ಭದ್ರಾ ಅಚ್ಚುಕಟ್ಟು ಪ್ರದೇಶದ ರೈತರಿಗೆ ಸಚಿವರ ಭರವಸೆ ಏನು?
ಶಿವಮೊಗ್ಗ, ಸೆಪ್ಟೆಂಬರ್ 07; ಈ ಬಾರಿ ನೈಋತ್ಯ ಮುಂಗಾರು ಮಳೆ ಕೈ ಕೊಟ್ಟಿದೆ. ಇದರಿಂದಾಗಿ ಭದ್ರಾ ಜಲಾಶಯ ಭರ್ತಿಯಾಗಿಲ್ಲ. ಡ್ಯಾಂ ನೀರು ಅವಲಂಬಿಸಿ ಕೃಷಿ ಮಾಡುವ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಡ್ಯಾಂ ಒಟ್ಟು ಸಾಮರ್ಥ್ಯ 71.54 ಟಿಎಂಸಿ ಅಡಿ. ಸೆಪ್ಟೆಂಬರ್ 7ರ ನೀರಿನ ಮಟ್ಟ 45.52 ಟಿಎಂಸಿ ಅಡಿಯಾಗಿದೆ.
ಶಿವಮೊಗ್ಗ ಸಮೀಪದ ಮಲವಗೊಪ್ಪದ ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಮಂಡಳಿಯ ಕಚೇರಿ ಸಭಾಂಗಣದಲ್ಲಿ ಭದ್ರಾ ಜಲಾಶಯದ 83ನೇ ನೀರಾವರಿ ಸಲಹಾ ಸಮಿತಿ ಸಭೆ ನಡೆಯಿತು. ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ಹಾಗೂ ಕಾಡಾ ಅಧ್ಯಕ್ಷ ಮಧು ಬಂಗಾರಪ್ಪ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು.

ಈ ಸಭೆಯಲ್ಲಿ ಶಾಸಕರಾದ ಶ್ರೀನಿವಾಸ್, ಶಾರದಾ ಪೂರ್ಯಾನಾಯ್ಕ್, ಎಸ್. ಎನ್. ಚನ್ನಬಸಪ್ಪ, ಶಿವಮೊಗ್ಗ ಜಿಲ್ಲಾಧಿಕಾರಿ ಡಾ. ಆರ್. ಸೆಲ್ವಮಣಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ. ಕೆ. ಮಿಥುನ್ಕುಮಾರ್, ರೈತ ಮುಖಂಡರಾದ ಕೆ. ಟಿ. ಗಂಗಾಧರ್, ಬಸವರಾಜಪ್ಪ ಸೇರಿದಂತೆ ಅಚ್ಚುಕಟ್ಟು ಪ್ರದೇಶದ ವ್ಯಾಪ್ತಿಯಲ್ಲಿನ ನೀರಾವರಿ ಸಲಹಾ ಸಮಿತಿ ಸದಸ್ಯರು, ಅಧಿಕಾರಿಗಳು ಪಾಲ್ಗೊಂಡಿದ್ದರು.
ಸಭೆಯಲ್ಲಿ ಮಾತನಾಡಿದ ಸಚಿವರು, "ಭದ್ರಾ ಅಚ್ಚುಕಟ್ಟು ಪ್ರದೇಶದ ವ್ಯಾಪ್ತಿಯಲ್ಲಿ ವಾಡಿಕೆ ಪ್ರಮಾಣದ ಮಳೆ ಬಾರದಿರುವ ಹಿನ್ನೆಲೆಯಲ್ಲಿ ಜಲಾಶಯದಲ್ಲಿ ಗಣನೀಯ ಪ್ರಮಾಣದ ನೀರಿನ ಕೊರತೆ ಇರುವುದರಿಂದ ಅಚ್ಚುಕಟ್ಟು ಪ್ರದೇಶದ ವ್ಯಾಪ್ತಿಯಲ್ಲಿ ಬೆಳೆದಿರುವ ಭತ್ತ ಮತ್ತು ತೋಟಗಾರಿಕೆ ಬೆಳೆಗಳಿಗೆ ನಿರಂತರ ನೀರು ಹರಿಸಲು ಅನುಕೂಲವಾಗುವಂತೆ ಸೆಪ್ಟಂಬರ್ 11ರೊಳಗಾಗಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು" ಎಂದು ರೈತರಿಗೆ ಭರವಸೆ ನೀಡಿದರು.
ನೀರಿನ ಸಂಗ್ರಹ, ಬಳಕೆ ಬಗ್ಗೆ ಚರ್ಚೆ; ಸಚಿವ ಮಧು ಬಂಗಾರಪ್ಪ ಮಾತನಾಡಿ, "ಈಗಾಗಲೇ ರಾಜ್ಯದ ಉಪಮುಖ್ಯಮಂತ್ರಿಗಳು ಈ ಸಂಬಂಧ ಸೂಕ್ತ ನಿರ್ಣಯ ಕೈಗೊಳ್ಳುವಂತೆ ಮಾರ್ಗದರ್ಶನ ನೀಡಿದ್ದರ ಮೇರೆಗೆ ದಿನಾಂಕ ನಿಗಧಿಪಡಿಸಿ ಸಭೆ ನಡೆಸಲಾಗಿದೆ. ಸಭೆಯಲ್ಲಿ ಜಲಾಶಯದಲ್ಲಿ ನೀರಿನ ಸಂಗ್ರಹ, ಅದರ ಸದ್ಭಳಕೆ ಹಾಗೂ ರೈತರ ಹಿತ ಕಾಯುವಲ್ಲಿ ಇರಬಹುದಾದ ಸಾಧಕ-ಬಾದಕಗಳ ಬಗ್ಗೆ ಅಭಿಪ್ರಾಯಗಳನ್ನು ಸಂಗ್ರಹಿಸಲಾಗಿದೆ" ಎಂದರು.
"ಈ ಸಂಬಂಧ ಮಾನ್ಯ ಮುಖ್ಯಮಂತ್ರಿಗಳು ಹಾಗೂ ಉಪಮುಖ್ಯಮಂತ್ರಿಗಳಲ್ಲಿ ಚರ್ಚಿಸಿ, ರೈತ ಮುಖಂಡರ, ಅಧಿಕಾರಿಗಳ ಹಾಗೂ ತಜ್ಞರ ಅಭಿಪ್ರಾಯ ಪಡೆದು, ಈಗಾಗಲೇ ಬೆಳೆಯಲಾಗಿರುವ ಭತ್ತ, ಬೇಸಿಗೆ ಹಂಗಾಮಿನಲ್ಲಿ ಅಡಿಕೆ, ತೆಂಗು ಮತ್ತು ತೋಟಗಾರಿಕೆ ಬೆಳೆಗಳ ಸಂರಕ್ಷಣೆ ಹಾಗೂ ಈ ಭಾಗದ ಜನರ ಕುಡಿಯುವ ನೀರಿನ ಪೂರೈಕೆ ಮಾಡಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು" ಎಂದು ಸಚಿವರು ಹೇಳಿದರು.
"ಅಚ್ಚುಕಟ್ಟು ಪ್ರದೇಶದ ಬೆಳೆಗಾರರಿಗೆ ಅನುಕೂಲವಾಗುವಂತೆ ಮತ್ತೊಮ್ಮೆ ಶೀಘ್ರದಲ್ಲಿ ನೀರಾವರಿ ಸಮಿತಿ ಸಭೆ ಕರೆದು ಚರ್ಚಿಸಲಾಗುವುದು. ಕೃಷಿಕರು ಯಾವುದೇ ಆತಂಕಪಡುವ ಅಗತ್ಯವಿಲ್ಲ. ರೈತರ ಹಿತ ಕಾಯುವಲ್ಲಿ ಸರ್ಕಾರ ಬದ್ಧವಾಗಿದೆ" ಎಂದು ತಿಳಿಸಿದರು.
"ವಿಳಂಬವಾದರೂ ಮುಂದಿನ ಕೆಲವೇ ದಿನಗಳಲ್ಲಿ ಮಳೆ ಬರುವ ನಿರೀಕ್ಷೆ ಇದೆ. ನಿರೀಕ್ಷೆಯಂತೆ ಮಳೆ ಬಂದಲ್ಲಿ ರೈತರ ಎಲ್ಲಾ ಸಮಸ್ಯೆಗಳಿಗೆ ಸಹಜವಾಗಿ ಪರಿಹಾರ ದೊರೆಯಲಿದೆ. ರೈತ ಮುಖಂಡರು ನೀಡಿದ ಸಲಹೆಯಂತೆ ಎಡದಂಡೆ ನಾಲೆಯಲ್ಲಿ ನೀರು ಹರಿಸುವುದನ್ನು ಇಂದಿನಿಂದಲೇ ನಿಲ್ಲಿಸಲು ಸೂಚನೆ ನೀಡಲಾಗಿದೆ. ಅಲ್ಲದೇ ಶಿವಮೊಗ್ಗ ನಗರ ಹಾಗೂ ಸುತ್ತಮುತ್ತಲ ಪ್ರದೇಶದ ನಿವಾಸಿಗಳಿಗೆ ಕುಡಿಯುವ ನೀರನ್ನು ಒದಗಿಸಲು ಗಮನಹರಿಸಲಾಗುವುದು" ಎಂದರು.
ಸಭೆಯಲ್ಲಿ ರೈತ ಮುಖಂಡ ಕೆ. ಟಿ. ಗಂಗಾಧರ್ ಮಾತನಾಡಿ, "ಭದ್ರಾ ಜಲಾಶಯದಿಂದ ಈಗಾಗಲೇ ಹರಿಸಿರುವ ನೀರು ಅವೈಜ್ಞಾನಿಕವಾಗಿದೆ. ಈಗಿರುವ ನೀರಿನ ಕೊರತೆಯನ್ನು ಸರಿದೂಗಿಸುವುದು ಹೇಗೆಂಬ ಪ್ರಶ್ನೆ ರೈತರನ್ನು ಕಾಡುತ್ತಿದೆ. ಆದ್ದರಿಂದ ಸರ್ಕಾರದಿಂದ ಭತ್ತದ ಬೆಳೆಗಾರರಿಗೆ ಸೂಕ್ತ ಪರಿಹಾರ ಒದಗಿಸಿ. ತೋಟಗಾರಿಕೆ ಬೆಳೆಗಾರರಿಗೆ ಬೇಸಿಗೆಯಲ್ಲಿ ನೀರನ್ನು ಒದಗಿಸಲು ಸೂಕ್ತ ನಿರ್ಣಯ ಕೈಗೊಳ್ಳಬೇಕು. ಅಡಿಕೆ ಬೆಳೆಗಾರರಿಗೆ ಪ್ಯಾಕೇಜ್ ಘೋಷಿಸಬೇಕು" ಎಂದು ಒತ್ತಾಯಿಸಿದರು.
ರೈತ ಮುಖಂಡ ಬಸವರಾಜಪ್ಪ ಮಾತನಾಡಿ, "ಜಲಾಶಯದಿಂದ ಬಿಡುಗಡೆಯಾಗುವ ಶೇ.30ರಷ್ಟು ನೀರು ಸದ್ಬಳಕೆಯಾಗುತ್ತಿಲ್ಲ. ಅದರ ವ್ಯವಸ್ಥಿತ ನಿರ್ವಹಣೆಗಾಗಿ ಸಿಬ್ಬಂದಿಗಳನ್ನು ನಿಯೋಜಿಸಿ ಹಾಗೂ ಚಾನಲ್ಗಳ ದುರಸ್ತಿಗೆ ಅನುದಾನ ನೀಡುವಂತೆ" ಆಗ್ರಹಿಸಿದರು.












Click it and Unblock the Notifications