ಬಿತ್ತನೆ ಕಾಲದ ನಷ್ಟಕ್ಕೂ ಫಸಲ್ ಭೀಮಾ ಯೋಜನೆಯಡಿ ಪರಿಹಾರ
ಬೆಂಗಳೂರು, ಜೂನ್ 30: ಕೃಷಿ ಇಲಾಖೆ ರಾಜ್ಯದ ರೈತರಿಗೆ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆಯು 2023-24ನೇ ಸಾಲಿನ ನೋಂದಣಿಗಾಗಿ ಕರೆ ನೀಡಿದೆ. ವಿವಿಧ ಬೆಳಗಳನ್ನು ನೋಂದಾಯಿಸಲು ಅವಕಾಶ ಕಲ್ಪಿಸಲಾಗಿದೆ. ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಇಲಾಖೆ ಮನವಿ ಮಾಡಿದೆ.
ರೈತರು ನೋಂದಣಿ ಮಾಡಿಸಿದರೆ ಅತಿವೃಷ್ಟಿ, ಅನಾವೃಷ್ಟಿ, ಅಕಾಲಿಕ ಮಳೆ ಮುಂತಾದ ಪ್ರಾಕೃತಿಕ ವಿಕೋಪ ಸೇರಿದಂತೆ ಹಲವಾರು ಕಾರಣಗಳಿಂದ ಬೆಳೆ ನಷ್ಟ ಉಂಟಾದಾಗ ವಿಮಾ ರಕ್ಷಣೆ ಮತ್ತು ಆರ್ಥಿಕ ಬೆಂಬಲ ಸಿಗಲಿದೆ. ರೈತರಿಗೆ ನೆರವು ನೀಡುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ.

ಬಿತ್ತನೆ ಅಥವಾ ನಾಟಿ ಕಾಲಕ್ಕೆ ಆಗುವ ನಷ್ಟ, ಬೆಳವಣಿಗೆ ಹಂತದಲ್ಲಿ ಆಗುವ ನಷ್ಟ ಹಾಗೂ ಕಟಾವಿನ ನಂತರದ ನಷ್ಟವನ್ನು ಸಹ ಈ ಯೋಜನೆಯಡಿ ಪರಿಗಣಿಸಲಾಗುತ್ತದೆ. ಪ್ರಸಕ್ತ ಸಾಲಿನ ಬೆಳೆ ವಿಮೆಗಾಗಿ ವಿಮಾ ಅರ್ಜಿಗಳು ರಾಷ್ಟ್ರೀಕೃತ ಬ್ಯಾಂಕ್ಗಳಲ್ಲಿ ಲಭ್ಯವಿದ್ದು, ಈ ಯೋಜನೆಯಡಿ ಅರ್ಜಿಯನ್ನು ಸಲ್ಲಿಸಿ ನೋಂದಾಯಿಸಿಕೊಳ್ಳಬಹುದು.
ವಿಮಾ ಮೊತ್ತದ ವಿವರಗಳು; ಯೋಜನೆಯಡಿಯಲ್ಲಿ ರೈತರ ವಿಮಾ ಕಂತನ್ನು ಆಹಾರ ಮತ್ತು ಎಣ್ಣೆ ಕಾಳು ಬೆಳೆಗಳಿಗೆ ಮುಂಗಾರು ಹಂಗಾಮಿಗೆ ಶೇ.2 ಎಂದು ಪರಿಗಣಿಸಲಾಗಿದೆ. ಮುಖ್ಯ ಬೆಳೆಗಳಿಗೆ ಯೋಜನೆಯನ್ನು ಗ್ರಾಮ ಪಂಚಾಯಿತಿ ಮಟ್ಟಕ್ಕೆ ಅಳವಡಿಸಲಾಗಿದೆ. ಯೋಜನೆಯು ಸಾಲ ಪಡೆದ ಹಾಗೂ ಸಾಲ ಪಡೆಯದ ರೈತರಿಗೆ ಐಚ್ಛಿಕವಾಗಿದ್ದು, ವಿಮಾ ಮೊತ್ತವು ಒಂದೇ ಆಗಿದೆ ಎಂದು ಸ್ಪಷ್ಟಪಡಿಸಲಾಗಿದೆ.
2023 ನೇ ಸಾಲಿನ ಮುಂಗಾರು ಹಂಗಾಮಿನ ವಿಮಾ ಕಂತು ಭತ್ತ (ನೀರಾವರಿ) ಸಾಮಾನ್ಯ ವಿಮಾ ಮೊತ್ತ ರೂ. 93,250, ರೈತರ ವಿಮಾ ಕಂತು ಮೊತ್ತ ರೂ.1865. ಬೆಳೆ, ಹೆಸರು ನೋಂದಾಯಿಸಿಕೊಳ್ಳಲು ಆಗಸ್ಟ್ 16 ಕೊನೆಯ ದಿನವಾಗಿದೆ. ಭತ್ತ (ಮಳೆಯಾಶ್ರಿತ) ವಿಮಾ ಮೊತ್ತ ರೂ.63,750, ರೈತರ ವಿಮಾ ಕಂತು ಮೊತ್ತ ರೂ.1275, ನೋಂದಾಯಿಸಿಕೊಳ್ಳಲು ಆಗಸ್ಟ್, 31 ಕೊನೆಯ ದಿನವಾಗಿದೆ.
ಮುಸುಕಿನ ಜೋಳ (ಮಳೆಯಾಶ್ರಿತ) ವಿಮಾ ಮೊತ್ತ ರೂ.56,500, ರೈತರ ವಿಮಾ ಕಂತು ಮೊತ್ತ ರೂ.1,130. ನೋಂದಾಯಿಸಿಕೊಳ್ಳಲು ಜುಲೈ, 31 ಕೊನೆಯ ದಿನವಾಗಿದೆ. ಯೋಜನೆಯಡಿ ರೈತರು ಅರ್ಜಿಯೊಂದಿಗೆ ಪಹಣಿ, ಬ್ಯಾಂಕ್ ಪಾಸ್ ಪುಸ್ತಕ ಮತ್ತು ಆಧಾರ್ ಸಂಖ್ಯೆ ನೀಡಿ ಬೆಳೆ ನೋಂದಾಯಿಸಿಕೊಳ್ಳಬೇಕು.
ಯೋಜನೆಯ ಮಾಹಿತಿ http://www.samrakshane.karnataka.gov.in/ ವೆಬ್ಸೈಟ್ನಲ್ಲಿ ಪಡೆಯಬಹುದು. ಹೆಚ್ಚಿನ ಮಾಹಿತಿಗೆ ಹೋಬಳಿಯ ರೈತ ಸಂಪರ್ಕ ಕೇಂದ್ರ ಹಾಗೂ ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕರ ಕಚೇರಿಗೆ ಭೇಟಿ ನೀಡಬಹುದಾಗಿದೆ.
ವಿವಿಧ ಜಿಲ್ಲೆಗಳಲ್ಲಿ ಅಲ್ಲಿನ ಹವಾಗುಣಕ್ಕೆ ಅನ್ವಯವಾಗುವಂತೆ ಬೆಳೆಗಳನ್ನು ಆಯ್ಕೆ ಮಾಡಲಾಗಿದೆ. ವಿವಿಧ ಬ್ಯಾಂಕುಗಳಲ್ಲಿ ಯೋಜನೆಯಡಿ ಅರ್ಜಿ ಸಲ್ಲಿಕೆ ಮಾಡಬಹುದು. ರೈತರು ಹೆಚ್ಚಿನ ಮಾಹಿತಿಗೆ ಕೃಷಿ ಇಲಾಖೆಯ ಅಧಿಕಾರಿಗಳನ್ನು ಸಹ ಸಂಪರ್ಕಿಸಬಹುದಾಗಿದೆ.
ತೋಟಗಾರಿಕಾ ಬೆಳೆಗಳು; ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬೀಮಾ ಯೋಜನೆಯ 2023-24ನೇ ಸಾಲಿಗೆ ಕೃಷಿ ಮಾತ್ರವಲ್ಲ ತೋಟಗಾರಿಕೆಯ ವಿವಿಧ ಬೆಳೆಗಳನ್ನು ಸಹ ನೋಂದಣಿ ಮಾಡಿಸಿ, ಬೆಳೆ ವಿಮೆ ಮಾಡಿಸಿಕೊಳ್ಳಿ ಎಂದು ಮನವಿ ಮಾಡಲಾಗಿದೆ.
ಪ್ರಕೃತಿ ವಿಕೋಪಗಳು, ಹವಾಮಾನ ವೈಪರೀತ್ಯಗಳಾದ ಅತಿವೃಷ್ಟಿ, ಅನಾವೃಷ್ಟಿ, ಬಿರುಗಾಳಿ, ಆಲಿಕಲ್ಲು ಮಳೆ, ಪ್ರವಾಹ, ಸಿಡಿಲಿನಿಂದ ಉಂಟಾಗುವ ಬೆಂಕಿ ಅವಘಡ ಇತ್ಯಾದಿ ಕಾರಣಗಳಿಂದ ಸಂಭವಿಸಬಹುದಾದ ಬೆಳೆಹಾನಿಯ ನಷ್ಟದ ಪರಿಹಾರವನ್ನು ಯೋಜನೆಯಡಿ ಪಡೆಯಬಹುದು.
ಬೆಳೆ ವಿಮೆ ಘಟಕ (ಹಳ್ಳಿ, ಗ್ರಾಮ ಪಂಚಾಯಿತಿ, ಹೋಬಳಿ)ವಾರು ನಿರ್ಧರಿಸಿ ಬೆಳೆ ನಷ್ಟದ ಪರಿಹಾರವನ್ನು ನೀಡುವುದರ ಮೂಲಕ ರೈತರಿಗೆ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಭೀಮಾ (ವಿಮಾ) ಯೋಜನೆಯು ನೆರವಾಗಲಿದೆ ಎಂದು ಕರೆ ನೀಡಲಾಗಿದೆ.












Click it and Unblock the Notifications