ಕೊರೊನಾದಿಂದ ರೈತ ಸಂಕುಲ ಸಂಕಷ್ಟಕ್ಕೆ; ನೆರವಿಗೆ ದಾವಿಸಿದ ಯಡಿಯೂರಪ್ಪ
ಬೆಂಗಳೂರು, ಏಪ್ರೀಲ್ 1: ಕೊರೊನಾ ಸೋಂಕು ತಡೆಗಟ್ಟಲು ಲಾಕ್ಡೌನ್ ಘೋಷಣೆ ಮಾಡಲಾಗಿದೆ. ಇದರಿಂದ ರೈತ ಸಂಕುಲ ತೀವ್ರ ಸಂಕಷ್ಟಕ್ಕೆ ಸಿಲುಕಿಕೊಂಡಿದ್ದು, ಈ ನಿಟ್ಟಿನಲ್ಲಿ ಇಂದು ಬೆಳಿಗ್ಗೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ತಮ್ಮ ಗೃಹ ಕಚೇರಿ ಕೃಷ್ಣಾದಲ್ಲಿ ಸಭೆ ನಡೆಸಿ ಹಲವು ತೀರ್ಮಾನಗಳನ್ನು ಕೈಗೊಂಡರು.
ಸೋಂಕು ಹರಡದಂತೆ ತಡೆಯಲು ಲಾಕ್ಡೌನ್ ಅತ್ಯಗತ್ಯವಾಗಿದೆ. ಇಲ್ಲದಿದ್ದರೇ ನಮ್ಮ ಸಮಾಜ ಮತ್ತೊಂದು ಗಂಭೀರ ಸಮಸ್ಯೆಗೆ ತುತ್ತಾಗಲಿದೆ. ಆದರೆ, ರೈತರಿಗೆ ಸಮಸ್ಯೆ ಆಗುತ್ತಿರುವ ಬಗ್ಗೆ ನಮಗೆ ತಿಳಿದಿದೆ. ರೈತರ ಸಮಸ್ಯೆಗಳನ್ನು ನಾವು ಬಗೆಹರಿಸಲು ಬದ್ದರಿದ್ದು ರೈತರು ತಾಳ್ಮೆಯಿಂದ ಇರಬೇಕು ಎಂದು ಮನವಿ ಮಾಡಿದರು.
ಸಭೆಯಲ್ಲಿ ಸದ್ಯ ಲಾಕ್ಡೌನ್ನಿಂದ ಆಗುತ್ತಿರುವ ಸಮಸ್ಯೆಗಳನ್ನು ತುರ್ತಾಗಿ ಪರಿಹರಿಸುವಂತೆ ಸಿಎಂ ಹಲವು ಕ್ರಮಗಳನ್ನು ಕೈಗೊಂಡಿದ್ದಾರೆ. ಪ್ರಮುಖ ತೀರ್ಮಾನಗಳು ಇಲ್ಲಿವೆ..

ಸಾಗಾಣಿಕಗೆ ಅಡಚಣೆ ಮಾಡಕೂಡದು
ಕರ್ನಾಟಕದಿಂದ ಟೊಮ್ಯಾಟೋ, ಕಲ್ಲಂಗಡಿ, ಕರಬೂಜ, ದ್ರಾಕ್ಷಿ, ನಿಂಬೆ ಮೊದಲಾದ ಹಣ್ಣು ತರಕಾರಿಗಳು ದೊಡ್ಡ ಪ್ರಮಾಣದಲ್ಲಿ ಹೊರ ರಾಜ್ಯಗಳಿಗೆ ರಫ್ತಾಗುತ್ತಿತ್ತು. ಈಗ ಬೇಡಿಕೆ ಕುಸಿದಿದೆ. ಈ ನಿಟ್ಟಿನಲ್ಲಿ ಈ ಅವಶ್ಯಕ ವಸ್ತುಗಳ ಸಾಗಾಣಿಕೆಗೆ ಯಾವುದೇ ರೀತಿಯ ಅಡಚಣೆಯಾಗದಂತೆ ಕ್ರಮ ವಹಿಸಲು ಪೊಲೀಸ್ ಇಲಾಖೆಗೆ ಸೂಚನೆ ನೀಡಲಾಗಿದೆ ಎಂದರು.

ಹಾಪ್ಕಾಮ್ಸ್ ಮೂಲಕ ಪೂರೈಕೆಗೆ ಅವಕಾಶ
ಟೊಮ್ಯಾಟೋ ಸಂಸ್ಕರಣಾ ಘಟಕಗಳ ಮೂಲಕ ಕೆಚಪ್ ತಯಾರಿಕೆ ಮಾಡಲು ಸೂಚಿಸಲಾಗಿದೆ. ಹಾಪ್ಕಾಮ್ಸ್ ಮೂಲಕವೂ ತರಕಾರಿ ಪೂರೈಕೆಗೆ ಅವಕಾಶ ಕಲ್ಪಿಸಲಾಗಿದೆ. ವಾಹನಗಳ ಮೂಲಕ ಪೂರೈಕೆಗೆ ಕೂಡ ಕ್ರಮ ವಹಿಸಲಾಗಿದೆ. ಇದರಿಂದ ಗ್ರಾಹಕರಿಗೂ ಸೂಕ್ತ ದರದಲ್ಲಿ ಹಣ್ಣು ತರಕಾರಿ ಲಭ್ಯವಾಗುವಂತೆ ಮಾಡಲಾಗಿದೆ. ಹಾಪ್ಕಾಮ್ಸ್ನಲ್ಲಿ ಮೊಟ್ಟೆ ಮಾರಾಟಕ್ಕೆ ಸಹ ವ್ಯವಸ್ಥೆ ಮಾಡಲಾಗಿದೆ.

ದಿನವಿಡೀ ತೆರೆದಿಡಲು ಸೂಚಿಸಲಾಗಿದೆ
ಹಣ್ಣು ತರಕಾರಿ ದಿನಸಿ ಮತ್ತಿತರ ಅಗತ್ಯ ವಸ್ತುಗಳ ಅಂಗಡಿಗಳು ದಿನವಿಡೀ ತೆರೆದಿಡಲು ಸೂಚಿಸಲಾಗಿದೆ. ಆದರೆ ಖರೀದಿದಾರರು ಸಾಮಾಜಿಕ ಅಂತರ ಕಾಯ್ದುಕೊಂಡು ಸೂಕ್ತ ಮುನ್ನೆಚ್ಚರಿಕೆಯೊಂದಿಗೆ ಅಗತ್ಯ ವಸ್ತು ಖರೀದಿಸುವಂತೆ ಸೂಚಿಸಲಾಗಿದೆ. ರೈಲುಗಳ ಮೂಲಕ ಹೊರ ರಾಜ್ಯಗಳಿಗೆ ಹಣ್ಣು-ತರಕಾರಿ ಮೊದಲಾದ ವಸ್ತುಗಳ ಮಾರಾಟಕ್ಕೆ ಅನುವು ಮಾಡಿಕೊಡಲಾಗುವುದು ಎಂದು ಭರವಸೆ ನೀಡಿದರು.

ವದಂತಿಗಳಿಗೆ ಕಿವಿಗೊಡಬಾರದು
ಮಾರುಕಟ್ಟೆಗಳಲ್ಲಿ ದಾಸ್ತಾನು ಕೊರತೆ ಇಲ್ಲ. ಆದ್ದರಿಂದ ಜನರು ವದಂತಿಗಳಿಗೆ ಕಿವಿಗೊಡಬಾರದು. ಲಾಕ್ಡೌನ್ ಹಿನ್ನೆಲೆಯಲ್ಲಿ ದಿನಸಿ ಮತ್ತು ತರಕಾರಿಗಳನ್ನು ಹೆಚ್ಚಿನ ದರಕ್ಕೆ ಮಾರಾಟ ಮಾಡುವವರ ಪರವಾನಿಗೆ ರದ್ದು ಮಾಡಲಾಗುವುದು. ಅಡುಗೆ ಎಣ್ಣೆ ದಾಸ್ತಾನು ಲಭ್ಯವಿದ್ದು, ಪ್ಯಾಕೇಜಿಂಗ್ ವ್ಯವಸ್ಥೆ ಮಾಡಿ ಪೂರೈಕೆಗೆ ಕ್ರಮ ವಹಿಸಲು ಸೂಚಿಸಲಾಗಿದೆ. ಬೆಳೆ ಕಟಾವಿಗೆ ನೆರೆಯ ರಾಜ್ಯಗಳಿಂದ ಕಟಾವು ಯಂತ್ರಗಳನ್ನು ತರಿಸಿ, ಕಟಾವಿಗೆ ವ್ಯವಸ್ಥೆ ಮಾಡಲಾಗುತ್ತಿದೆ. ಮುಂದಿನ ತಿಂಗಳಲ್ಲಿ ನಾಲ್ಕು ಜಿಲ್ಲೆಗಳಲ್ಲಿ ಬಿತ್ತನೆಯಾಗಲಿದ್ದು, ಬಿತ್ತನೆ ಬೀಜ, ರಸಗೊಬ್ಬರ ದಾಸ್ತಾನು ಲಭ್ಯವಿದೆ ಎಂದು ಮಾಹಿತಿ ನೀಡಿದರು.












Click it and Unblock the Notifications