ಎಚ್.ಡಿ.ಕುಮಾರಸ್ವಾಮಿ ರಾಜೀನಾಮೆ ತನಕ ಹೋರಾಟ : ಯಡಿಯೂರಪ್ಪ
Recommended Video

ಬೆಂಗಳೂರು, ನವೆಂಬರ್ 21 : 'ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಅಧಿಕಾರ ನಡೆಸುವ ನೈತಿಕ ಹಕ್ಕಿಲ್ಲ. ಅವರು ರಾಜೀನಾಮೆ ನೀಡುವ ತನಕ ಬಿಜೆಪಿ ಹೋರಾಟ ನಡೆಸಲಿದೆ' ಎಂದು ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಘೋಷಣೆ ಮಾಡಿದರು.
ಬೆಂಗಳೂರಿನ ಮೈಸೂರು ಬ್ಯಾಂಕ್ ವೃತ್ತದಲ್ಲಿ ಬುಧವಾರ ಬಿಜೆಪಿ ವತಿಯಿಂದ ಬೃಹತ್ ಪ್ರತಿಭಟನೆ ನಡೆಯಿತು. ರೈತರ ಸಮಸ್ಯೆಗಳನ್ನು ಬಗೆಹರಿಸಲು ಸಾಧ್ಯವಾಗದ ಸರ್ಕಾರ ಅಧಿಕಾರದಲ್ಲಿ ಇರಬಾರದು ಎಂದು ಬಿಜೆಪಿ ನಾಯಕರು ಒತ್ತಾಯಿಸಿದರು.
ಬಿ.ಎಸ್.ಯಡಿಯೂರಪ್ಪ, ಮಾಜಿ ಉಪ ಮುಖ್ಯಮಂತ್ರಿ ಆರ್.ಅಶೋಕ, ಬಿಬಿಎಂಪಿ ವಿರೋಧ ಪಕ್ಷದ ನಾಯಕ ಪದ್ಮನಾಭ ರೆಡ್ಡಿ, ಬಿಜೆಪಿ ಮುಖಂಡ ರವಿ ಕುಮಾರ್, ಬಿಬಿಎಂಪಿ ಕಾರ್ಪೊರೇಟರ್ಗಳು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ರೈತರನ್ನು ಅವಮಾನಿಸಿದ್ದಾರೆ ಎಂದು ಆರೋಪಿಸಿ ಬಿಜೆಪಿ ಬುಧವಾರ ರಾಜ್ಯಾದ್ಯಂತ ಪ್ರತಿಭಟನೆ ನಡೆಸುತ್ತಿದೆ. ಬೆಳಗಾವಿ ಅಧಿವೇಶನದ ಸಂದರ್ಭದಲ್ಲಿಯೂ ಪ್ರತಿಭಟನೆ ನಡೆಸಲು ತೀರ್ಮಾನಿಸಲಾಗಿದೆ.

ಅಧಿಕಾರದಲ್ಲಿ ಮುಂದುವರೆಯಬಾರದು
ಬೃಹತ್ ಪ್ರತಿಭಟನೆ ಉದ್ದೇಶಿಸಿ ಮಾತನಾಡಿ ಯಡಿಯೂರಪ್ಪ ಅವರು, 'ಎಚ್.ಡಿ.ಕುಮಾರಸ್ವಾಮಿ ಅವರಿಗೆ ರೈತರ ಸಮಸ್ಯೆ ಬಗೆಹರಿಸಲು ಸಾಧ್ಯವಾಗಲಿಲ್ಲ ಎಂದಾದರೆ ಅವರು ಅಧಿಕಾರಲ್ಲಿ ಮುಂದುವರೆಯಬಾರದು. ಮುಖ್ಯಮಂತ್ರಿಗಳ ರಾಜೀನಾಮೆ ತನಕ ನಮ್ಮ ಹೋರಾಟ ಮುಂದುವರೆಯಲಿದೆ' ಎಂದು ಹೇಳಿದರು.

ರಾಜೀನಾಮೆಗೆ ಒತ್ತಾಯಿಸಿ
'ರೈತ ಮಹಿಳೆ ಬಗ್ಗೆ ಆಡಿದ ಮಾತಿಗೆ ಕ್ಷಮೆ ಕೇಳಲು ಮುಖ್ಯಮಂತ್ರಿ ಕುಮಾರಸ್ವಾಮಿ ಅವರಿಗೆ ಆಗಲಿಲ್ಲ. ಎಲ್ಲಾ ಸಹೋದರಿಯರಿಗೆ ನಾನು ಕರೆ ನೀಡುತ್ತೇನೆ. ಕುಂತಲ್ಲಿ, ನಿಂತಲ್ಲಿ ಎಚ್.ಡಿ.ಕುಮಾರಸ್ವಾಮಿ ಅವರ ರಾಜೀನಾಮೆಗೆ ಒತ್ತಾಯಿಸಿ. ಅವರು ರಾಜೀನಾಮೆ ನೀಡುವ ತನಕ ಬಿಡಬೇಡಿ' ಎಂದು ಯಡಿಯೂರಪ್ಪ ಕರೆ ಕೊಟ್ಟರು.

1 ಲಕ್ಷ ರೈತರಿಂದ ಪ್ರತಿಭಟನೆ
'ಬೆಳಗಾವಿ ಅಧಿವೇಶನದ ಸಂದರ್ಭದಲ್ಲಿ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತೇವೆ. 1 ಲಕ್ಷ ರೈತರನ್ನು ಸೇರಿಸಿ ಬೆಳಗಾವಿಯಲ್ಲಿ ಪ್ರತಿಭಟನೆ ನಡೆಸಲಾಗುತ್ತದೆ. ಎಚ್.ಡಿ.ಕುಮಾರಸ್ವಾಮಿ ಅವರು ರಾಜೀನಾಮೆ ನೀಡುವ ತನಕ ಬಿಜೆಪಿಯ ಹೋರಾಟ ಮುಂದುವರೆಯಲಿದೆ' ಎಂದು ಯಡಿಯೂರಪ್ಪ ಘೋಷಣೆ ಮಾಡಿದರು.

ಸರ್ಕಾರ ದಿವಾಳಿ ಆಗಿದೆ
'ರಾಜ್ಯದ ಬೊಕ್ಕಸ ದಿವಾಳಿಯಾಗಿದೆ, ಸಚಿವರು ಬರ ಪೀಡಿತ ಪ್ರದೇಶಗಳಿಗೆ ಭೇಟಿ ನೀಡುತ್ತಿಲ್ಲ. ಯಾವುದೇ ಕೆಲಸಗಳು ಆಗುತ್ತಿಲ್ಲ. ಬ್ಯಾಂಕ್ ಅಧಿಕಾರಿಗಳಿಗೆ ಧಮ್ಕಿ ಹಾಕುವಂತಹ ಮುಖ್ಯಮಂತ್ರಿಗಳು ಅಧಿಕಾರದಲ್ಲಿ ಮುಂದುವರೆಯಬೇಕಾ?. ಇಂತಹ ಮುಖ್ಯಮಂತ್ರಿಗಳು ಅಧಿಕಾರದಲ್ಲಿ ಮುಂದುವರೆಯಲು ಬಿಡಬಾರದು' ಎಂದು ಯಡಿಯೂರಪ್ಪ ಹೇಳಿದರು.
|
ರೈತರನ್ನು ಅವಮಾನಿಸಿದ್ದಾರೆ
ಎಚ್.ಡಿ.ಕುಮಾರಸ್ವಾಮಿ ಅವರು ರೈತರ ಬೇಡಿಕೆ ಈಡೇರಿಸದೆ ಅವರನ್ನು ಅವಮಾನಿಸಿದ್ದಾರೆ ಎಂದು ಯಡಿಯೂರಪ್ಪ ಆರೋಪಿಸಿದ್ದಾರೆ.












Click it and Unblock the Notifications