ಅಡಿಕೆ ಬೆಳೆಗಾರರಿಗೆ ಅಭಯ ನೀಡಿದ ಸಿಎಂ ಯಡಿಯೂರಪ್ಪ
ಬೆಂಗಳೂರು, ಅಕ್ಟೋಬರ್ 14: ಅಡಿಕೆ ಬೆಳೆಗಾರರ ಸಮಸ್ಯೆಗಳ ಬಗ್ಗೆ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ವಿವರಣೆ ಪಡೆದಿದ್ದಾರೆ. ಅಡಿಕೆ ಕಾರ್ಯಪಡೆಯ ಬೇಡಿಕೆಗಳನ್ನು ಈಡೇರಿಸುವುದಾಗಿ ಭರವಸೆಗಳನ್ನು ನೀಡಿದ್ದಾರೆ.
ತೀರ್ಥಹಳ್ಳಿ ಬಿಜೆಪಿ ಶಾಸಕ ಅರಗ ಜ್ಞಾನೇಂದ್ರ ಅವರ ನೇತೃತ್ವದ ಅಡಿಕೆ ಕಾರ್ಯಪಡೆ ಹಾಗೂ ನಿಯೋಗ ಬುಧವಾರ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿತು. ಬೆಳೆಗಾರರ ಸಮಸ್ಯೆಗಳ ಬಗ್ಗೆ ಯಡಿಯೂರಪ್ಪ ಜೊತೆ ಚರ್ಚೆ ನಡೆಸಿತು.
ಸಭೆಯ ಬಳಿಕ ಟ್ವೀಟ್ ಮಾಡಿರುವ ಬಿ. ಎಸ್. ಯಡಿಯೂರಪ್ಪ, "ಅಡಿಕೆ ಬೆಳೆಗಾರರು ಆತಂಕಪಡಬೇಕಾಗಿಲ್ಲ, ಟಾಸ್ಕ್ ಫೋರ್ಸ್ಗೆ ತಕ್ಷಣವೇ ಮೂಲಸೌಕರ್ಯ ವ್ಯವಸ್ಥೆ ಮಾಡುವಂತೆ ಸೂಚಿಸಲಾಗಿದೆ" ಎಂದು ಹೇಳಿದ್ದಾರೆ.

ಸರ್ಕಾರ ಅಡಿಕೆ ಕಾರ್ಯಪಡೆಯನ್ನು ರಚನೆ ಮಾಡಿತ್ತು. ಆದರೆ, ಇಲ್ಲಿಯ ತನಕ ಒಂದು ಕಚೇರಿ ಇರಲಿಲ್ಲ. ಅಡಿಕೆ ಬೆಳೆಗಾರರ ಹಿತಕ್ಕೆ ಬಜೆಟ್ನಲ್ಲಿ ಮಾಡಿದ ಘೋಷಣೆ ಜಾರಿಗೆ ಕ್ರಮ ಕೈಗೊಳ್ಳುವ ಭರವಸೆ ನೀಡಬೇಕು ಎಂದು ಮನವಿ ಮಾಡಲಾಯಿತು.
ಅಡಿಕೆ ಸಂಶೋಧನೆ ಕೆಲಸವನ್ನು ಈಗಾಗಲೇ ರಾಮಯ್ಯ ವಿವಿ ಆರಂಭ ಮಾಡಿದೆ. ಸಂಶೋಧನೆ ಮತ್ತು ಇತ್ಯಾದಿ ಕೆಲಸಕ್ಕೆ 2 ಕೋಟಿ. ರೂ. ಅನುದಾನ ನೀಡಬೇಕು ಎಂದು ಮನವಿ ಮಾಡಲಾಯಿತು.

ಗುಟ್ಕಾ, ತಂಬಾಕು ನಿಷೇಧದ ಬಗ್ಗೆ ಚರ್ಚೆಗಳು ಆರಂಭವಾಗಿದೆ. ಇದರಿಂದಾಗಿ ಅಡಿಕೆ ಬೆಳೆಯುವ ಜಿಲ್ಲೆಗಳಲ್ಲಿ ಆತಂಕ ಶುರುವಾಗಿದೆ. ರೈತರ ಹಿತವನ್ನು ಸರ್ಕಾರ ಕಾಪಾಡಬೇಕು ಎಂದು ಸಭೆಯಲ್ಲಿ ಚರ್ಚಿಸಲಾಯಿತು.
"ಯಾವುದೇ ರೀತಿಯ ಸುಳ್ಳು ಸುದ್ದಿಗಳನ್ನು ನಂಬಬಾರದು. ಸರ್ಕಾರ ಸದಾ ಅಡಿಕೆ ಬೆಳೆಗಾರರ ಪರವಾಗಿ ಇರುತ್ತದೆ. ಟಾಸ್ಕ್ ಪೋರ್ಸ್ಗೆ ಮೂಲ ಸೌಕರ್ಯ ಒದಗಿಸಲು ಅಧಿಕಾರಿಗಳಿಗೆ ಸೂಚನೆ ನೀಡುತ್ತೇನೆ" ಎಂದು ಯಡಿಯೂರಪ್ಪ ಭರವಸೆ ನೀಡಿದರು.












Click it and Unblock the Notifications