Bhadra Dam: ನಾಲೆಗಳಿಗೆ ಭದ್ರಾ ಡ್ಯಾಂ ನೀರು ಸ್ಥಗಿತ, ದಿನಾಂಕದ ವಿವರ
ಶಿವಮೊಗ್ಗ, ನವೆಂಬರ್ 25: ಈ ವರ್ಷದ ಮುಂಗಾರು ಹಂಗಾಮು ಪೂರ್ಣಗೊಂಡಿದ್ದು ಭದ್ರಾ ಯೋಜನೆಯ ಅಚ್ಚುಕಟ್ಟು ಪ್ರದೇಶದ ರೈತರಿಗೆ ಪ್ರಮುಖವಾದ ಮಾಹಿತಿಯೊಂದಿದೆ. ಭದ್ರಾ ಯೋಜನೆಯ ನೀರಾವರಿ ಸಲಹಾ ಸಮಿತಿ ಸಭೆಯ ತೀರ್ಮಾನದಂತೆ ಬಲದಂಡೆ ಮತ್ತು ಎಡದಂಡೆ ನಾಲೆಗಳಲ್ಲಿ ನೀರು ಹರಿಸುವುದನ್ನು ನಿಲ್ಲಿಸಲಾಗುತ್ತಿದೆ. ರೈತರ ಅನುಕೂಲಕ್ಕಾಗಿ ಈ ಕುರಿತು ಮಾಹಿತಿ ತಿಳಿಸಲಾಗಿದ್ದು, ಭದ್ರಾ ಜಲಾಶಯದ ಅಚ್ಚುಕಟ್ಟುದಾರರು ನಿಗಮದೊಂದಿಗೆ ಸಹಕರಿಸುವಂತೆ ಮನವಿ ಮಾಡಲಾಗಿದೆ.
ಭದ್ರಾ ಯೋಜನೆಯ ಅಚ್ಚುಕಟ್ಟು ಪ್ರದೇಶದ 2024-25ನೇ ಸಾಲಿನ ಮುಂಗಾರು ಹಂಗಾಮಿಗೆ ನೀರಾವರಿ ಸಲಹಾ ಸಮಿತಿ ಸಭೆಯ ತೀರ್ಮಾನದಂತೆ, ಕಛೇರಿ ಅಧಿಸೂಚನೆಯ ದಿನಾಂಕ 29.07.2024ರಿಂದ ಭದ್ರಾ ಜಲಾಶಯದಿಂದ ನೀರನ್ನು ಹರಿಬಿಡಲಾಗಿತ್ತು. ನೀರನ್ನು ಹರಿಸುವ ಗರಿಷ್ಠ ಅವಧಿ 120 ದಿನಗಳು ದಿನಾಂಕ 26.11.2024ಕ್ಕೆ ಪೂರ್ಣಗೊಳ್ಳಲಿದೆ.

ಆದ್ದರಿಂದ ನವೆಂಬರ್ 26ರ ಮಂಗಳವಾರ ರಾತ್ರಿಯಿಂದ ಬಲದಂಡೆ ಮತ್ತು ಎಡದಂಡೆ ನಾಲೆಗಳಲ್ಲಿ ನೀರು ಹರಿಸುವುದನ್ನು ನಿಲ್ಲಿಸಲಾಗುತ್ತದೆ. ಭದ್ರಾ ಜಲಾಶಯದ ಅಚ್ಚುಕಟ್ಟುದಾರರು ನಿಗಮದೊಂದಿಗೆ ಈ ಕುರಿತು ಸಹಕರಿಸುವಂತೆ ಭದ್ರಾ ಯೋಜನಾ ನೀರಾವರಿ ಸಲಹಾ ಸಮಿತಿ ಸದಸ್ಯ ಕಾರ್ಯದರ್ಶಿಗಳು ತಿಳಿಸಿದ್ದಾರೆ.
ಸಚಿವರ ಅಧ್ಯಕ್ಷತೆಯಲ್ಲಿ ಸಭೆ: 29/7/2024ರಂದು ಭದ್ರಾ ಯೋಜನೆಯ ನೀರಾವರಿ ಸಲಹಾ ಸಮಿತಿ ಸಭೆಯು ಸಮಿತಿಯ ಅಧ್ಯಕ್ಷರಾದ ಸಚಿವ ಮಧು ಬಂಗಾರಪ್ಪ ಅಧ್ಯಕ್ಷತೆಯಲ್ಲಿ ನಡೆದಿತ್ತು. ಈ ಸಭೆಯಲ್ಲಿ 2024-25ನೇ ಸಾಲಿನ ಮುಂಗಾರು ಹಂಗಾಮು ಬೆಳೆಗಳಿಗೆ ನೀರು ಹರಿಸುವ ಕುರಿತು ಚರ್ಚೆ ನಡೆಸಿ 120 ದಿನಗಳ ಕಾಲ ನೀರು ಹರಿಸಲು ತೀರ್ಮಾನವನ್ನು ಕೈಗೊಳ್ಳಲಾಗಿತ್ತು.
ಶಿವಮೊಗ್ಗ, ದಾವಣಗೆರೆ ಜಿಲ್ಲೆಗಳ ಕೃಷಿ ಮತ್ತು ಉತ್ತರ ಕರ್ನಾಟಕ ಭಾಗದ ಜಿಲ್ಲೆಗಳ ಕುಡಿಯುವ ನೀರಿಗೆ ಭದ್ರಾ ಡ್ಯಾಂ ನೀರು ಆಧಾರವಾಗಿದೆ. ಕಳೆದ ವರ್ಷ ಮಳೆಯಿಂದಾಗಿ ಡ್ಯಾಂ ಭರ್ತಿಯಾಗಿರಲಿಲ್ಲ. ಆದ್ದರಿಂದ ಬೇಸಿಗೆ ಬೆಳೆಗಳಿಗೆ ನೀರು ಹರಿಸದೇ ಕೇವಲ ಕುಡಿಯುವ ನೀರಿನ ಉದ್ದೇಶಕ್ಕಾಗಿ ಡ್ಯಾಂ ನೀರನ್ನು ಸಂಗ್ರಹ ಮಾಡಿಟ್ಟುಕೊಳ್ಳಲಾಗಿತ್ತು.
ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ (ಕೆಎಸ್ಎನ್ಎಂಡಿಸಿ) ಮಾಹಿತಿಯಂತೆ ನವೆಂಬರ್ 25ರಂದು ಭದ್ರಾ ಡ್ಯಾಂನಲ್ಲಿ 2158.00 ಅಡಿಗಳ ಪೈಕಿ 2154.95 ಅಡಿಗಳ ನೀರಿನ ಸಂಗ್ರಹವಿದೆ. ಒಟ್ಟು 71.54 ಟಿಎಂಸಿ ನೀರು ಸಂಗ್ರಹ ಸಾಮರ್ಥ್ಯದಲ್ಲಿ ಸದ್ಯ 67.75 ಟಿಎಂಸಿ ಅಡಿ ನೀರಿದೆ. ಒಳಹರಿವು 916 ಕ್ಯುಸೆಕ್ ಮತ್ತು ಹೊರ ಹರಿವು 3289 ಕ್ಯುಸೆಕ್ ಆಗಿದೆ.
ಕರ್ನಾಟಕ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಅಧಿನಿಯಮ 1980ರ ಅಡಿಯಲ್ಲಿ ಭದ್ರಾ ಶಾಸನಬದ್ಧ ಪ್ರಾಧಿಕಾರವಾಗಿದ್ದು, ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರದ ವ್ಯಾಪ್ತಿಗೆ ಮಲೆನಾಡು, ಅರೆಮಲೆನಾಡು, ಕರಾವಳಿ ಹಾಗೂ ಬಯಲು ಸೀಮೆ ಪ್ರದೇಶದ ಭೌಗೋಳಿಕ ವ್ಯಾಪ್ತಿಯಲ್ಲಿ ಬರುವ ಭಾರೀ ಮತ್ತು ಮಧ್ಯಮ ನೀರಾವರಿ ಯೋಜನೆಗಳು ಒಳಪಡುತ್ತವೆ.
ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಹಾವೇರಿ, ಗದಗ, ತುಮಕೂರು, ಚಿಕ್ಕಬಳ್ಳಾಪುರ ಮತ್ತು ಕೋಲಾರ ಜಿಲ್ಲೆಗಳ ಭೌಗೋಳಿಕ ವ್ಯಾಪ್ತಿಯ 30 ಬೃಹತ್ ಹಾಗೂ ಮಧ್ಯಮ ನೀರಾವರಿ ಯೋಜನೆಗಳು ಸೇರಿವೆ. ಈ ಪ್ರಾಧಿಕಾರದ ವ್ಯಾಪ್ತಿಗೆ ಒಟ್ಟಾರೆ ಸುಮಾರು 5,00,000 ಹೆಕ್ಟೇರ್ ಪ್ರದೇಶವು ಯೋಜಿತ ನೀರಾವರಿ ಪ್ರದೇಶವಿದ್ದು, ಈವರೆಗೆ ಸುಮಾರು 2,42,205 ಹೆಕ್ಟೇರ್ ಪ್ರದೇಶದಲ್ಲಿ ಅಭಿವೃದ್ಧಿ ಕಾರ್ಯಕ್ರಮಗಳನ್ನು ಕೈಗೊಳ್ಳಲಾಗಿದೆ.
ಸದ್ಯ ಭದ್ರಾ ಜಲಾಶಯದಿಂದ ಮುಂಗಾರು ಬೆಳೆಗಳಿಗೆ ನಾಲೆಗಳ ಮೂಲಕ ನೀರು ಹರಿಸುವುದು ನಿಲ್ಲಿಸಲಾಗುತ್ತಿದೆ. ಬೇಸಿಗೆ ಬೆಳೆಗಳಿಗೆ ನೀರು ಹರಿಸುವ ಕುರಿತು ಭದ್ರಾ ಯೋಜನಾ ನೀರಾವರಿ ಸಲಹಾ ಸಮಿತಿ ಮತ್ತೆ ಸಭೆ ಸೇರಿ ತೀರ್ಮಾನವನ್ನು ಕೈಗೊಳ್ಳಲಿದೆ.











Click it and Unblock the Notifications