ಬಗರ್ ಹುಕುಂ ಸಾಗುವಳಿದಾರರ ಸಮಸ್ಯೆ: ರೈತರಿಗೆ ತಾತ್ಕಾಲಿಕ ನೆಮ್ಮದಿ ಕೊಟ್ಟ ಸಚಿವರು
ಶಿವಮೊಗ್ಗ, ಸೆಪ್ಟೆಂಬರ್ 02: ಶಿವಮೊಗ್ಗ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಬಗರ್ ಹುಕುಂ ಸಾಗುವಳಿದಾರರ ಸಮಸ್ಯೆಯು ಬಹು ವರ್ಷದಿಂದ ಇದೆ. ವ್ಯವಸಾಯ ಮಾಡುತ್ತಿರುವ ರೈತರನ್ನು ಒಕ್ಕಲೆಬ್ಬಿಸುವುದರ ವಿರುದ್ಧ ಹೋರಾಟಗಳು ನಡೆಯುತ್ತಿವೆ. ಇಂತಹ ಸಂದರ್ಭದಲ್ಲಿಯೇ ಸಚಿವ ಮಧು ಬಂಗಾರಪ್ಪ, "ಹಲವು ದಶಕಗಳಿಂದ ಪಾರಂಪರಿಕವಾಗಿ ಸಾಗುವಳಿ ಮಾಡಿಕೊಂಡು ಜೀವನ ನಿರ್ವಹಿಸುತ್ತಿರುವ ಕೃಷಿ ಕಾರ್ಮಿಕರನ್ನು ಒಕ್ಕಲಿಸುವುದು ಸರಿಯಲ್ಲ" ಎಂದು ಹೇಳಿದ್ದಾರೆ. ಈ ಮೂಲಕ ರೈತರಿಗೆ ತಾತ್ಕಾಲಿಕ ನೆಮ್ಮದಿ ನೀಡಿದ್ದಾರೆ.
ಸೋಮವಾರ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮತ್ತು ಸೊರಬ ಶಾಸಕ ಮಧು ಬಂಗಾರಪ್ಪ ಸೊರಬ ಪಟ್ಟಣದ ತಾಲೂಕು ಕಚೇರಿಯಲ್ಲಿ ಏರ್ಪಡಿಸಲಾಗಿದ್ದ ಬಗರ್ ಹುಕುಂ ಸಮಿತಿಯ ಮೊದಲ ಸಭೆಯಲ್ಲಿ ಪಾಲ್ಗೊಂಡು ಮಾತನಾಡುತ್ತಿದ್ದರು.

"ಕಾನು ಸೊಪ್ಪಿನ ಬೆಟ್ಟ ಹುಲ್ಲು ಚಾಡಿ ಪ್ರದೇಶಗಳಲ್ಲಿ ಹಲವು ದಶಕಗಳಿಂದ ಪಾರಂಪರಿಕವಾಗಿ ಸಾಗುವಳಿ ಮಾಡಿಕೊಂಡು ಜೀವನ ನಿರ್ವಹಿಸುತ್ತಿರುವ ಕೃಷಿ ಕಾರ್ಮಿಕರನ್ನು ಒಕ್ಕಲಿಸುವುದು ಸರಿಯಲ್ಲ. ಅಧಿಕಾರಿಗಳು ಮಾನವೀಯ ನೆಲೆಯಲ್ಲಿ ಕಾರ್ಯ ನಿರ್ವಹಿಸಬೇಕು" ಎಂದು ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಮಧು ಬಂಗಾರಪ್ಪ ಸೂಚನೆ ನೀಡಿದರು.
ರೈತರನ್ನು ಒಕ್ಕಲೆಬ್ಬಿಸುವುದು: ಸಚಿವ ಮಧು ಬಂಗಾರಪ್ಪ ಮಾತನಾಡಿ, "ಬಗರ್ ಹುಕುಂ ಸಾಗುವಳಿದಾರರ ಸಮಸ್ಯೆಯು ಬಹು ದಿನಗಳಿಂದ ಇತ್ತು. ಈ ಸಮಸ್ಯೆಯ ಕುರಿತು ಮುಖ್ಯಮಂತ್ರಿಗಳೊಂದಿಗೆ ಸಮಾಲೋಚನೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು" ಎಂದು ಭರವಸೆ ನೀಡಿದರು.
"ಹಲವು ದಶಕಗಳಿಂದ ಸಾಗುವಳಿ ಮಾಡಿಕೊಂಡು ಬರುತ್ತಿರುವ ರೈತರನ್ನು ಒಮ್ಮೆಲೇ ಒಕ್ಕಲೆಬ್ಬಿಸುವುದರಿಂದ ಅನೇಕ ಕುಟುಂಬಗಳ ಬದುಕು ಶೋಚನೀಯವಾಗಲಿದೆ. ಆದ್ದರಿಂದ ಅಧಿಕಾರಿಗಳು ಮಾನವೀಯ ನೆಲೆಯಲ್ಲಿ ಹಾಗೂ ಕಾನೂನಿನ ಚೌಕಟ್ಟಿನೊಳಗೆ ಕಾರ್ಯನಿರ್ವಹಿಸುವಂತೆ" ಸಚಿವರು ಸಲಹೆ ನೀಡಿದರು.
"ಬಗರ್ ಹುಕುಂ ಸಾಗುವಳಿದಾರರನ್ನು ಒಕ್ಕಲೆಬ್ಬಿಸುವ ವಿಷಯದಲ್ಲಿ ಕ್ರಮ ಕೈಗೊಳ್ಳುವ ಅಧಿಕಾರಿಗಳ ದುರ್ವರ್ತನೆಯನ್ನು ಸಹಿಸಿಕೊಳ್ಳಲಾಗುವುದಿಲ್ಲ. ಅಂತಹವರ ವಿರುದ್ಧ ಕಠಿಣ ಕ್ರಮ ಅನಿವಾರ್ಯವಾಗಲಿದೆ" ಎಂದು ಸಚಿವರು ಎಚ್ಚರಿಸಿದರು.
"ಅರಣ್ಯ ಮತ್ತು ಕಂದಾಯ ಭೂಮಿಗೆ ಸಂಬಂಧಿಸಿದಂತೆ ಹಲವು ದಶಕಗಳಿಂದ ಅನೇಕ ಸಮಸ್ಯೆಗಳು ಇತ್ಯರ್ಥಗೊಳ್ಳದೆ ಹಾಗೆಯೇ ಬಾಕಿ ಉಳಿದಿದೆ. ಅವುಗಳನ್ನು ಮುಂದಿನ ದಿನಗಳಲ್ಲಿ ಹಂತ ಹಂತವಾಗಿ ಇತ್ಯರ್ಥಪಡಿಸಲಾಗುವುದು" ಎಂದು ಹೇಳಿದರು.
"ಅರಣ್ಯ ಇಲಾಖೆಯ ಅರಣ್ಯ ರಕ್ಷಕರು ಅಥವಾ ವನಪಾಲಕರು ಬಗರ್ ಹುಕುಂ ಸಾಗುವಳಿದಾರರ ವಿರುದ್ಧ ಮಾನವೀಯತೆ ಮರೆತು ವರ್ತಿಸುತ್ತಿರುವ ಬಗ್ಗೆ ಸಾರ್ವಜನಿಕರಿಂದ ದೂರುಗಳು ಕೇಳಿ ಬರುತ್ತಿವೆ. ಇಲಾಖೆಯ ಜವಾಬ್ದಾರಿಯುತ ಅಧಿಕಾರಿಗಳು ಮುಂದಿನ ದಿನಗಳಲ್ಲಿ ದೂರುಗಳು ಬರದಂತೆ ಗಮನ ಹರಿಸಬೇಕೆಂದು" ಅಧಿಕಾರಿಗಳಿಗೆ ಸಚಿವರು ಸೂಚಿಸಿದರು.
"ಬಗುರ್ ಹುಕುಂ ಸಾಗುವಳಿ ಜಮೀನು ಮಂಜೂರಾತಿಗೆ ಸಂಬಂಧಿಸಿದಂತೆ ಬಗರ್ ಹುಕುಂ ಸಮಿತಿಯಲ್ಲಿ ಅರ್ಜಿಗಳನ್ನು ತಿರಸ್ಕರಿಸುವ ಮುನ್ನ ಸಚಿವರ ಗಮನಕ್ಕೆ ತರುವಂತೆ ಸೂಚಿಸಿದವರು. ಕೆಲವು ಸಂದರ್ಭಗಳಲ್ಲಿ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಸಾರ್ವಜನಿಕರೊಂದಿಗೆ ಪಕ್ಷಾತೀತವಾಗಿ ಚರ್ಚಿಸಿ ಪರಿಶೀಲಿಸಿದ ನಂತರ ಕ್ರಮ ಕೈಗೊಳ್ಳುವಂತೆ" ಸಲಹೆ ಕೊಟ್ಟರು.
ಸಭೆಯಲ್ಲಿ ಮಾತನಾಡಿದ ತಹಶೀಲ್ದಾರ್ ಮಂಜುಳಾ ಹೆಗಡಾಳ ಮಾತನಾಡಿ, "ಬಗರ್ ಹುಕುಂ ಜಮೀನು ಮಂಜೂರಾತಿಗೆ ಸಂಬಂಧಿಸಿದಂತೆ ಈಗಾಗಲೇ ಆನ್ಲೈನ್ ಮೂಲಕ 5113 ಅರ್ಜಿಗಳು ದಾಖಲಾಗಿದ್ದು, ಅವುಗಳನ್ನು ಶೀಘ್ರದಲ್ಲಿ ಬಗರ್ ಹುಕುಂ ಸಮಿತಿಯ ಮುಂದೆ ಮಂಡಿಸಲಾಗುವುದು. 91 ಅರ್ಜಿದಾರರಿಗೆ ಹಕ್ಕುಪತ್ರ ವಿತರಣೆ, 166 ಜನರಿಗೆ ನೋಂದಣಿ ಮಾಡಿಸಿಕೊಡಬೇಕಾದ ಕಾರ್ಯ ಪ್ರಗತಿಯಲ್ಲಿದೆ" ಎಂದರು.












Click it and Unblock the Notifications