ಲಾಕ್ ಡೌನ್: ರೈತರಿಂದ ನೇರವಾಗಿ ಹಣ್ಣುಗಳನ್ನು ಖರೀದಿಸಲು ಸರ್ಕಾರ ತೀರ್ಮಾನ
ಬೆಂಗಳೂರು, ಏಪ್ರಿಲ್ 3: ಡೆಡ್ಲಿ ಕೊರೊನಾ ವೈರಸ್ ಸೋಂಕನ್ನು ತಡೆಗಟ್ಟಲು ದೇಶವನ್ನೇ ಲಾಕ್ ಡೌನ್ ಮಾಡಲಾಗಿದೆ. ಈ ಹಿನ್ನಲೆಯಲ್ಲಿ ಬೆಳೆದ ಹಣ್ಣುಗಳನ್ನು ಮಾರಾಟ ಮಾಡಲಾಗದೆ ರೈತರು ಕಂಗಾಲಾಗಿದ್ದಾರೆ.
ಕಲಬುರಗಿಯಲ್ಲಿ ಕಲ್ಲಂಗಡಿ ಹಣ್ಣನ್ನು ಸರಬರಾಜು ಮಾಡಲಾಗದೆ ನೊಂದ ರೈತ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದ ಘಟನೆಯ ಬೆನ್ನಲ್ಲೇ ಸೂಕ್ತ ಕ್ರಮಗಳನ್ನು ಕೈಗೊಳ್ಳಲು ರಾಜ್ಯ ಸರ್ಕಾರ ಮುಂದಾಗಿದೆ.
ರೈತರಿಗೆ ನಷ್ಟವಾಗದಂತೆ ನೋಡಿಕೊಳ್ಳಲು, ರೈತರಿಂದ ನೇರವಾಗಿ ಹಣ್ಣುಗಳನ್ನು ಖರೀದಿಸಲು ಸರ್ಕಾರ ಮುಂದಾಗಿದೆ. ಈ ಬಗ್ಗೆ ವಿಧಾನ ಸೌಧದಲ್ಲಿ ಗುರುವಾರ ಸಭೆ ನಡೆಯಿತು.

ಇಲಾಖೆಯ ಅಧಿಕಾರಿಗಳ ಜೊತೆಗೆ ತೋಟಗಾರಿಕೆ ಸಚಿವ ಡಾ.ನಾರಾಯಣಗೌಡ, ಸಹಕಾರ ಸಚಿವ ಎಸ್.ಟಿ.ಸೋಮಶೇಖರ್, ಕೃಷಿ ಸಚಿವ ಬಿ.ಸಿ.ಪಾಟೀಲ್ ಹಾಗೂ ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್ ಸಭೆ ನಡೆಸಿದ್ದರು.
ರೈತರಿಂದ ಕಲ್ಲಂಗಡಿ, ಕರಬೂಜ, ದ್ರಾಕ್ಷಿ, ಪಪ್ಪಾಯ, ಅನಾನಸ್ ಹಣ್ಣುಗಳನ್ನು ಖರೀದಿಸಿ, ಅವುಗಳಿಗೆ ಸರ್ಕಾರದ ಮಟ್ಟದಲ್ಲೇ ಬೆಲೆ ನಿಗದಿ ಮಾಡುವ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು.
ಹಣ್ಣುಗಳನ್ನು ಖರೀದಿಸಿ, ನಿರ್ವಹಣಾ ವೆಚ್ಚವನ್ನೊಳಗೊಂಡು ಮಾರಾಟ ದರ ನಿಗದಿ ಮಾಡಿ, ಬಳಿಕ ಬೆಂಗಳೂರಿನ ವಸತಿ ಸಮುಚ್ಚಯಗಳಿಗೆ ನೇರವಾಗಿ ಸರಬರಾಜು ಮಾಡಲು ಸಭೆಯಲ್ಲಿ ತೀರ್ಮಾನಿಸಲಾಗಿದೆ.
ಅಗತ್ಯವಿರುವ ಮಾನವ ಸಂಪನ್ಮೂಲಗಳನ್ನ ತೋಟಗಾರಿಕೆ, ಬಿಬಿಎಂಪಿ, ಕೃಷಿ ಉತ್ಪನ್ನ ಮಾರಾಟ ಇಲಾಖೆ ಹಾಗೂ ಇನ್ನಿತರ ಇಲಾಖೆಗಳಿಂದ ಪಡೆದು, ರೈತರಿಂದ ಖರೀದಿಸಿದ ಹಣ್ಣುಗಳನ್ನು ಹಾಪ್ ಕಾಮ್ಸ್ ಮೂಲಕ ಮಾರಾಟ ಮಾಡಲು ಸರ್ಕಾರ ನಿರ್ಧರಿಸಿದೆ.












Click it and Unblock the Notifications