ರಾಜ್ಯದಲ್ಲಿ ರಸಗೊಬ್ಬರ, ಬಿತ್ತನೆ ಬೀಜ ಖರೀದಿ ಸಮಯ ವಿಸ್ತರಣೆಗೆ ರೈತರ ಆಗ್ರಹ
ಬೆಂಗಳೂರು, ಮೇ 29: ರಾಜ್ಯದಲ್ಲಿ ಕೊರೊನಾ ಲಾಕ್ಡೌನ್ ಜಾರಿಗೊಳಿಸಲಾಗಿದ್ದು, ಈ ವೇಳೆ ರಸಗೊಬ್ಬರ ಹಾಗೂ ಬಿತ್ತನೆ ಬೀಜ ಖರೀದಿ ಜೋರಾಗಿದೆ.
ರಾಜ್ಯದಲ್ಲಿ ಸದ್ಯದಲ್ಲಿಯೇ ಮುಂಗಾರು ಆರಂಭವಾಗಲಿದ್ದು, ಈ ಹಿನ್ನೆಲೆಯಲ್ಲಿ ಕೃಷಿ ಚಟುವಟಿಕೆಗಳು ಕೂಡ ಆರಂಭಗೊಳ್ಳಲಿವೆ. ಈ ವೇಳೆ ರಸಗೊಬ್ಬರ ಹಾಗೂ ಬಿತ್ತನೆ ಬೀಜ ಖರೀದಿ ರೈತರಿಗೆ ಅಗತ್ಯವಾಗಿದ್ದು, ಬೀಜ ಖರೀದಿ ಸಮಯ ವಿಸ್ತರಣೆ ಮಾಡುವಂತೆ ರೈತರು ಒತ್ತಾಯಿಸಿದ್ದಾರೆ.
ರಾಜ್ಯದಲ್ಲಿ ಜೂನ್ 7 ರವರೆಗೆ ಅಗತ್ಯ ವಸ್ತುಗಳ ಖರೀದಿಗೆ ಪ್ರತಿದಿನ ಬೆಳಿಗ್ಗೆ 6 ರಿಂದ 10 ರವರೆಗೆ ಸಮಯ ನಿಗದಿಪಡಿಸಲಾಗಿದೆ. ಈ ಸಂದರ್ಭದಲ್ಲಿ ಮುಂಗಾರು ಮಳೆ ಸುರಿಯಲಿದ್ದು, ಕೃಷಿ ಚಟುವಟಿಕೆ ಆರಂಭಿಸಲು ರಸಗೊಬ್ಬರ ಹಾಗೂ ಬಿತ್ತನೆ ಬೀಜ ಪೂರೈಕೆ ಖರೀದಿ ಸಮಯವನ್ನು ಬೆಳಿಗ್ಗೆ 6ರಿಂದ ಸಂಜೆ 6 ರವರೆಗೆ ವಿಸ್ತರಿಸಬೇಕೆಂದು ರೈತರು ಆಗ್ರಹಿಸಿದ್ದಾರೆ.

ಮುಂಗಾರು ಹಂಗಾಮಿಗೆ ಕೃಷಿ ಇಲಾಖೆ ಸಜ್ಜು
ಈ ಬಾರಿಯೂ ಸಹ ಮುಂಗಾರು ಹಂಗಾಮಿಗೆ ಕೃಷಿ ಇಲಾಖೆ ಸಕಲ ರೀತಿಯಲ್ಲಿ ಸಜ್ಜಾಗಿದ್ದು, ಕಳೆದ ಬಾರಿ ಶೇ.107ರಷ್ಟು ಹೆಚ್ಚು ಬಿತ್ತನೆಯಾಗಿ ಕೋವಿಡ್ ಸಮಯದಲ್ಲೂ ಕೂಡ ಸಾಧನೆಯಾಗುವಂತಾಗಿತ್ತು. ಈ ಬಾರಿಯೂ ಕೂಡ ಕೃಷಿ ಹಾಗೂ ರೈತರಿಗೆ ಯಾವುದೇ ತೊಂದರೆಯಾಗದಂತೆ ಕೃಷಿ ಇಲಾಖೆ ಸಿದ್ಧಗೊಂಡಿದ್ದು, ರಸಗೊಬ್ಬರಕ್ಕಾಗಲೀ, ಬಿತ್ತನೆ ಬೀಜ ಪೂರೈಕೆಯಲ್ಲಿ ತೊಂದರೆಯಾಗಲೀ, ಕೊರತೆಯಾಗಲೀ ಇರುವುದಿಲ್ಲ. ಈ ಬಾರಿಯ ಬಿತ್ತನೆ ಬೀಜ, ರಸಗೊಬ್ಬರ ಮಳೆಯ ವಿವರ ಆಹಾರ ಧಾನ್ಯಗಳ ಉತ್ಪಾದನೆಯ ಗುರಿ ಈ ಕೆಳಗಿನಂತಿದೆ.

ಮಳೆ ವಿವರ
2021-22ನೇ ಸಾಲಿನ ಪೂರ್ವ ಮುಂಗಾರು ಹಂಗಾಮಿನಲ್ಲಿ ಮೇ.28ರವರೆಗೆ 105 ಮಿ.ಮೀ ಸಾಮಾನ್ಯ ಮಳೆಯಾಗಿದ್ದು, 159 ಮಿ.ಮೀ.ವಾಸ್ತವರಿಕ ಸರಾಸರಿ ಮಳೆ ಅಂದರೆ ಶೇ.51 ರಷ್ಟು ಮಳೆಯಾಗಿರುತ್ತದೆ.
2021-22ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ 77 ಲಕ್ಷ ಹೆಕ್ಟೇರ್ ವಿಸ್ತೀರ್ಣ ಪ್ರದೇಶದಲ್ಲಿ ಬಿತ್ತನೆ ಕೈಗೊಳ್ಳುವ ಗುರಿ ಹೊಂದಿದ್ದು, 101.38 ಲಕ್ಷ ಟನ್ ಆಹಾರ ಧಾನ್ಯಗಳು ಹಾಗೂ 10.85 ಲಕ್ಷ ಟನ್ ಎಣ್ಣೆಕಾಳುಗಳ ಉತ್ಪಾದನೆ ಗುರಿ ಹೊಂದಲಾಗಿದೆ.

ಮೇ.28 ರವರೆಗಿನ ಬಿತ್ತನೆ ವಿವರ
ಏಪ್ರಿಲ್ ಹಾಗೂ ಮೇ ತಿಂಗಳಿನಲ್ಲಿ ಪೂರ್ವ ಮುಂಗಾರು ಮಳೆಯಿಂದಾಗಿ ಚಾಮರಾಜನಗರ, ಮಂಡ್ಯ, ಹಾಸನ, ಚಿಕ್ಕಮಗಳೂರು, ತುಮಕೂರು ಮತ್ತು ಚಿತ್ರದುರ್ಗ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಭೂ ಸಿದ್ಧತೆ ಹಾಗೂ ಜೋಳ, ಹೆಸರು ಉದ್ದು, ಹಲಸಂದೆ, ಎಳ್ಳು, ಸೂರ್ಯಕಾಂತಿ, ಹತ್ತಿ, ತಂಬಾಕು ಸೇರಿದಂತೆ ಇತರೆ ಬೆಳೆಗಳ ಬಿತ್ತನೆ ಪ್ರಾರಂಭವಾಗಿದೆ. ಕರಾವಳಿ, ಮಲೆನಾಡು, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಬಹುತೇಕ ಭಾಗಗಳಲ್ಲಿ ನೈರುತ್ಯ ಮಾರುತ ಮಳೆಯು ಪ್ರಾರಂಭವಾದ ಬಳಿಕ ಭೂಮಿ ಸಿದ್ಧತೆ ಹಾಗೂ ಬಿತ್ತನೆ ಕಾರ್ಯಗಳು ಪ್ರಾರಂಭವಾಗಿವೆ.
ಚಾಮರಾಜನಗರ, ಮಂಡ್ಯ, ಹಾಸನ, ಚಿಕ್ಕಮಗಳೂರು, ತುಮಕೂರು, ಚಿತ್ರದುರ್ಗ, ಮೈಸೂರು, ಬೆಳಗಾವಿ ಹಾಗೂ ರಾಮನಗರ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಪೂರ್ವ ಮುಂಗಾರು ಮಳೆಯಾಗಿದ್ದು, ಕಳೆದ ಮೇ 28 ರವರೆಗೆ 3.06 ಲಕ್ಷ ಹೆಕ್ಟೇರ್ ವಿಸ್ತೀರ್ಣದಲ್ಲಿ ಬಿತ್ತನೆಯಾಗಿದೆ. ಇಲ್ಲಿಯವರೆಗಿನ ವರದಿ ಪ್ರಕಾರ 77.00 ಲಕ್ಷ ಹೆಕ್ಟೇರ್ ಬಿತ್ತನೆ ಗುರಿಗೆ ಪ್ರತಿಯಾಗಿ 3.06 ಲಕ್ಷ ಹೆಕ್ಟೇರ್ ವಿಸ್ತೀರ್ಣದಲ್ಲಿ ಶೇ.3.97ರಷ್ಟು ಬಿತ್ತನೆಯಾಗಿದೆ.
Recommended Video

ಅಗತ್ಯಕ್ಕನುಸಾರ ಬಿತ್ತನೆ ಬೀಜ ಹಂಚಿಕೆ ವಿವರ
ಲಾಕ್ಡೌನ್ ಸಮಯದಲ್ಲಿಯೂ ಕೂಡ ಕೃಷಿಗಾಗಲೀ ರೈತಾಪಿ ಚಟುವಟಿಕೆಗಳಿಗಾಗಲೀ ಅಥವಾ ಕೃಷಿ ಯಂತ್ರೋಪಕರಣಗಳ ಖರೀದಿಗಾಗಲೀ ಯಾವುದೇ ನಿರ್ಬಂಧ ವಿಧಿಸಿಲ್ಲ. 2021-21ರ ಮುಂಗಾರು ಹಂಗಾಮಿಗೆ ಅಂದಾಜು 6 ಲಕ್ಷ ಕ್ವಿಂಟಾಲ್ ಬಿತ್ತನೆ ಬೀಜಗಳಿಗೆ ಬೇಡಿಕೆಯಿದ್ದು, ಕಳೆದ ಮೇ 28 ರವರೆಗೆ ರೈತ ಸಂಪರ್ಕ ಕೇಂದ್ರಗಳಲ್ಲಿ ಇದುವರೆಗೂ 19,675 ಕ್ವಿಂಟಾಲ್ಗಳಷ್ಟು ಬಿತ್ತನೆ ಬೀಜ ವಿತರಿಸಲಾಗಿದ್ದು, 1,74,653 ಕ್ವಿಂಟಾಲ್ಗಳಷ್ಟು ಇನ್ನೂ ದಾಸ್ತಾನು ಇದೆ. ಅಗತ್ಯಕ್ಕೆ ತಕ್ಕಂತೆ ಬಿತ್ತನೆ ಬೀಜ ಪೂರೈಸಲಾಗುತ್ತಿದ್ದು, ಬಿತ್ತನೆ ಬೀಜ ಪೂರೈಕೆಗೆ ಯಾವುದೇ ಕೊರತೆ ಇರುವುದಿಲ್ಲ.
2021-22ರ ಮುಂಗಾರು ಹಂಗಾಮಿನಲ್ಲಿ ಒಟ್ಟು 26.47 ಲಕ್ಷ ಮೆಟ್ರಿಕ್ ಟನ್ ವಿವಿಧ ರಾಸಾಯನಿಕ ಗೊಬ್ಬರಗಳಿಗೆ ಬೇಡಿಕೆಯಿದ್ದು, ಇದರಲ್ಲಿ ಏಪ್ರಿಲ್ ಹಾಗೂ ಮೇ ಮಾಹೆಯಲ್ಲಿ 7,97,662 ಮೆಟ್ರಿಕ್ ಟನ್ ರಸಗೊಬ್ಬರಗಳಿಗೆ ಬೇಡಿಕೆಯಿದ್ದು, ಮೇ 28 ರವರೆಗೆ ಒಟ್ಟು 5,67,239 ಮೆಟ್ರಿಕ್ ಟನ್ ಪ್ರಮಾಣದಲ್ಲಿ ರಸಗೊಬ್ಬರ ಸರಬರಾಜಾಗಿದೆ. ಅಲ್ಲದೇ ಇನ್ನೂ ಒಟ್ಟು 12,38,600 ಮೆಟ್ರಿಕ್ ಟನ್ಗಳಷ್ಟು ರಸಗೊಬ್ಬರ ದಾಸ್ತಾನು ಇದ್ದು, ಯಾವುದೇ ರಸಗೊಬ್ಬರಕ್ಕೆ ಕೊರತೆ ಇರುವುದಿಲ್ಲ.












Click it and Unblock the Notifications