ರೈತರ ಬೆಳೆ ಸಾಲ ಮನ್ನಾಗೆ ಸಮನ್ವಯ ಸಮಿತಿ ಒಪ್ಪಿಗೆ
Recommended Video

ಬೆಂಗಳೂರು, ಜುಲೈ 1: ನಗರದಲ್ಲಿಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಸಮನ್ವಯ ಸಮಿತಿ ಸಭೆ ನಡೆಯಿತು. ಸಭೆಯಲ್ಲಿ ಮುಖ್ಯವಾಗಿ ರೈತರ ಬೆಳೆ ಸಾಲ ಮನ್ನಾಕ್ಕೆ ಒಪ್ಪಿಗೆ ನೀಡಲಾಯಿತು.
ಸಭೆಯಲ್ಲಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ, ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್, ಕಾಂಗ್ರೆಸ್ ಕರ್ನಾಟಕ ಉಸ್ತುವಾರಿ ಕೆ.ಸಿ. ವೇಣುಗೋಪಾಲ್, ಜೆಡಿಎಸ್ ನಾಯಕ ಡ್ಯಾನಿಷ್ ಅಲಿ ಪಾಲ್ಗೊಂಡಿದ್ದರು.
ಸಭೆಯ ನಂತರ ಮಾಧ್ಯಮಗಳಿಗೆ ವಿವರ ನೀಡಿದ ಡ್ಯಾನಿಷ್ ಅಲಿ, "ಸಭೆಯಲ್ಲಿ ರೈತರ ಬೆಳೆ ಸಾಲ ಮನ್ನಾಕ್ಕೆ ಒಪ್ಪಿಗೆ ನೀಡಲಾಯಿತು. ಮುಂದಿನ 5 ವರ್ಷದಲ್ಲಿ ನಿವೇಶನ ರಹಿತರಿಗೆ 20 ಲಕ್ಷ ಮನೆ ನಿರ್ಮಾಣ ಗುರಿ ಹಾಕಿಕೊಳ್ಳಲಾಗಿದೆ," ಎಂದು ಹೇಳಿದರು.

"5 ವರ್ಷದಲ್ಲಿ 1 ಕೋಟಿ ಹೊಸ ಉದ್ಯೋಗ ಸೃಷ್ಟಿಗೆ ಒತ್ತು ನೀಡಲಾಗುತ್ತದೆ. ಕಾಂಗ್ರೆಸ್ ಸರಕಾರ ಜಾರಿಗೆ ತಂದಿದ್ದ ಆರೋಗ್ಯ ಕರ್ನಾಟಕ ಯೋಜನೆ ಜಾರಿ ಮಾಡಲಾಗುತ್ತದೆ. ಸಾಮಾನ್ಯ ಕನಿಷ್ಠ ಕಾರ್ಯಕ್ರಮದ ಬಗ್ಗೆಯೂ ಸಮನ್ವಯ ಸಮಿತಿ ಸಭೆಯಲ್ಲಿ ಚರ್ಚೆ ನಡೆಯಿತು," ಎಂದು ವಿವರ ನೀಡಿದರು.
"ಹಿಂದಿನ ಸರ್ಕಾರ ಜಾರಿಗೆ ತಂದಿದ್ದ ಎಲ್ಲಾ ಜನಪ್ರಿಯ ಯೋಜನೆಗಳನ್ನು ಮುಂದುವರಿಸಲು ನಿರ್ಧಾರ ಕೈಗೊಳ್ಳಲಾಗಿದೆ. ಮುಂದಿನ 5 ವರ್ಷಗಳಲ್ಲಿ ನೀರಾವರಿ ಯೋಜನೆಗಳಿಗಾಗಿ 1.25 ಲಕ್ಷ ಕೋಟಿ ಅನುದಾನ ಮೀಸಲಿಡಲಾಗುತ್ತದೆ. ಹೊಸ ಕ್ರೀಡಾ ನೀತಿಯನ್ನೂ ಸರಕಾರ ಜಾರಿಗೆ ತರಲಿದೆ ಎಂದು ಅವರು ತಿಳಿಸಿದರು.
ಇನ್ನು ಸಂಪುಟ ವಿಸ್ತರಣೆ ಬಗ್ಗೆ ಸಭೆಯಲ್ಲಿ ಯಾವುದೇ ಚರ್ಚೆಯಾಗಿಲ್ಲ ಎಂದ ಡ್ಯಾನಿಷ್ ಅಲಿ, ಉಳಿದ ವಿವರಗಳ ಬಗ್ಗೆ ಬಜೆಟ್ ನಲ್ಲಿ ತಿಳಿಯಲಿದೆ. ಸದ್ಯದಲ್ಲೇ ಮುಖ್ಯಮಂತ್ರಿಗಳು ಬಜೆಟ್ ಮಂಡಿಸಲಿದ್ದಾರೆ ಎಂದರು.












Click it and Unblock the Notifications