ಕರ್ನಾಟಕದಲ್ಲಿ ಬರ; ಮುಂದಿನ ವಾರ ಬರಲಿದೆ ಕೇಂದ್ರ ಅಧ್ಯಯನ ತಂಡ
ಬೆಂಗಳೂರು, ಅಕ್ಟೋಬರ್ 04; ಕರ್ನಾಟಕ ಸರ್ಕಾರ 2023ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ರಾಜ್ಯದ 31 ಜಿಲ್ಲೆಗಳ 236 ತಾಲ್ಲೂಕುಗಳ ಪೈಕಿ 195 ತಾಲ್ಲೂಕುಗಳಲ್ಲಿ ಬರ ಪರಿಸ್ಥಿತಿ ಕಂಡು ಬಂದಿದೆ ಎಂದು ಹೇಳಿದೆ. ಈ ಪೈಕಿ 161 ತಾಲೂಕುಗಳನ್ನು ತೀವ್ರ ಬರಪೀಡಿತ ತಾಲ್ಲೂಕು ಹಾಗೂ 34 ತಾಲ್ಲೂಕುಗಳನ್ನು ಸಾಧಾರಣ ಬರಪೀಡಿತ ತಾಲ್ಲೂಕು ಎಂದು ತಕ್ಷಣದಿಂದ ಜಾರಿಗೆ ಬರುವಂತೆ ಘೋಷಣೆ ಮಾಡಿದೆ.
ರಾಜ್ಯದ ಬರ ಪರಿಸ್ಥಿತಿ ಕೃಷಿ ಸಚಿವ ಎನ್. ಚೆಲುವರಾಯಸ್ವಾಮಿ ಮಾತನಾಡಿದ್ದಾರೆ. "ರಾಜ್ಯದಲ್ಲಿ ಭೀಕರ ಬರಗಾಲ ಪರಿಸ್ಥಿತಿ ಅಧ್ಯಯನ ನಡೆಸಲು ಕೇಂದ್ರದಿಂದ ಮೂರು ತಂಡಗಳು ಮುಂದಿನ ವಾರದಲ್ಲಿ ರಾಜ್ಯಕ್ಕೆ ಆಗಮಿಸುತ್ತಿವೆ" ಎಂದು ತಿಳಿಸಿದರು.

ಕಲಬುರಗಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಚಿವರು, "ರಾಜ್ಯದಲ್ಲಿ 161 ತೀವ್ರ ಮತ್ತು 34 ಸಾಧಾರಣ ಹೀಗೆ ಒಟ್ಟು 195 ತಾಲೂಕುಗಳನ್ನು ಬರಗಾಲ ಪೀಡಿತ ಎಂದು ಘೋಷಿಸಿ ಈಗಾಗಲೇ ಕೇಂದ್ರ ಸರ್ಕಾರಕ್ಕೆ ವರದಿ ಕಳುಹಿಸಲಾಗಿದೆ. ಬರ ಪರಿಸ್ಥಿತಿ ಅರಿಯಲು ಕೇಂದ್ರ ಸರ್ಕಾರವು ಬರ ಅಧ್ಯಯನ ತಂಡಗಳನ್ನು ಕಳುಹಿಸುವುದಾಗಿ ಮಾಹಿತಿ ನೀಡಿದೆ" ಎಂದರು.
"ಇದೇ ಅಕ್ಟೋಬರ್ 10ರೊಳಗೆ ತಂಡಗಳು ಆಗಮಿಸಲಿವೆ. ಒಂದೆಡೆ ಅತಿವೃಷ್ಟಿ ಮತ್ತೊಂದೆಡೆ ಅನಾವೃಷ್ಟಿ ಪರಿಸ್ಥಿತಿ ಇದೆ. ಹೆಚ್ಚಿನ ಪ್ರಮಾಣದಲ್ಲಿ ಬರಗಾಲವಿದೆ. ಬೆಳೆ ಹಾನಿ ಸಮೀಕ್ಷೆ ನಡೆದಿದ್ದು, ಈಗಾಗಲೇ ಶೇ.95ರಷ್ಟು ಬೆಳೆ ಹಾನಿ ಸಮೀಕ್ಷೆಯಾಗಿದೆ" ಎಂದು ಸಚಿವರು ಮಾಹಿತಿ ನೀಡಿದರು.
4 ಸಾವಿರ ಕೋಟಿ ರೂ. ಪರಿಹಾರಕ್ಕೆ ಪತ್ರ; "ಕೇಂದ್ರದ ತಂಡಗಳು ಆಗಮಿಸುವ ಹೊತ್ತಿಗೆ ಸಮೀಕ್ಷೆ ಪೂರ್ಣಗೊಂಡು ವರದಿ ಅಂತಿಮಗೊಳ್ಳಲಿದೆ. ಪ್ರಾಥಮಿಕ ವರದಿ ಪ್ರಕಾರ ಈಗಾಗಲೇ 40 ಲಕ್ಷ ಹೆಕ್ಟೇರ್ ದಲ್ಲಿ ಸುಮಾರು 28 ಸಾವಿರ ಕೋಟಿ ರೂ. ಹಾನಿಯಾಗಿದೆ ಅಂದಾಜಿಸಲಾಗಿದೆ. 4,000 ಕೋಟಿ ಪರಿಹಾರ ನೀಡುವಂತೆ ಕೇಂದ್ರಕ್ಕೆ ಪತ್ರ ಬರೆಯಲಾಗಿದೆ" ಎಂದು ಸಚಿವರು ವಿವರಣೆ ನೀಡಿದರು.
ಈ ಬಾರಿಯ ಮುಂಗಾರು ಅವಧಿ (ಜೂನ್ 1 ರಿಂದ ಸೆಪ್ಟೆಂಬರ್ 30) ಮುಂಗಾರು ಪ್ರವೇಶ ಮತ್ತು ವ್ಯಾಪಿಸಲು ಸಾಮಾನ್ಯ ದಿನಾಂಕಕ್ಕಿಂತ ಒಂದು ವಾರ ತಡವಾಗಿತ್ತು. ಜೂನ್ ತಿಂಗಳಿನಲ್ಲಿ ಮುಂಗಾರು ದುರ್ಬಲಗೊಂಡು ವಾಡಿಕೆಗಿಂತ ಶೇ. 56 ಮಳೆ ಕೊರತೆ ಉಂಟಾಯಿತು. ಜುಲೈನಲ್ಲಿ ಮುಂಗಾರು ಚುರುಕುಗೊಂಡು ವಾಡಿಕೆಗಿಂತ ಶೇ.29 ಹೆಚ್ಚು ಮಳೆಯಾಗಿತ್ತು. ಆಗಸ್ಟ್ನಲ್ಲಿ ವಾಡಿಕೆಗಿಂತ ಶೇ.73 ಮಳೆ ಕೊರತೆಯಾಗಿದ್ದು, ಕಳೆದ 125 ವರ್ಷಗಳಲ್ಲಿ ಅತಿ ಕಡಿಮೆ ಮಳೆ ದಾಖಲಾಗಿದೆ.
"ಕಳೆದ ವರ್ಷ ಕಲಬುರಗಿ, ಬೀದರ್, ಯಾದಗಿರಿ, ವಿಜಯಪುರ ಜಿಲ್ಲೆಯಲ್ಲಿ ತೊಗರಿ ಬೆಳೆ ನೆಟೆ ರೋಗಕ್ಕೆ ತುತ್ತಾಗಿದ್ದರಿಂದ ಹಿಂದಿನ ಸರ್ಕಾರ ಪರಿಹಾರ ಘೋಷಣೆ ಮಾಡಿತ್ತಾದರೂ, ಅನುದಾನ ಬಿಡುಗಡೆ ಮಾಡಿರಲಿಲ್ಲ. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಕೂಡಲೇ ಎರಡು ಹಂತದಲ್ಲಿ 4 ಜಿಲ್ಲೆಗಳ 2,37,860 ರೈತರಿಗೆ 148 ಕೋಟಿ ರೂ. ಪರಿಹಾರ ನೀಡಿದೆ. ಇದರಲ್ಲಿ ಕಲಬುರಗಿ ಜಿಲ್ಲೆಯ 1,65,027 ರೈತರಿಗೆ 120.66 ಕೋಟಿ ರೂ. ಪರಿಹಾರ ಸೇರಿದೆ. ಇನ್ನು ಬಾಕಿ 74 ಕೋಟಿ ರೂ. ಪರಿಹಾರ ನೀಡಬೇಕಿದ್ದು, ಅದನ್ನು ಶೀಘ್ರ ರೈತರ ಖಾತೆಗೆ ಪಾವತಿಸಲಾಗುವುದು" ಎಂದರು.
ಬೆಳೆ ವಿಮೆ ಮಾರ್ಪಾಡು; ಸಚಿವರು ಬೆಳೆ ವಿಮೆಯ ಬಗ್ಗೆ ಮಾತನಾಡಿ, "ಬೆಳೆ ವಿಮೆಗೆ ಈಗ ಖಾಸಗಿ ಕಂಪನಿಯೇ ಉಸ್ತುವಾರಿಯಾಗಿದ್ದು, ಸಮರ್ಪಕವಾಗಿ ಬೆಳೆ ಹಾನಿಗೆ ತಕ್ಕ ಪರಿಹಾರ ದೊರಕುತ್ತಿಲ್ಲ ಎಂಬುದಾಗಿ ವ್ಯಾಪಕ ದೂರುಗಳು ಕೇಳಿ ಬರುತ್ತಿರುವ ಹಿನ್ನೆಲೆಯಲ್ಲಿ ಈ ಮೊದಲಿನಂತೆ ಮುಂದಿನ ವರ್ಷದಿಂದ ಸರ್ಕಾರದಿಂದಲೇ ಬೆಳೆ ವಿಮೆ ನಿರ್ವಹಿಸಲು ಚಿಂತನೆ ನಡೆದಿದೆ" ಎಂದು ಹೇಳಿದರು.
"ಕೃಷಿ ಹೊಂಡ ನಿರ್ಮಾಣ ಮಾಡುವ ಕೃಷಿ ಭಾಗ್ಯ ಯೋಜನೆ ಮತ್ತೆ ಜಾರಿಗೆ ತರಲಾಗುತ್ತಿದೆ. ಇದಕ್ಕಾಗಿ ಈ ವರ್ಷ 100 ಕೋಟಿ ರೂ. ಅನುದಾನ ಮೀಸಲಿರಿಸಿದ್ದು, ಮುಂದಿನ ವರ್ಷ ಇನ್ನೂ ಹೆಚ್ಚಿನ ಅನುದಾನ ನೀಡಲಾಗುವುದು" ಎಂದು ಸಚಿವರು ಭರವಸೆ ನೀಡಿದರು.












Click it and Unblock the Notifications