ಕೃಷಿ ಕಾಯ್ದೆ ವಿರುದ್ಧ ಪ್ರತಿಭಟನೆ: ಇಂದು ರೈತರ ಉಪವಾಸ ನಿರಶನ
ನವದೆಹಲಿ, ಡಿಸೆಂಬರ್ 14: ಮೂರು ಕೃಷಿ ಕಾಯ್ದೆಗಳ ವಿರುದ್ಧ ರೈತರು ನಡೆಸುತ್ತಿರುವ ಪ್ರತಿಭಟನೆ ಸೋಮವಾರ 19ನೇ ದಿನಕ್ಕೆ ಕಾಲಿರಿಸಿದೆ. ರೈತರೊಂದಿಗೆ ಕೇಂದ್ರ ಸರ್ಕಾರ ಇದುವರೆಗೆ ನಡೆಸಿರುವ ಮಾತುಕತೆಗಳು ಫಲಪ್ರದವಾಗಿಲ್ಲ. ಹೀಗಾಗಿ ಇನ್ನೊಂದು ಸುತ್ತಿನ ಮಾತುಕತೆಯನ್ನು ಶೀಘ್ರವೇ ನಡೆಸುವುದಾಗಿ ಕೇಂದ್ರ ತಿಳಿಸಿದೆ. ಮುಖ್ಯವಾಗಿ ಪಂಜಾಬ್ ಮತ್ತು ಹರ್ಯಾಣಗಳಿಂದ ಮತ್ತಷ್ಟು ಸಂಖ್ಯೆಯಲ್ಲಿ ರೈತರು ಪ್ರತಿಭಟನೆಗೆ ಸೇರಿಕೊಳ್ಳುತ್ತಿದ್ದಾರೆ.
ಪ್ರತಿಭಟನಾನಿರತ ರೈತರು ಸೋಮವಾರ ಬೆಳಿಗ್ಗೆ 8 ರಿಂದ ಸಂಜೆ 5ರವರೆಗೆ ವಿವಿಧ ಪ್ರತಿಭಟನಾ ಸ್ಥಳಗಳಲ್ಲಿ ಉಪವಾಸ ಮುಷ್ಕರ ನಡೆಸಲು ತೀರ್ಮಾನಿಸಿದ್ದಾರೆ. ಜತೆಗೆ ಸೋಮವಾರ ದೇಶದಾದ್ಯಂತ ಜಿಲ್ಲಾಡಳಿತ ಕಚೇರಿಗಳ ಮುಂಭಾಗದಲ್ಲಿ ರೈತರು ಪ್ರತಿಭಟನೆ ನಡೆಸಲಿದ್ದಾರೆ.
ದೆಹಲಿ ಗಡಿಗಳಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರನ್ನು ಕೋವಿಡ್ 19ರ ಕಾರಣದಿಂದ ತೆರವುಗೊಳಿಸುವಂತೆ ಕೋರಿ ಸಲ್ಲಿಸಲಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ಎಸ್ಎ ಬೊಬ್ಡೆ ನೇತೃತ್ವದ ಮೂವರು ಸದಸ್ಯರ ನ್ಯಾಯಪೀಠ ಬುಧವಾರ ವಿಚಾರಣೆ ನಡೆಸಲಿದೆ.

ರಾಜಸ್ಥಾನದಿಂದ ದೆಹಲಿಯೆಡೆಗೆ ಸಾವಿರಾರು ರೈತರು ಪ್ರತಿಭಟನಾ ಮೆರವಣಿಗೆ ತೆರಳುತ್ತಿದ್ದು, ಹರ್ಯಾಣದಲ್ಲಿ ರೈತರಿಗೆ ತಡೆಯೊಡ್ಡಲು ರೆವಾರಿ ಗಡಿಯಲ್ಲಿ ಭಾರಿ ಪೊಲೀಸ್ ಭದ್ರತೆ ನಿಯೋಜಿಸಲಾಗಿದೆ. ಕೇಂದ್ರ ಸಚಿವರಾದ ರಾಜನಾಥ್ ಸಿಂಗ್ ಮತ್ತು ನರೇಂದ್ರ ಸಿಂಗ್ ತೋಮರ್ ಅವರ ಮನವಿ ಮೇರೆಗೆ ದೆಹಲಿ-ನೋಯ್ಡಾದ ಚಿಲ್ಲಾ ಗಡಿಯಲ್ಲಿನ ಪ್ರತಿಭಟನೆಯನ್ನು ತೆರವುಗೊಳಿಸಲಾಗಿದೆ. ಆದರೆ ಇದು ಭಾರತೀಯ ಕಿಸಾನ್ ಒಕ್ಕೂಟದ ನಿರ್ಧಾರ. ನಾವು ಇಲ್ಲಿಂದ ಪ್ರತಿಭಟನೆ ತೆರವುಗೊಳಿಸುವುದಿಲ್ಲ ಎಂದು ಸಂಯುಕ್ತ ಕಿಸಾನ್ ಮೋರ್ಚಾ ತಿಳಿಸಿದೆ.












Click it and Unblock the Notifications