ಹಸಿರು ಶಾಲು ಹಾಕಿದವರೆಲ್ಲ ರೈತರಲ್ಲ: ಡಿಕೆ ಶಿವಕುಮಾರ್
ಬೆಂಗಳೂರು, ಜುಲೈ 28: ಸಂಪೂರ್ಣ ಸಾಲ ಮನ್ನಾಕ್ಕೆ ಆಗ್ರಹಿಸಿ ರಾಜ್ಯದ ವಿವಿಧೆಡೆ ಬಿಜೆಪಿ ನೇತೃತ್ವದಲ್ಲಿ ನಡೆಯುತ್ತಿರುವ ಪ್ರತಿಭಟನೆಯನ್ನು ಸಚಿವ ಡಿ.ಕೆ. ಶಿವಕುಮಾರ್ ಟೀಕಿಸಿದ್ದಾರೆ.
ಪಾದಯಾತ್ರೆಯಲ್ಲಿ ರೈತರು, ಸ್ಥಳೀಯರು ಭಾಗಿಯಾಗಿಲ್ಲ. ಹಸಿರು ಶಾಲು ಹಾಕಿಕೊಂಡವರೆಲ್ಲರೂ ರೈತರಾಗಲು ಸಾಧ್ಯವಿಲ್ಲ ಎಂದು ಶಿವಕುಮಾರ್ ಹೇಳಿದ್ದಾರೆ.
ಸಮ್ಮಿಶ್ರ ಸರ್ಕಾರದ ಯಶಸ್ಸನ್ನು ಬಿಜೆಪಿಗೆ ಸಹಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಎಲ್ಲವನ್ನೂ ಅದು ಕಾಮಾಲೆ ಕಣ್ಣಿನಿಂದ ನೋಡುತ್ತಿದೆ ಎಂದು ಡಿ.ಕೆ. ಶಿವಕುಮಾರ್ ಟೀಕಿಸಿದ್ದಾರೆ.

ಅನುದಾನ ಹಂಚಿಕೆಯಲ್ಲಿ ಸಮ್ಮಿಶ್ರ ಸರ್ಕಾರ ಯಾವುದೇ ತಾರತಮ್ಯ ಮಾಡಿಲ್ಲ. ಅಖಂಡ ಕರ್ನಾಟಕದ ಅಭಿವೃದ್ಧಿಗೆ ಅನುದಾನ ನೀಡಿದ್ದೇವೆ. 40 ಸಾವಿರ ಕೋಟಿ ರೂಪಾಯಿ ಸಾಲ ಮನ್ನಾ ಮಾಡಿದ್ದೇವೆ.
ಅಖಂಡ ಕರ್ನಾಟಕದ ಅಭಿವೃದ್ಧಿಗೆ ಸರ್ಕಾರ ಸಾಕಷ್ಟು ಶ್ರಮ ವಹಿಸುತ್ತಿದೆ. ಇಂತಹ ಸೂಕ್ಷ್ಮ ವಿಚಾರಗಳನ್ನು ಬಿಜೆಪಿ ತನ್ನ ಅನುಕೂಲತೆಗೆ ಬಳಸಿಕೊಳ್ಳುತ್ತಿದೆ ಎಂದು ಅವರು ಆರೋಪಿಸಿದ್ದಾರೆ.
ರೈತ ಮುಖಂಡ ಅಸ್ವಸ್ಥ
ಸಾಲಮನ್ನಾಕ್ಕೆ ಆಗ್ರಹಿಸಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರ ಚುನಾವಣಾ ತವರು ಜಿಲ್ಲೆ ರಾಮನಗರದಿಂದ ಆರಂಭಿಸಿರುವ ಮೂರು ದಿನಗಳ ಪಾದಯಾತ್ರೆ ಶನಿವಾರ ಬೆಂಗಳೂರು ತಲುಪಿದೆ.
ಪಾದಯಾತ್ರೆಯಲ್ಲಿ ವಿವಿಧ ರೈತ ಸಂಘಟನೆಗಳು ಸಹ ಪಾಲ್ಗೊಂಡಿವೆ. ಪಾದಯಾತ್ರೆ ನಡೆಸಿ ತೀವ್ರ ಬಸವಳಿದಿರುವ ಹಾವೇರಿ ಜಿಲ್ಲೆ ರೈತ ಸಂಘದ ಅಧ್ಯಕ್ಷ ವೀರಣ್ಣ ಮಾಕನೂರು ಅಸ್ವಸ್ಥಗೊಂಡಿದ್ದಾರೆ.
ಅವರನ್ನು ಕೂಡಲೇ ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.












Click it and Unblock the Notifications