ಲಾಕ್ ಡೌನ್; ಏಪ್ರಿಲ್ 14 ರವರೆಗೆ ಉಚಿತ ಹಾಲು ವಿತರಣೆ
ಬೆಂಗಳೂರು, ಏಪ್ರಿಲ್ 3: ಲಾಕ್ ಡೌನ್ ಹಿನ್ನೆಲೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಬಡವರಿಗೆ, ಕಟ್ಟಡ ಕೂಲಿ ಕಾರ್ಮಿಕರಿಗೆ, ವಲಸೆ ಕಾರ್ಮಿಕರಿಗೆ, ಕೊಳೆಗೇರಿ ನಿವಾಸಿಗಳ ಕುಟುಂಬಕ್ಕೆ ಒಂದು ಲೀಟರ್ ಹಾಲನ್ನು ಏಪ್ರಿಲ್ 14 ರವರೆಗೂ ಉಚಿತವಾಗಿ ವಿತರಿಸಲಾಗುವುದು ಎಂದು ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ತಿಳಿಸಿದ್ದಾರೆ.
ದೇವನಹಳ್ಳಿ ತಾಲ್ಲೂಕಿನ ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿಯವರ ಕಚೇರಿಯಲ್ಲಿ ನಡೆದ ಜಿಲ್ಲಾದ್ಯಂತ ಉಚಿತ ಹಾಲು ವಿತರಣೆ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲೆಯ ಬಡವರು ಕಾರ್ಮಿಕರು, ನಿರ್ಗತಿಕರು, ಕೊಳಚೆ ಪ್ರದೇಶಗಳಲ್ಲಿ ವಾಸಿಸುತ್ತಿರುವ ಕುಟುಂಬವೊಂದಕ್ಕೆ ಒಂದು ಲೀಟರ್ ನಂತೆ ಅಂದಾಜು 8261 ಲೀಟರ್ ನಷ್ಟು ಹಾಲನ್ನು ನಾಳೆಯಿಂದ ಏಪ್ರಿಲ್ 14 ರವರೆಗೂ ನಗರಸಭೆ, ಪುರಸಭೆ ಪಂಚಾಯತಿ ಗಳ ಮೂಲಕ ಉಚಿತವಾಗಿ ವಿತರಿಸಲು ನಗರ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳು ಕ್ರಮ ವಹಿಸಬೇಕೆಂದು ಸೂಚಿಸಿದರಲ್ಲದೆ, ಹಾಲು ವಿತರಣೆ ವೇಳೆ ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ತಿಳಿಸಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎನ್.ಎಂ.ನಾಗರಾಜ, ಅಪರ ಜಿಲ್ಲಾಧಿಕಾರಿ ಜಗದೀಶ್.ಕೆ.ನಾಯಕ್, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ಸುಮ, ಪಶುಪಾಲನಾ ಇಲಾಖೆ ಉಪ ನಿರ್ದೇಶಕ ಡಾ.ಬಾಲಚಂದ್ರ, ಸಹಕಾರ ಇಲಾಖೆ ಉಪ ನಿಬಂಧಕಿ ಯಶಸ್ವಿನಿ, ಕೆಎಂಎಫ್ ನ ಜಿಲ್ಲಾ ಉಪ ವ್ಯವಸ್ಥಾಪಕ ಗಂಗಯ್ಯ ಸೇರಿದಂತೆ ಸಂಬಂಧಿಸಿದ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು












Click it and Unblock the Notifications