Cauvery Dispute: ರಾಜ್ಯದ ರೈತರ ಹಿತ ಕಾಪಾಡುವುದು ನಮ್ಮ ಜವಾಬ್ದಾರಿ: ಸಚಿವ ದಿನೇಶ್ ಗುಂಡೂರಾವ್
ಚಾಮರಾಜನಗರ, ಸೆಪ್ಟೆಂಬರ್, 22: ಸುಗ್ರೀವಾಜ್ಞೆ ತಂದು ನೀರು ಬಂದ್ ಮಾಡುವ ಕಾಲ ಮಿಂಚಿಹೋಗಿದೆ. ಆದರೆ ರಾಜ್ಯದ ರೈತರ ಹಿತ ಕಾಪಾಡುವುದು ನಮ್ಮ ಜವಾಬ್ದಾರಿಯಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಚಾಮರಾಜನಗರದಲ್ಲಿ ಹೇಳಿದರು.
ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಕುರಟ್ಟಿ ಹೊಸೂರು ಗ್ರಾಮದಲ್ಲಿ ಮಾಧ್ಯಮವರೊಟ್ಟಿಗೆ ಮಾತನಾಡಿದ ಅವರು, ಸುಗ್ರಿವಾಜ್ಞೆ ತರುವ ಕಾಲವೆಲ್ಲಾ ಮಿಂಚಿಹೋಗಿದೆ. ಕಾನೂನು ಪಾಸ್ ಮಾಡಿದರೂ ಒಂದೇ-ಇಲ್ಲದಿದ್ದರೂ ಒಂದೇ. ಈಗ ನಮ್ಮ ಜನರ ಹಕ್ಕಿಗಾಗಿ ಯಾವ ರೀತಿ ಹೋರಾಟ ಮಾಡಬೇಕೆಂದು ಎಲ್ಲರೂ ಕುಳಿತು ಇಂದು ಚರ್ಚೆ ಮಾಡುತ್ತೇವೆ ಎಂದರು.

ಇಂದು ಸಂಜೆ ಕ್ಯಾಬಿನೆಟ್ ಮೀಟಿಂಗ್ ನಡೆಯಲಿದ್ದು, ಕಾವೇರಿ ಸಂಕಷ್ಟದ ಸಂಬಂಧ ಚರ್ಚೆ ಆಗಲಿದೆ. ರಾಜ್ಯದ ರೈತರ ಹಿತವನ್ನು ಕಾಪಾಡುವ ತೀರ್ಮಾನವನ್ನು ತೆಗೆದುಕೊಳ್ಳುತ್ತೇವೆ ಎಂದು ಭರವಸೆ ಕೊಟ್ಟರು.
ಕಾವೇರಿ ಹಳೇ ಮೈಸೂರು ಭಾಗದ ಜೀವನಾಡಿಯಾಗಿದ್ದು, ಕೃಷಿ, ನೀರಾವರಿ, ಕುಡಿಯುವ ನೀರಿನ ಮೇಲೆ ಅವಲಂಬಿತರಾಗಿದ್ದೇವೆ. ಕಾವೇರಿ ನೀರು ಇಲ್ಲದಿದ್ದರೆ ಬದುಕಿನ ಮೇಲೆ ದೊಡ್ಡ ಪರಿಣಾಮ ಬೀರಲಿದೆ. ಜೀವ ಉಳಿಯಲು ನೀರು ಬೇಕೆ ಬೇಕು. ರಾಜ್ಯದ ಜನರ ಹಿತ ಕಾಯುವ ತೀರ್ಮಾನ ತೆಗೆದುಕೊಳ್ಳುತ್ತೇವೆ ಎಂದರು. ಇದೇ ವೇಳೆ, ಇಂಡಿಯಾ ಒಕ್ಕೂಟಕ್ಕಾಗಿ ನೀರನ್ನು ಹರಿಸಲಾಗುತ್ತಿದೆ ಎಂಬ ಆರೋಪವನ್ನು ನಿರಾಕರಿಸಿದರು.
ಮೈತ್ರಿ ಆಗಿದ್ದಾಗ ತೊಂದರೆ ಆಗಿತ್ತು
ಜೆಡಿಎಸ್ ಹಾಗೂ ಬಿಜೆಪಿ ಮೈತ್ರಿ ಮಾಡಿಕೊಳ್ಳುತ್ತಿರುವ ಸಂಬಂಧ ಮಾತನಾಡಿದ ಅವರು, ನಾವು ಕಳೆದ ಬಾರಿ ಮೈತ್ರಿ ಮಾಡಿಕೊಂಡು ಸಾಕಷ್ಟು ತೊಂದರೆಯಾಯಿತು. ಈ ಬಾರಿ ಯಾವುದೇ ಮೈತ್ರಿಯಿಲ್ಲ, ನಾವು ಖುಷಿಯಾಗಿದ್ದೇವೆ. ಅವರು ಮೈತ್ರಿ ಮಾಡಿಕೊಳ್ಳುತ್ತಿರುವುದು ಒಳ್ಳೆಯದೊ-ಕೆಟ್ಟದೋ ಅವರಿಗೆ ಬಿಟ್ಟಿದ್ದು. ನಮಗೆ ಈ ಬಾರಿ ಚುನಾವಣೆಯಲ್ಲಿ ಒಳ್ಳೆಯದಾಗಲಿದೆ ಎಂದರು.
ಕಪ್ಪು ಬಾವುಟ ಪ್ರದರ್ಶನದ ಎಚ್ಚರಿಕೆ
ಕಾವೇರಿ ನೀರನ್ನು ತಮಿಳುನಾಡುಗೆ ಹರಿಸುತ್ತಿರುವುದನ್ನು ಖಂಡಿಸಿ ಚಾಮರಾಜನಗರದಲ್ಲಿ ಸರಣಿ ಪ್ರತಿಭಟನೆಗಳು ನಡೆಯುತ್ತಿದ್ದು, ಚಾಮರಾಜನಗರದಲ್ಲಿ ರಾಜ್ಯ ರೈತ ಸಂಘದ ಕಾರ್ಯಕರ್ತರು ಡಿಸಿ ಕಚೇರಿ ಎದುರು ಧರಣಿ ನಡೆಸಿ ಆಕ್ರೋಶ ಹೊರಹಾಕಿದರು.
ಚಾಮರಾಜನಗರದ ಚಾಮರಾಜೇಶ್ವರ ದೇಗುಲ ಮುಂಭಾಗದಿಂದ ಹೊನ್ನೂರು ಬಸವಣ್ಣ ನೇತೃತ್ವದಲ್ಲಿ ಪ್ರತಿಭಟನಾ ಮೆರವಣಿಗೆ ಹೊರಟು ರಾಷ್ಟ್ರೀಯ ಹೆದ್ದಾರಿ ಹಾದು ಹೋಗುವ ಭುವನೇಶ್ವರಿ ವೃತ್ತದಲ್ಲಿ ರಸ್ತೆ ತಡೆ ನಡೆಸಿ ಆಕ್ರೋಶ ಹೊರಹಾಕಿದರು. ಬಳಿಕ ಡಿಸಿ ಕಚೇರಿ ತನಕ ಪ್ರತಿಭಟನಾ ಮೆರವಣಿಗೆ ನಡೆಸಿದ ರೈತರು ರಾಜ್ಯ, ಕೇಂದ್ರ ಸರ್ಕಾರದ ವಿರುದ್ಧ ಧಿಕ್ಕಾರದ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದರು.
ರಾಜ್ಯದ ರೈತರ ಹಿತವನ್ನು ಬಲಿ ಕೊಟ್ಟು ರಾತ್ರೋರಾತ್ರಿ ನೀರನ್ನು ಬಿಡಲಾಗುತ್ತಿದೆ. ಕೂಡಲೇ, ನೀರು ನಿಲ್ಲಿಸದಿದ್ದರೆ ಸೆಪ್ಟೆಂವರ್ 27ರಂದು ಚಾಮರಾಜನಗರಕ್ಕೆ ಸಿಎಂ ಬಂದ ವೇಳೆ ಕಪ್ಪು ಬಾವುಟ ಪ್ರದರ್ಶನ ಮಾಡುತ್ತೇವೆ ಎಂದು ಎಚ್ಚರಿಸಿದರು.












Click it and Unblock the Notifications