ಕಲಬುರಗಿ; ಗುಣಮಟ್ಟದ ಬೀಜ ಮತ್ತು ರಸಗೊಬ್ಬರ ಪೂರೈಕೆಗೆ ಡಿಸಿ ಸೂಚನೆ
ಕಲಬುರಗಿ, ಜೂನ್ 23: ಕಲಬುರಗಿಯಲ್ಲಿ ಕೃಷಿ ಇಲಾಖೆ ಅಧಿಕಾರಿಗಳು ಗುಣಮಟ್ಟದ ಬೀಜ ಮತ್ತು ರಸಗೊಬ್ಬರ ವಿತರಣೆಗೆ ಎಲ್ಲಾ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅಧಿಕಾರಿಗಳಿಗೆ ಸೂಚನೆ ನೀಡಿದರು. ಮುಂಗಾರು ಮಳೆ ಜಿಲ್ಲೆಯಲ್ಲಿ ಆರಂಭವಾಗುತ್ತಿದ್ದು, ಕೃಷಿ ಚಟುವಟಿಕೆ ಆರಂಭಗೊಂಡಿದೆ.
ನೂತನ ಜಿಲ್ಲಾಧಿಕಾರಿಯಾಗಿ ಅಧಿಕಾರವಹಿಸಿಕೊಂಡ ಬಿ. ಫೌಜಿಯಾ ತರನ್ನುಮ್ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಸಭೆಯನ್ನು ನಡೆಸಿದರು. ಸಭೆಯಲ್ಲಿ ಮಹಾನಗರ ಪಾಲಿಕೆ ಆಯುಕ್ತ ಭುವನೇಶ ಪಾಟೀಲ ದೇವಿದಾಸ್, ಅಪರ ಜಿಲ್ಲಾಧಿಕಾರಿ ಎಂ. ರಾಚಪ್ಪ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು ಪಾಲ್ಗೊಂಡಿದ್ದರು.

ಸಭೆಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿಗಳು, "ಹವಾಮಾನ ಇಲಾಖೆಯ ಮಾಹಿತಿ ಪ್ರಕಾರ ಮುಂದಿನ ಎರಡು ಮೂರು ದಿನದಲ್ಲಿ ಜಿಲ್ಲೆಗೆ ಮುಂಗಾರು ಮಳೆ ಬರುವ ಸಾಧ್ಯತೆ ಇದ್ದು, ಜುಲೈ ಮೊದಲನೇ ವಾರದಲ್ಲಿ ಬಿತ್ತನೆ ಶುರುವಾಗಬಹುದು. ಹೀಗಾಗಿ ಕೃಷಿ ಇಲಾಖೆ ಗುಣಮಟ್ಟದ ಬೀಜ ಮತ್ತು ರಸಗೊಬ್ಬರ ವಿತರಣೆಗೆ ಎಲ್ಲಾ ಸಿದ್ಧತೆ ಮಾಡಿಕೊಳ್ಳಬೇಕು" ಎಂದರು.
"ಬಿತ್ತನೆ ಬೀಜ ವಿತರಣೆ ಸಂದರ್ಭದಲ್ಲಿ ಗಲಾಟೆಯಾಗದಂತೆ ರೈತ ಸಂಪರ್ಕ ಕೇಂದ್ರದಲ್ಲಿ ಹೆಚ್ಚಿನ ಸಿಬ್ಬಂದಿ ನೇಮಿಸಬೇಕು. ಗುಣಮಟ್ಟದಲ್ಲಿ ಯಾವುದೇ ರಾಜಿ ಇಲ್ಲ. ಕಳಪೆ ಬೀಜ ವಿತರಣೆಯಾಗದಂತೆ ಎಚ್ಚರ ವಹಿಸಬೇಕು. ಅಗತ್ಯಕ್ಕನುಗುಣವಾಗಿ ಬೀಜ ದಾಸ್ತಾನು ಮಾಡಿಕೊಳ್ಳಬೇಕು" ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಕುಡಿಯುವ ನೀರು, ಮೇವು ಸಂಗ್ರಹ; ಇನ್ನೂ ಮಳೆ ಆರಂಭವಾದ ಹಿನ್ನಲೆಯಲ್ಲಿ ಕುಡಿಯುವ ನೀರಿಗೆ ಮೊದಲ ಆದ್ಯತೆ ನೀಡಬೇಕು. ನೀರು ಪೂರೈಕೆಗೆ ಗಮನ ಹರಿಸಬೇಕು. ಮಳೆ ಇನ್ನೂ ವಿಳಂಬವಾದಲ್ಲಿ ಪ್ರತಿ 2 ದಿನಕ್ಕೊಮ್ಮೆಯಾದರು ಜಿಲ್ಲೆಯ ಜನತೆಗೆ ಕುಡಿಯುವ ನೀರು ಪೂರೈಕೆಯಾಗುವಂತೆ ನೋಡಿಕೊಳ್ಳಬೇಕು. ಇದಕ್ಕೆ ಪೂರಕವಾಗಿ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಹೇಳಿದರು.
ವಿಶೇಷವಾಗಿ ಗ್ರಾಮೀಣ ಭಾಗ ಮತ್ತು ಪಟ್ಟಣ ಪ್ರದೇಶದಲ್ಲಿ ಬೋರವೆಲ್ ಕೊರೆಯಲು ಈಗಿನಿಂದಲೇ ಸ್ಥಳ ಗುರುತು ಮಾಡಿಟ್ಟುಕೊಳ್ಳಬೇಕು. ಕುಡಿಯುವ ನೀರಿನ ಸಮಸ್ಯೆ ಇರುವ ಗ್ರಾಮ, ಪಟ್ಟಣಕ್ಕೆ ತಹಶೀಲ್ದಾರ್, ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳು, ಗ್ರಾಮೀಣ ಕುಡಿಯುವ ನೀರು ಸರಬರಾಜು ಇಲಾಖೆಯ ಎ.ಇ.ಇ. ಅಧಿಕಾರಿಗಳು ಜಂಟಿಯಾಗಿ ಭೇಟಿ ನೀಡಿ ಸಮಸ್ಯೆ ಬಗೆಹರಿಸಬೇಕು ಎಂದು ಡಿಸಿ ಸೂಚಿಸಿದರು.
ಕುಡಿಯುವ ನೀರು ಪೂರೈಕೆ ಕುರಿತು ಚರ್ಚೆ ಸಂದರ್ಭದಲ್ಲಿ ಆಳಂದ ತಾಲೂಕಿನ ಗಡಿ ಗ್ರಾಮ ಸರಸಂಬಾದಲ್ಲಿ ನಿಯಮಿತ ವಿದ್ಯುತ್ ಪೂರೈಕೆ ಇಲ್ಲದರಿಂದ ಕುಡಿಯುವ ನೀರು ಪೂರೈಕೆಯಲ್ಲಿ ಸಮಸ್ಯೆಯಾಗುತ್ತಿದೆ ಎಂದು ತಾಲೂಕು ಪಂಚಾಯಿತಿ ಇಓ ಮತ್ತು ಜಿಲ್ಲಾ ಪಂಚಾಯತಿ ಸಿಇಓ ಸಭೆಯ ಗಮನ ಸೆಳೆದರು. ಕೂಡಲೇ ಸದರಿ ಗ್ರಾಮಕ್ಕೆ ಪ್ರತಿದಿನ 8 ರಿಂದ 10 ಗಂಟೆ ವಿದ್ಯುತ್ ಪೂರೈಸಬೇಕು. ಕುಡಿಯುವ ನೀರಿನ ಯೋಜನೆಗೆ ವಿದ್ಯುತ್ ಸಂಪರ್ಕ ಕೂಡಲೇ ನೀಡಬೇಕು. ಅನಗತ್ಯ ವಿಳಂಬ ಮಾಡಬಾರದು ಎಂದು ಜೆಸ್ಕಾಂ ಇ.ಇ. ಅವರಿಗೆ ಡಿಸಿ ನಿರ್ದೇಶನ ನೀಡಿದರು.
ಮಳೆ ಬಂದ ನಂತರ ಸಹಜವಾಗಿ ನೀರು ಮಣ್ಣು ಮಿಶ್ರಿತದಿಂದ ಕೂಡಿ ನಲ್ಲಿಯಲ್ಲಿ ಕಲುಷಿತ ನೀರು ಬರುವ ಸಾಧ್ಯತೆ ಹೆಚ್ಚು. ಹೀಗಾಗಿ ನೀರು ಶುದ್ಧೀಕರಿಸಿ, ಲ್ಯಾಬ್ನಿಂದ ಪರೀಕ್ಷಿಸಿಯೇ ಸಾರ್ವಜನಿಕರಿಗೆ ಶುದ್ಧ ಕುಡಿಯುವ ನೀರು ಪೂರೈಕೆಯಾಗಬೇಕು. ಕಲುಷಿತ ನೀರು ಸೇವನೆಯಿಂದ ಯಾವುದೇ ಹಾನಿಯಾಗದಂತೆ ನೋಡಿಕೊಳ್ಳಬೇಕು ಎಂದು ಡಿಸಿ ತಿಳಿಸಿದರು.
ಮಳೆಯ ಕೊರತೆ; ಸಭೆಯಲ್ಲಿ ಜಂಟಿ ಕೃಷಿ ನಿರ್ದೇಶಕ ಸಮದ್ ಪಟೇಲ್ ಮಾತನಾಡಿ, "ಜೂನ್ 1ರಿಂದ ಇಲ್ಲಿಯ ವರೆಗೆ ವಾಡಿಕೆಯಂತೆ 78 ಮಿ. ಮೀ. ಮಳೆಯಾಗಬೇಕಿತ್ತು. ಬಿದ್ದಿರುವ ಮಳೆ ಪ್ರಮಾಣ 24 ಮಿ. ಮೀ. ಮಾತ್ರ. ಮುಂಗಾರು ಮಳೆ ವಿಳಂಬ ಕಾರಣ ಜಿಲ್ಲೆಯಲ್ಲಿ 8.87 ಲಕ್ಷ ಹೆಕ್ಟೇರ್ ಪೈಕಿ 25,928 ಹೆಕ್ಟೇರ್ ಪ್ರದೇಶದಲ್ಲಿ ಮಾತ್ರ ಬಿತ್ತನೆಯಾಗಿದೆ. 28,300 ಕ್ವಿಂಟಾಲ್ ಬೀಜ ದಾಸ್ತಾನಿದೆ. ಅಗತ್ಯ ಪ್ರಮಾಣದಲ್ಲಿ ರಸಗೊಬ್ಬರ ಸಹ ಇದ್ದು, ಯಾವುದೇ ತೊಂದರೆಯಿಲ್ಲ" ಎಂದು ವಿವರಣೆ ನೀಡಿದರು.
ತೋಟಗಾರಿಕೆ ಉಪ ನಿರ್ದೇಶಕ ಸಂತೋಷ ಇನಾಂಮರ್ ಮಾತನಾಡಿ, "27 ಸಾವಿರ ಹೆಕ್ಟೇರ್ ಪ್ರದೇಶ ಪೈಕಿ ಕೇವಲ ಶೇ.4ರಷ್ಟು ಪ್ರದೇಶದಲ್ಲಿ ಮಾತ್ರ ತೋಟಗಾರಿಕೆ ಬೆಳೆ ಬೆಳೆಯಲಾಗಿದೆ. ಮುಂದಿನ 24 ವಾರಕ್ಕೆ ಬೇಕಾಗುವಷ್ಟು ಜಾನುವಾರುಗಳಿಗೆ ಮೇವು ಸಂಗ್ರಹವಿದೆ, ಮೇವಿನ ಸಮಸ್ಯೆ ಇಲ್ಲ" ಎಂದು ಸಭೆಗೆ ಮಾಹಿತಿ ನೀಡಿದರು.












Click it and Unblock the Notifications