ಕೃಷಿ ಕಾಯ್ದೆ ರದ್ದು: 5-6 ತಿಂಗಳಿನಲ್ಲಿ ಫಲಿಸುತ್ತದೆಯೇ ರೈತರ ಬೇಡಿಕೆ?
ಜೈಪುರ್, ಏಪ್ರಿಲ್ 04: ಕೇಂದ್ರ ಸರ್ಕಾರ ಜಾರಿಗೊಳಿಸಲು ಮುಂದಾಗಿರುವ ವಿವಾದಿತ ಕೃಷಿ ಕಾಯ್ದೆಗಳ ಕುರಿತು ರೈತರಲ್ಲಿ ಜಾಗೃತಿ ಮೂಡಿಸುವುದಕ್ಕೆ ಗುಜರಾತ್ಗೆ ತೆರಳುತ್ತೇವೆ ಎಂದು ಭಾರತೀಯ ಕಿಸಾನ್ ಯೂನಿಯನ್ ಮುಖ್ಯಸ್ಥ ರಾಕೇಶ್ ಟಿಕಾಯತ್ ಎಚ್ಚರಿಕೆ ನೀಡಿದ್ದಾರೆ.
ರಾಜಸ್ಥಾನದ ಮಾತನಾಡಿದ ಅವರು, ಗುಜರಾತ್ನಲ್ಲಿ ವಿವಾದಿತ ಮೂರು ಕೃಷಿ ಕಾಯ್ದೆಗಳು ಮತ್ತು ಕನಿಷ್ಠ ಬೆಂಬಲ ಬೆಲೆಗೆ ಸಂಬಂಧಿಸಿದಂತೆ ರೈತರೊಂದಿಗೆ ಸಭೆ ನಡೆಸಲಾಗುತ್ತದೆ ಎಂದರು. ಅಲ್ಲದೇ, ಸರಬಮತಿ ಮತ್ತು ಬಾರ್ದೊಲಿಗೂ ನಾವು ಭೇಟಿ ನೀಡುತ್ತೇವೆ ಎಂದು ತಿಳಿಸಿದರು.
ರೈತ ಮುಖಂಡ ರಾಕೇಶ್ ಟಿಕಾಯತ್ ಬೆಂಗಾವಲಿನ ಮೇಲೆ ದಾಳಿ
ವಿವಾದಿತ ಕೃಷಿ ಕಾಯ್ದೆಗಳಿಗೆ ಸಂಬಂಧಿಸಿದಂತೆ ರೈತರ ಬೇಡಿಕೆಗಳಿಗೆ ಕೇಂದ್ರ ಸರ್ಕಾರ ಮುಂದಿನ 5 ರಿಂದ 6 ತಿಂಗಳಿನಲ್ಲಿ ಒಪ್ಪಿಗೆ ಸೂಚಿಸುವ ಭರವಸೆಯಿದೆ ಎಂದು ಬಿಕೆಯು ಮುಖ್ಯಸ್ಥ ರಾಕೇಶ್ ಟಿಕಾಯತ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ದೆಹಲಿಯಲ್ಲಿ ನಾಲ್ಕು ತಿಂಗಳು ಮೀರಿದ ರೈತ ಹೋರಾಟ:
ಕೇಂದ್ರ ಸರ್ಕಾರದ ವಿವಾದಿತ ರೈತರ ಉತ್ಪಾದನೆ ವ್ಯಾಪಾರ ಮತ್ತು ವಾಣಿಜ್ಯ (ಪ್ರಚಾರ ಮತ್ತು ಸೌಲಭ್ಯ) ಕಾಯ್ದೆ, ಬೆಲೆ ಭರವಸೆ ಮತ್ತು ಕೃಷಿ ಸೇವೆಗಳ ಕಾಯ್ದೆ (ಸಬಲೀಕರಣ ಮತ್ತು ಸಂರಕ್ಷಣೆ) ಒಪ್ಪಂದ ಹಾಗೂ ಅಗತ್ಯ ಸರಕುಗಳ (ತಿದ್ದುಪಡಿ) ಕಾಯ್ದೆಗಳ ವಿರುದ್ಧ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಕಳೆದ ನವೆಂಬರ್.26ರಿಂದ ನವದೆಹಲಿಯ ಸಿಂಘು ಗಡಿ, ಟಿಕ್ರಿ ಗಡಿ ಮತ್ತು ಘಾಜಿಪುರ್ ಗಡಿ ಪ್ರದೇಶಗಳಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆ ಮತ್ತೊಂದು ಹಂತಕ್ಕೆ ತಲುಪಿದೆ. ಪಂಜಾಬ್, ಹರಿಯಾಣ, ಉತ್ತರ ಪ್ರದೇಶದ ಸಾವಿರಾರು ರೈತರು ಈ ಹೋರಾಟದಲ್ಲಿ ಭಾಗಿಯಾಗಿದ್ದು, ಮೇ ತಿಂಗಳಿನಲ್ಲಿ ಸಂಸತ್ ಚಲೋ ನಡೆಸುವುದಾಗಿ ಸಂಯುಕ್ತ ಕಿಸಾನ್ ಮೋರ್ಚಾ ಎಚ್ಚರಿಕೆ ನೀಡಿದೆ.
ಕೃಷಿ ಕಾಯ್ದೆ ವಿರುದ್ಧ ಸಂಸತ್ ಚಲೋ:
ಕೇಂದ್ರ ಸರ್ಕಾರದ ವಿವಾದಿತ ಮೂರು ಕೃಷಿ ಕಾಯ್ದೆಗಳನ್ನು ರದ್ದುಗೊಳಿಸುವಂತೆ ಆಗ್ರಹಿಸಿ ಮೇ ತಿಂಗಳ ಎರಡನೇ ವಾರದಲ್ಲಿ ಸಂಸತ್ ಚಲೋ ನಡೆಸಲಾಗುತ್ತದೆ ಎಂದು ಸಂಯುಕ್ತ ಕಿಸಾನ್ ಮೋರ್ಚಾ ಘೋಷಿಸಿದೆ. ರೈತರು, ಕಾರ್ಮಿಕರು, ಮಹಿಳೆಯರು, ದಲಿತರು, ಆದಿವಾಸಿಗಳು, ನಿರುದ್ಯೋಗಿಗಳು ಮತ್ತು ಯುವಕರು ಸೇರಿದಂತೆ ಎಲ್ಲ ವರ್ಗದ ಜನರು ಈ ಸಂಸತ್ ಚಲೋ ಹೋರಾಟದಲ್ಲಿ ಭಾಗಿ ಆಗಲಿದ್ದಾರೆ. ಶಾಂತಿಯುತ ರೀತಿಯಲ್ಲಿ ಸಂಸತ್ ಚಲೋ ನಡೆಸಲಾಗುತ್ತದೆ ಎಂದು ಸಂಯುಕ್ತ ಕಿಸಾನ್ ಮೋರ್ಚಾ ತಿಳಿಸಿದೆ.