ದೆಹಲಿ ರೈತರ ಹೋರಾಟ ಬೆಂಬಲಿಸಿ ದಾವಣಗೆರೆ ರೈತರಿಂದ ಹೆದ್ದಾರಿ ತಡೆ
ದಾವಣಗೆರೆ, ಡಿಸೆಂಬರ್ 2: ಕೇಂದ್ರ ಸರ್ಕಾರದ ಹೊಸ ಕೃಷಿ ಕಾನೂನುಗಳ ವಿರುದ್ಧ ದೆಹಲಿಯಲ್ಲಿ ನಡೆಯುತ್ತಿರುವ ರೈತರ ಹೋರಾಟವನ್ನು ಬೆಂಬಲಿಸಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಕಾರ್ಯಕರ್ತರು ತಾಲ್ಲೂಕಿನ ಐಗೂರು ಗೊಲ್ಲರಹಟ್ಟಿ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ರಸ್ತೆ ತಡೆದು ಪ್ರತಿಭಟನೆ ನಡೆಸಿದರು.
ಹೆದ್ದಾರಿಯಲ್ಲಿ ಮಹಾತ್ಮ ಗಾಂಧೀಜಿ ಅವರ ಭಾವಚಿತ್ರ ಇಟ್ಟು ರಸ್ತೆ ತಡೆ ನಡೆಸಿದ ರೈತ ಸಂಘದ ಕಾರ್ಯಕರ್ತರು ದೆಹಲಿಯಲ್ಲಿ ರೈತರ ಮೇಲೆ ದೌರ್ಜನ್ಯ ಖಂಡಿಸಿ ಆಕ್ರೋಶ ವ್ಯಕ್ತಪಡಿಸಿದರು.
ರೈತರೊಂದಿಗೆ ಡಿ.3 ರಂದು ಮತ್ತೊಂದು ಸುತ್ತಿನ ಮಾತುಕತೆ: ಕೇಂದ್ರ ಕೃಷಿ ಸಚಿವ
ಈ ಸಂದರ್ಭ ಮಾತನಾಡಿದ ರೈತ ಸಂಘದ ಜಿಲ್ಲಾಧ್ಯಕ್ಷ ಮಲ್ಲಶೆಟ್ಟಿಹಳ್ಳಿ ಚನ್ನಬಸಪ್ಪ, ಭೂ ಸುಧಾರಣಾ ಕಾಯಿದೆ ಅನ್ನದಾತನನ್ನು ಬೀದಿಗೆ ತಳ್ಳುವ ಕಾಯಿದೆ. ಕೃಷಿ ಜಮೀನನ್ನು ಶ್ರೀಮಂತರು, ಕಪ್ಪು ಹಣವುಳ್ಳವರು ಕೊಂಡುಕೊಳ್ಳಲು ಕೇಂದ್ರ ಸರ್ಕಾರ ಅವಕಾಶ ಮಾಡಿಕೊಟ್ಟಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ನಿಯಂತ್ರಣ ಮುಕ್ತ ಲೂಟಿಗಾಗಿ ಎಪಿಎಂಸಿ ಕಾಯಿದೆ ತಿದ್ದುಪಡಿ ಮಾಡಿದ್ದು, ಮಾರುಕಟ್ಟೆ ಪ್ರಾಂಗಣದಾಚೆಯ ವ್ಯವಹಾರದಿಂದ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗೆ ಬರುತ್ತಿದ್ದ ಆದಾಯ ಸಂಪೂರ್ಣ ನಿಂತು ಹೋಗುವ ಅಪಾಯ ಬಂದಿದೆ ಎಂದು ಆರೋಪಿಸಿದರು.
ಬಹುತೇಕ ದೊಡ್ಡ ವರ್ತಕರು, ಎಪಿಎಂಸಿ ವರ್ತಕರು ನೇರವಾಗಿ ಸ್ಥಳೀಯ ಮಧ್ಯವರ್ತಿಗಳ ಮೂಲಕ ವ್ಯವಹಾರಕ್ಕೆ ಮುಂದಾಗುತ್ತಾರೆ. ಇದು ದೇಶದಾದ್ಯಂತ ಅನಧಿಕೃತವಾಗಿ, ಕಾನೂನು ಬಾಹಿರವಾಗಿ ನಡೆಯುತ್ತಿದೆ. ಈಗ ಈ ಕಾಯಿದೆಯ ತಿದ್ದುಪಡಿ ಮೂಲಕ ಕಾನೂನಾತ್ಮಕ ಲೂಟಿಗೆ ಅನುಕೂಲ ಮಾಡಿಕೊಡುತ್ತಿದೆ ಎಂದು ಆಕ್ಷೇಪಿಸಿದರು.
ತಕ್ಷಣವೇ ಕೇಂದ್ರ ಸರ್ಕಾರ ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರ ಬೇಡಿಕೆಗಳನ್ನು ಈಡೇರಿಸುವ ನಿಟ್ಟಿನಲ್ಲಿ ಸೂಕ್ತ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ದೇಶಾದ್ಯಂತ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಎಚ್ಚರಿಸಿದರು.