'ರೈತರ ಮನೆಗೆ ನಾನೇ ಹೋಗಿ ಸಾಂತ್ವನ ಹೇಳುವೆ'
ಮೈಸೂರು, ಜುಲೈ 13 : ಆತ್ಮಹತ್ಯೆ ಮಾಡಿಕೊಂಡ ರೈತರ ಮನೆಗಳಿಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳುತ್ತೇನೆ ಎಂದು ಹೇಳಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಜೂನ್ ಜುಲೈ ತಿಂಗಳಲ್ಲಿ ರೈತರ ಆತ್ಮಹತ್ಯೆಗಳು ಯಾಕೆ ಹೆಚ್ಚುತ್ತಿವೆ? ಎನ್ನುವುದಕ್ಕೆ ಕಾರಣಗಳನ್ನು ಹುಡುಕುತ್ತೇವೆ ಎಂದು ಹೇಳಿದ್ದಾರೆ.
ಮೈಸೂರಿನಲ್ಲಿ ಭಾನುವಾರ ಮಾತನಾಡಿದ ಸಿದ್ದರಾಮಯ್ಯ ಅವರು, ರಾಜ್ಯದಲ್ಲಿ ರೈತರ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಆತ್ಮಹತ್ಯೆ ಮಾಡಿಕೊಂಡ ಎಲ್ಲ ರೈತರ ಮನೆಗಳಿಗೆ ಭೇಟಿ ನೀಡಲು ಸಾಧ್ಯವಿಲ್ಲ, ಕೆಲವು ರೈತರ ಮನೆಗಳಿಗೆ ಭೇಟಿ ನೀಡಿ ಸಾಂತ್ವನ ಹೇಳುತ್ತೇನೆ ಎಂದರು. [ರೈತರ ಸಾವಿಗೆ ಕಾರಣವೇನು? ಇಲ್ಲಿದೆ ಉತ್ತರ]

ರೈತರ ಆತ್ಮಹತ್ಯೆಯನ್ನು ತಡೆಯಲು ಸರ್ಕಾರ ಅಗತ್ಯ ಕ್ರಮಗಳನ್ನು ಕೈಗೊಂಡಿದೆ. ಜಿಲ್ಲಾಧಿಕಾರಿ, ಎಸ್ಪಿ, ಎಸಿಪಿ, ಕೃಷಿ, ತೋಟಗಾರಿಕೆ, ಪಶುಸಂಗೋಪನೆ ಇಲಾಖೆ ಅಧಿಕಾರಿಗಳು ತಾಲೂಕು ಮಟ್ಟದಲ್ಲಿ ಸಭೆ ನಡೆಸಿ ರೈತರ ಸಮಸ್ಯೆಯನ್ನು ಆಲಿಸಬೇಕು ಎಂದು ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು. [ರೈತ ಆತ್ಮಹತ್ಯೆ : ಕರ್ನಾಟಕಕ್ಕೆ ರಾಹುಲ್ ಭೇಟಿ]
ರೈತರಿಗೆ ಕಡಿಮೆ ಬಡ್ಡಿದರದಲ್ಲಿ ಸಾಲವನ್ನು ನೀಡಲಾಗುತ್ತಿದೆ. ಅವರು ಬೆಳೆಯುವ ಬೆಳೆಗೆ ಬೆಲೆ ನಿಗದಿ ಮಾಡಲು ಕೃಷಿ ಬೆಲೆ ಆಯೋಗವನ್ನು ರಚನೆ ಮಾಡಲಾಗಿದೆ. ಸರ್ಕಾರ ಕೃಷಿಭಾಗ್ಯ ಯೋಜನೆಯನ್ನು ಜಾರಿಗೆ ತಂದಿದೆ. ಆದರೂ ರೈತರು ಏಕೆ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ ಎಂದು ತಿಳಿಯುತ್ತಿಲ್ಲ ಎಂದು ಸಿದ್ದರಾಮಯ್ಯ ಹೇಳಿದರು. [ಕಬ್ಬು ಬೆಳೆಗಾರರ ಸಮಸ್ಯೆ, ಸಿದ್ದರಾಮಯ್ಯ ಕೊಟ್ಟ ಉತ್ತರ]
ಜೂನ್ ಮತ್ತು ಜುಲೈ ತಿಂಗಳಿನಲ್ಲಿಯೇ ರೈತರ ಆತ್ಮಹತ್ಯೆಗಳು ಹೆಚ್ಚುತ್ತಿವೆ. ಇದಕ್ಕೆ ಕಾರಣ ಏನೆಂದು ಹುಡುಕುತ್ತೇವೆ ಎಂದು ಹೇಳಿದ ಮುಖ್ಯಮಂತ್ರಿಗಳು, ಕೃಷಿ ಕುರಿತ ಅಧ್ಯಯನಕ್ಕೆ ಸಂಬಂಧಿಸಿದಂತೆ ಎಂ.ಎಸ್. ಸ್ವಾಮಿನಾಥನ್ ಅಧ್ಯಕ್ಷತೆಯಲ್ಲಿ 'ವಿಷನ್ ಗ್ರೂಪ್' ರಚಿಸುತ್ತೇವೆ ಎಂದು ಭರವಸೆ ನೀಡಿದರು.
ರಾಹುಲ್ ಭೇಟಿ ಬಗ್ಗೆ ತಿಳಿದಿಲ್ಲ : ಕರ್ನಾಟಕದಲ್ಲಿ ರೈತರ ಆತ್ಮಹತ್ಯೆಗಳು ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು ರಾಜ್ಯಕ್ಕೆ ಭೇಟಿ ನೀಡಲಿದ್ದಾರೆಯೇ ಎಂಬ ಪ್ರಶ್ನೆಗೆ ಉತ್ತರ ನೀಡಿದ ಮುಖ್ಯಮಂತ್ರಿಗಳು, ರಾಹುಲ್ ಅವರ ಭೇಟಿ ಬಗ್ಗೆ ನನಗೆ ಗೊತ್ತಿಲ್ಲ, ಅವರು, ಬರುವುದಾದರೆ ಸ್ವಾಗತಿಸುತ್ತೇವೆ ಎಂದರು.












Click it and Unblock the Notifications