ಕೃಷಿ ಕಾಯ್ದೆ ಕೆಂಡ: ರೈತರಿಗೆ ಲಾಭದಾಯಕವಾಗಿವೆ ಎಂದ ಸಚಿವ ತೋಮರ್
ನವದೆಹಲಿ, ಜುಲೈ 22: ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಕೃಷಿ ಕಾಯ್ದೆಗಳು ರೈತರಿಗೆ ಲಾಭದಾಯವಾಗಿದ್ದು, ಅನ್ನದಾತರ ಪರವಾಗಿವೆ ಎಂಬುದಕ್ಕೆ ದೇಶವೇ ಸಾಕ್ಷಿ ಎಂದು ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಹೇಳಿದ್ದಾರೆ.
ಮುಂಗಾರು ಅಧಿವೇಶನದ ಮೂರನೇ ದಿನ ಸಂಸತ್ ಎದುರಿಗೆ ಮಾಧ್ಯಮಗಳಿಗೆ ಅವರು ಪ್ರತಿಕ್ರಿಯೆ ನೀಡಿದ್ದಾರೆ. "ಮೂರು ಕೃಷಿ ಕಾಯ್ದೆಗಳ ಬಗ್ಗೆ ಈ ಹಿಂದೆಯೂ ನಾವು ಚರ್ಚೆ ನಡೆಸಿದ್ದೇವೆ. ರೈತರಿಗೆ ಈ ಕಾಯ್ದೆಗಳಲ್ಲಿ ಲೋಪದೋಷಗಳು ಕಂಡು ಬಂದರೆ ಅದನ್ನು ಪ್ರಸ್ತಾಪ ಮಾಡಲಿ. ರೈತರ ಜೊತೆಗೆ ಚರ್ಚೆ ನಡೆಸುವುದಕ್ಕೆ ನಾವು ಸಿದ್ಧವಾಗಿದ್ದೇವೆ," ಎಂದು ತೋಮರ್ ತಿಳಿಸಿದ್ದಾರೆ.
ದೆಹಲಿಯ ಜಂತರ್ ಮಂತರ್ ಎದುರು ರೈತರ ಪ್ರತಿಭಟನೆ: ಗಡಿಯಲ್ಲಿ ರೈತರ ಜಮಾವಣೆ
ಕಳೆದ ನವೆಂಬರ್.26ರಿಂದ ನವದೆಹಲಿಯ ಸಿಂಘು ಗಡಿ, ಟಿಕ್ರಿ ಗಡಿ ಮತ್ತು ಘಾಜಿಪುರ್ ಗಡಿ ಪ್ರದೇಶಗಳಲ್ಲಿ ರೈತರು ನಿರಂತರವಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ. ಪಂಜಾಬ್, ಹರಿಯಾಣ, ಮತ್ತು ಉತ್ತರ ಪ್ರದೇಶದ ಸಾವಿರಾರು ರೈತರು ಕೃಷಿ ಕಾಯ್ದೆಗಳ ವಿರುದ್ಧ ಕೂಗು ಎತ್ತಿದ್ದಾರೆ.
ಸಂಸತ್ ಎದುರಿಗೆ ಕಾಂಗ್ರೆಸ್ ಸಂಸದರ ಪ್ರತಿಭಟನೆ
ಕೇಂದ್ರ ಸರ್ಕಾರ ಜಾರಿಗೊಳಿಸಿರುವ ವಿವಾದಿತ ಕೃಷಿ ಕಾಯ್ದೆಗಳನ್ನು ರದ್ದುಗೊಳಿಸುವಂತೆ ಆಗ್ರಹಿಸಿ ನಡೆಯುತ್ತಿರುವ ಹೋರಾಟಕ್ಕೆ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಕೂಡ ಸಾಥ್ ಕೊಟ್ಟಿದ್ದಾರೆ. ಸಂಸತ್ ಎದುರಿನ ಗಾಂಧಿ ಪ್ರತಿಮೆ ಬಳಿ ರಾಹುಲ್ ಗಾಂಧಿ ನೇತೃತ್ವದಲ್ಲಿ ಕಾಂಗ್ರೆಸ್ ಸಂಸದರು ಪ್ರತಿಭಟನೆ ನಡೆಸಿದರು. ವಿವಾದಿತ ಕಾಯ್ದೆಗಳನ್ನು ವಾಪಸ್ ಪಡೆಯುವಂತೆ ಆಗ್ರಹಿಸಿದರು.
ಕೃಷಿ ಸಚಿವರಿಗೆ ನಾಮಫಲಕ ತೋರಿದ ಅಕಾಲಿ ದಳ ಸಂಸದರು
ರೈತವಿರೋಧಿ ಕಾಯ್ದೆಗಳನ್ನು ರದ್ದುಗೊಳಿಸುವಂತೆ ಆಗ್ರಹಿಸಿ ಸಂಸತ್ ಅಧಿವೇಶನದ ಆರಂಭ ದಿನದಿಂದಲೂ ಶಿರೋಮಣಿ ಅಕಾಲಿ ದಳದ ಸಂಸದರು ಪ್ರತಿಭಟನೆ ನಡೆಸುತ್ತಿದ್ದಾರೆ. ಮೂರನೇ ದಿನವೂ ಸಂಸತ್ ಎದುರು ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ರಿಗೆ ಕೃಷಿ ಕಾಯ್ದೆಗಳ ವಿರುದ್ಧ ನಾಮಫಲಕಗಳನ್ನು ತೋರಿಸಿದರು. ಮಂಗಳವಾರ "ರೈತರ ಕಠಿಣ ಪರಿಶ್ರಮದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸುವುದರ ಬದಲಿಗೆ ಕೇಂದ್ರ ಸರ್ಕಾರವು ಅವರನ್ನು ಅವಮಾನಿಸುತ್ತಿದೆ," ಸಂಸತ್ ಎದುರಿಗೆ ಶಿರೋಮಣಿ ಅಕಾಲಿ ದಳದ ಅಧ್ಯಕ್ಷ ಸುಖ್ಬೀರ್ ಸಿಂಗ್ ಬಾದಲ್ ಇಂಥದೊಂದು ಬೋರ್ಡ್ ಅನ್ನು ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಮುಂದೆ ಪ್ರದರ್ಶಿಸಿದ್ದರು.
ದೆಹಲಿಯ ಜಂತರ್ ಮಂತರ್ ನಲ್ಲಿ ರೈತರ ಹೋರಾಟ
ಮೂರು ವಿವಾದಿತ ಕೃಷಿ ಕಾಯ್ದೆಗಳನ್ನು ರದ್ದುಗೊಳಿಸುವಂತೆ ಆಗ್ರಹಿಸಿ ದೆಹಲಿಯ ಜಂತರ್ ಮಂತರ್ ನಲ್ಲಿ ರೈತರು ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ. ರಾಜಧಾನಿಯ ಮೂರು ಗಡಿಗಳಲ್ಲಿ ಈಗಾಗಲೇ ಸಾವಿರಾರು ಸಂಖ್ಯೆಯಲ್ಲಿ ರೈತರು ಜಮಾಯಿಸಿದ್ದಾರೆ. ಭಾರಿ ಸಂಖ್ಯೆಯಲ್ಲಿ ರೈತರನ್ನು ತುಂಬಿಗೊಂಡ ಬಸ್ಸುಗಳು ಜಂತರ್ ಮಂತರ್ ನತ್ತ ಧಾವಿಸುತ್ತಿವೆ.
ರೈತರು ವಿರೋಧಿಸುತ್ತಿರುವ ಕೃಷಿ ಕಾಯ್ದೆಗಳು ಯಾವುವು?
ಕೇಂದ್ರ ಸರ್ಕಾರ ಜಾರಿಗೊಳಿಸಲು ಮುಂದಾಗಿರುವ ವಿವಾದಿತ ರೈತರ ಉತ್ಪಾದನೆ ವ್ಯಾಪಾರ ಮತ್ತು ವಾಣಿಜ್ಯ (ಪ್ರಚಾರ ಮತ್ತು ಸೌಲಭ್ಯ) ಕಾಯ್ದೆ, ಬೆಲೆ ಭರವಸೆ ಮತ್ತು ಕೃಷಿ ಸೇವೆಗಳ ಕಾಯ್ದೆ (ಸಬಲೀಕರಣ ಮತ್ತು ಸಂರಕ್ಷಣೆ) ಒಪ್ಪಂದ ಹಾಗೂ ಅಗತ್ಯ ಸರಕುಗಳ (ತಿದ್ದುಪಡಿ) ಕಾಯ್ದೆಗಳ ವಿರುದ್ಧ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ.