಗೆ ಹನಿ ನೀರಾವರಿ ಅಳವಡಿಸುವ ರೈತರಿಗೆ ಆಯಾ ಬೆಳೆಗಳು ಮತ್ತು ಬೆಳೆಗಳ ಅಂತರಕ್ಕನುಗುಣವಾಗಿ ಮಾರ್ಗಸೂಚಿಗಳ ಅನ್ವಯ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ/ ಸಾಮಾನ್ಯ ರೈತರಿಗೆ ಪ್ರಥಮ 2 ಹೆಕ್ಟೇರ್ಗೆ ನಿಗದಿಪಡಿಸಿರುವ ವೆಚ್ಚದ ಶೇ.90ರಷ್ಟು ಸಹಾಯಧನವನ್ನು ನೀಡಲಾಗುತ್ತದೆ.

ಮೂರು ಹೆಕ್ಟೇರ್ಗೆ ಶೇ.45ರಷ್ಟು ಸಹಾಯಧನವನ್ನು ನೀಡಲಾಗುವುದು (ತರಕಾರಿ ಹಾಗೂ ವಾಣಿಜ್ಯ ಹೂ ಬೆಳೆಗಳಿಗೆ ಗರಿಷ್ಟ 2 ಹೆಕ್ಟೇರ್ ವರೆಗೆ ಸಹಾಯಧನವನ್ನು ಪಡೆಯಬಹುದು) ಈ ಯೋಜನೆಯಡಿ ಸೌಲಭ್ಯವನ್ನು ಪ್ರತಿ ಫಲಾನುಭವಿ ಕುಟುಂಬಕ್ಕೆ 5 ಹೆಕ್ಟೇರ್ ಪ್ರದೇಶದವರೆಗೆ ಮಿತಿಗೊಳಿಸಲಾಗಿದೆ.
ತೋಟಗಾರಿಕೆಯಲ್ಲಿ ಕೃಷಿ ಮಾಡುತ್ತಿರುವ ಹಾಗೂ ನೀರಾವರಿ ಮೂಲ ಹೊಂದಿರುವ ರೈತರು ತಮ್ಮ ಜಮೀನಿಗೆ ಹನಿ ನೀರಾವರಿ ಅಳವಡಿಸಿಕೊಳ್ಳಲು ಆಸಕ್ತರಾಗಿದ್ದಲ್ಲಿ, ತಮ್ಮ ಜಮೀನು ವ್ಯಾಪ್ತಿಯ ಹೋಬಳಿಯ ರೈತ ಸಂಪರ್ಕ ಕೇಂದ್ರ ಅಥವಾ ತಾಲೂಕು ಕಚೇರಿಯ ತೋಟಗಾರಿಕೆ ಅಧಿಕಾರಿಗಳನ್ನು ಸಂಪರ್ಕಿಸಬಹುದು.
ಹನಿ ನೀರಾವರಿ ಅಳವಡಿಸಲು ನಿಗದಿತ ಅರ್ಜಿಯನ್ನು ಪಡೆಯಬಹುದು, ಅರ್ಜಿ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ದೊಡ್ಡಬಳ್ಳಾಪುರ, ದೇವನಹಳ್ಳಿ ಹೊಸಕೋಟೆ, ನೆಲಮಂಗಲ ತಾಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರನ್ನು ಸಂಪರ್ಕಿಸಿ.












Click it and Unblock the Notifications