ಧಾರವಾಡ: ಅನುಷ್ಠಾನಗೊಂಡ ರೈತಸ್ನೇಹಿ ಮಹತ್ವಾಕಾಂಕ್ಷಿ ಯೋಜನೆಗಳ ವಿವರ
ಧಾರವಾಡ, ಆಗಸ್ಟ್, 15: ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ದೇಶದ ಸರ್ವಾಂಗೀಣ ಪ್ರಗತಿಗೆ ಹತ್ತು ಹಲವಾರು ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುತ್ತಿವೆ. ಜಿಲ್ಲೆಯಲ್ಲಿ ಸುಮಾರು 16 ಸಾವಿರ ಕ್ವಿಂಟಲ್ಗೂ ಅಧಿಕ ಬಿತ್ತನೆ ಬೀಜ, 57 ಸಾವಿರ ಮೆಟ್ರಿಕ್ ಟನ್ ರಸಗೊಬ್ಬರಗಳನ್ನು ರೈತರಿಗೆ ಒದಗಿಸಲಾಗಿದೆ. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ಭೂ ಒಡೆತನ ಹೊಂದಿರುವ ಪ್ರತಿ ಅರ್ಹ ರೈತರಿಗೆ ವಾರ್ಷಿಕ 10ಸಾವಿರ ರೂಪಾಯಿ ನೆರವು ನೀಡಲಾಗುತ್ತಿದೆ. ಜಿಲ್ಲೆಯ 1,35,208 ರೈತರ ಬ್ಯಾಂಕ್ ಖಾತೆಗಳಿಗೆ 365.20 ಕೋಟಿ ರೂಪಾಯಿಗಳನ್ನು ವರ್ಗಾವಣೆ ಮಾಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಹಾಲಪ್ಪ ಆಚಾರ್ ಹೇಳಿದರು.
ಧಾರವಾಡ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ 75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವ ಧ್ವಜಾರೋಹಣವನ್ನು ಮಾಡಲಾಯಿತು. ಬಳಿಕ ಮಾತನಾಡಿದ ಅವರು ಭೂಮಿಯ ಫಲವತ್ತತೆ ಹೆಚ್ಚಿಸಲು ನ್ಯಾನೋ ಯೂರಿಯಾವನ್ನು ರೈತರು ಬಳಸುತ್ತಿದ್ದಾರೆ. ಸುಮಾರು 30 ಸಾವಿರ ಲೀಟರ್ಗೂ ಅಧಿಕ ಪ್ರಮಾಣದಲ್ಲಿ ಈ ಗೊಬ್ಬರವನ್ನು ಧಾರವಾಡ ಜಿಲ್ಲೆಯಲ್ಲಿ ಬಳಸಿದ್ದಾರೆ.
ಧಾರವಾಡ ಜಿಲ್ಲೆಯಲ್ಲಿರುವ ತುಪ್ಪರಿಹಳ್ಳವು ಪ್ರತಿವರ್ಷ ಮಳೆಗಾಲದಲ್ಲಿ ಮೈದುಂಬಿ ಹರಿಯುತ್ತದೆ. ಪ್ರವಾಹ ಉಂಟಾದರೆ ಸುಮಾರು 1.5 ಟಿಎಂಸಿ ಪ್ರಮಾಣದ ನೀರು ಬೆಣ್ಣೆಹಳ್ಳಕ್ಕೆ ಸೇರುತ್ತದೆ. ಈ ನೀರನ್ನು ಸದ್ಬಳಕೆ ಮಾಡಿಕೊಂಡು ಕೃಷಿ ಚಟುವಟಿಕೆಗಳಿಗೆ ಹರಿಸಲಾಗುತ್ತದೆ. ಹುಬ್ಬಳ್ಳಿ ಹಾಗೂ ನವಲಗುಂದ ತಾಲೂಕುಗಳಲ್ಲಿ ಸುಮಾರು 10 ಸಾವಿರ ಹೆಕ್ಟೇರ್ ಜಮೀನಿಗೆ ನೀರಾವರಿ ಸೌಲಭ್ಯ ಕಲ್ಪಿಸಲಾಗಿದೆ. ಶ್ರೀ ಯೋಗೇಶ್ವರ ಏತನೀರಾವರಿ ಯೋಜನೆ ರೂಪಿಸಲಾಗಿದ್ದು, ಇದು ರೈತರಿಗೆ ಅನುಕೂಲವಾಗಿದೆ ಎಂದರು.

ಜಿಲ್ಲೆಯಲ್ಲಿ ಎಷ್ಟು ಮನೆಗಳಿಗೆ ನೀರಿನ ಸಂಪರ್ಕ?
ಸಾರ್ವಜನಿಕ ಹಾಗೂ ಖಾಸಗಿ ಸಹಭಾಗಿತ್ವದಲ್ಲಿ ನವಲಗುಂದದಲ್ಲಿ ಬೃಹತ್ ಜವಳಿ ಪಾರ್ಕ್ ಅನ್ನು ಸ್ಥಾಪಿಸಲಾಗುತ್ತಿದೆ. ಇದರಿಂದ ಸುಮಾರು 3 ಸಾವಿರ ಜನರಿಗೆ ಉದ್ಯೋಗ ದೊರೆಯಲಿದೆ. ಜಲ ಜೀವನ ಮಿಷನ್ನಲ್ಲಿ 'ಮನೆಮನೆಗೆ ಗಂಗೆ' ಯೋಜನೆಯಡಿ 363 ಕೋಟಿ ರೂಪಾಯಿಗಳ ವೆಚ್ಚದಲ್ಲಿ ಸುಮಾರು 1 ಲಕ್ಷಕ್ಕೂ ಅಧಿಕ ಮನೆಗಳಿಗೆ ನೀರಿನ ಸಂಪರ್ಕ ಕಲ್ಪಿಸಲಾಗಿದೆ.

ಗ್ರಾ.ಪಂಚಾಯತಿ, ಆರೋಗ್ಯ ಕೇಂದ್ರಗಳ ಅಭಿವೃದ್ಧಿ
ಪ್ರಧಾನಮಂತ್ರಿಗಳ ಮಹಾತ್ವಾಕಾಂಕ್ಷೆಯ ಅಮೃತ ಸರೋವರ ಯೋಜನೆಯಡಿಯಲ್ಲಿ ಜಿಲ್ಲೆಯ 100ಕ್ಕೂ ಅಧಿಕ ಕೆರೆ ಹಾಗೂ ಜಲಮೂಲಗಳನ್ನು ಅಭಿವೃದ್ಧಿಪಡಿಸಲಾಗಿದೆ. ಬೃಹತ್ ನೀರಾವರಿ ಯೋಜನೆಗೆ 50 ಕೋಟಿ ರೂಪಾಯಿಗಳ ವಿಶೇಷ ಅನುದಾನ ನೀಡಲಾಗಿದೆ. ವಿವಿಧ ಕೈಗಾರಿಕೆಗಳ ಸಿಎಸ್ಆರ್ ಹಾಗೂ ನರೇಗಾ ಯೋಜನೆಯಡಿಯಲ್ಲಿ ಇದನ್ನು ಅಭಿವೃದ್ಧಿಪಡಿಸಲಾಗುತ್ತಿದೆ. ರಾಷ್ಟ್ರದಲ್ಲಿಯೇ ವಿನೂತನ ಶೈಲಿಯಲ್ಲಿ ಈ ಯೋಜನೆ ಅನುಷ್ಠಾನ ಆಗಲಿದೆ ಎಂದು ಹೇಳಿದರು. ಅಮೃತ ಗ್ರಾಮ ಪಂಚಾಯತ್ ಯೋಜನೆಯಡಿ 35 ಗ್ರಾಮ ಪಂಚಾಯತಿಗಳನ್ನು ಅಭಿವೃದ್ಧಿ ಪಡಿಸಲಾಗುತ್ತಿದೆ. ಅಮೃತ ಆರೋಗ್ಯ ಮೂಲಸೌಕರ್ಯ ಉನ್ನತೀಕರಣ ಯೋಜನೆಯಲ್ಲಿ ಜಿಲ್ಲೆಯ 25 ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಮೂಲಸೌಕರ್ಯಗಳನ್ನು ಒದಗಿಸಲಾಗಿದೆ ಎಂದರು.

ಮನೆಗಳ ನಿರ್ಮಾಣಕ್ಕೆ ವೆಚ್ಚ ಎಷ್ಟು?
ಧಾರವಾಡ ತಾಲೂಕಿನ ಮಾದನಭಾವಿ ಗ್ರಾಮದಲ್ಲಿ ಗೋಶಾಲೆ ನಿರ್ಮಿಸಲಾಗುತ್ತಿದೆ. ಹುಬ್ಬಳ್ಳಿ ಹಾಗೂ ಕಲಘಟಗಿ ತಾಲೂಕಿನಲ್ಲಿ 2 ಹೊಸ ಗೋಶಾಲೆಗಳನ್ನು ಕೂಡ ಸ್ಥಾಪಿಸಲಾಗುವುದು. ಪ್ರಧಾನಮಂತ್ರಿ ಆವಾಸ್ ಯೋಜನೆಯ ಸರ್ವರಿಗೂ ಸೂರು ಕಾರ್ಯಕ್ರಮದಡಿ ಸರ್ಕಾರ ಸುಮಾರು 48 ಕೋಟಿ ರೂಪಾಯಿಗಳ ವೆಚ್ಚದಲ್ಲಿ7,692 ಮನೆಗಳನ್ನು ನಿರ್ಮಾಣ ಮಾಡಲಾಗುವದು.
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗಗಳು, ಅಲ್ಪ ಸಂಖ್ಯಾತರು ಹಾಗೂ ಇತರೆ ವರ್ಗಗಳ ಮಕ್ಕಳ ಉನ್ನತ ವಿದ್ಯಾಭ್ಯಾಸಕ್ಕೆ ಪ್ರೋತ್ಸಾಹಿಸಲಾಗುತ್ತದೆ. ಸಾವಿರ ವಿದ್ಯಾರ್ಥಿಗಳ ಸಾಮರ್ಥ್ಯದ 'ದೀನದಯಾಳ್ ಉಪಾಧ್ಯಾಯ ಸೌಹಾರ್ದ ವಿದ್ಯಾರ್ಥಿ ನಿಲಯ'ಗಳು ಸ್ಥಾಪನೆಯಾಗುತ್ತಿವೆ. ಧಾರವಾಡ ಸೇರಿ ರಾಜ್ಯದ 5 ನಗರಗಳಲ್ಲಿ ಈ ವಿದ್ಯಾರ್ಥಿ ನಿಲಯಗಳು ಸ್ಥಾಪನೆಯಾಗುತ್ತಿವೆ. ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯ ಆವರಣದಲ್ಲಿ ಬಹುಮಹಡಿ ಹಾಸ್ಟೇಲ್ ತಲೆ ಎತ್ತಲಿದೆ ಎಂದು ಸಚಿವರು ಹೇಳಿದರು.

ಹೈಟೆಕ್ ಚಿಕಿತ್ಸಾ ಕೇಂದ್ರಗಳ ಸ್ಥಾಪನೆಗೆ ಸಜ್ಜು
ಬೈಪಾಸ್ ರಸ್ತೆಯನ್ನು ಆರು ಪಥದ ರಸ್ತೆಯನ್ನಾಗಿ ಅಭಿವೃದ್ಧಿಪಡಿಸಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು 579 ಕೋಟಿ ರೂಪಾಯಿ ನೀಡಿದೆ. ಹುಬ್ಬಳ್ಳಿ ಧಾರವಾಡ ಮಧ್ಯದ ರಾಷ್ಟ್ರೀಯ ಹೆದ್ದಾರಿ 48ರ ದ್ವಿಪಥ ಬೈಪಾಸ್ ರಸ್ತೆಯನ್ನು ಆರು ಪಥದ ರಸ್ತೆಯನ್ನಾಗಿ ಅಭಿವೃದ್ಧಿಪಡಿಸಲಾಗುತ್ತಿದೆ. ಇದಕ್ಕೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು 579 ಕೋಟಿ ರೂಪಾಯಿ ನೀಡಿದ್ದು, ಇದರಿಂದ ಸಂಚಾರ ದಟ್ಟಣೆ ಹಾಗೂ ಅಪಘಾತಗಳ ನಿಯಂತ್ರಣವನ್ನು ತಡೆಗಟ್ಟಬಹುದು ಎಂದರು.
ಉತ್ತರ ಕರ್ನಾಟಕ ಭಾಗದಲ್ಲಿ ಹೈಟೆಕ್ ಚಿಕಿತ್ಸೆ ಸೌಲಭ್ಯವುಳ್ಳ ಜಯದೇವ ಹೃದ್ರೋಗ ಸಂಸ್ಥೆಯ ಪ್ರಾದೇಶಿಕ ಕೇಂದ್ರವನ್ನು ಸ್ಥಾಪಿಸುತ್ತಿದ್ದೇವೆ. 250 ಕೋಟಿ ರೂಪಾಯಿಗಳ ವೆಚ್ಚದಲ್ಲಿ ಹುಬ್ಬಳ್ಳಿಯ ರಾಯನಾಳ ಬಳಿ ಇದನ್ನು ನಿರ್ಮಾಣ ಮಾಡಲಾಗುತ್ತಿದೆ. ನವನಗರದ ಕರ್ನಾಟಕ ಕ್ಯಾನ್ಸರ್ ಚಿಕಿತ್ಸೆ ಮತ್ತು ಸಂಶೋಧನಾ ಸಂಸ್ಥೆಗೆ ರಾಜ್ಯ ಸರ್ಕಾರ 10 ಕೋಟಿ ರೂಪಾಯಿಗಳ ವಿಶೇಷ ನೆರವು ನೀಡಿದೆ. ಉತ್ತರ ಕರ್ನಾಟಕ ಭಾಗದ ಹಲವಾರು ಜಿಲ್ಲೆಗಳ ಜನರಿಗೆ ಈ ಆಸ್ಪತ್ರೆಗಳ ಸೌಲಭ್ಯ ಸಿಗಲಿದೆ.
ಪಾಲಿಕೆ ವ್ಯಾಪ್ತಿಯ 82 ವಾರ್ಡ್ಗಳಲ್ಲಿ ಸಾಂಪ್ರದಾಯಿಕ ಬೀದಿ ದೀಪಗಳನ್ನು ಬದಲಾಯಿಸಲಾಗುವುದು. ಎಲ್ಇಡಿ ಬೀದಿ ದೀಪಗಳನ್ನು ಅಳವಡಿಸಲು 90 ಕೋಟಿ ರೂಪಾಯಿ ವೆಚ್ಚದ ಯೋಜನೆಯನ್ನು ತರಲಾಗಿದೆ ಎಂದರು. ಪರಿಸರ ಸ್ನೇಹಿಯಾಗಿರುವ ಈ ಯೋಜನೆ ವಿದ್ಯುತ್ನ ಕ್ಷಮತೆ ಹೆಚ್ಚಿಸಿ, ಸರ್ಕಾರದ ಬೊಕ್ಕಸಕ್ಕೆ ಉಳಿತಾಯ ಮಾಡಲಿದೆ ಎಂದು ಸಚಿವ ಹಾಲಪ್ಪ ಆಚಾರ್ ಹೇಳಿದರು.












Click it and Unblock the Notifications