ಕೃಷಿ ಕಾಯ್ದೆ ವಿರೋಧಿಸಿ ಸೆ.8ರಂದು ರಾಷ್ಟ್ರವ್ಯಾಪಿ ಭಾರತೀಯ ಕಿಸಾನ್ ಸಂಘ ಧರಣಿ
ನವದೆಹಲಿ, ಸಪ್ಟೆಂಬರ್ 2: ರೈತರ ಬೇಡಿಕೆಗಳನ್ನು ಈಡೇರಿಸುವಲ್ಲಿ ವಿಫಲವಾದ ಕೇಂದ್ರ ಸರ್ಕಾರದ ವಿರುದ್ಧ ಸಪ್ಟೆಂಬರ್ 8ರಂದು ರಾಷ್ಟ್ರೀಯ ಸ್ವಯಂ ಸೇವಾ ಸಂಘದ ಅಂಗ ಸಂಸ್ಥೆ ಭಾರತೀಯ ಕಿಸಾನ್ ಸಂಘ ರಾಷ್ಟ್ರವ್ಯಾಪಿ ಪ್ರತಿಭಟನೆ ನಡೆಸಲು ತೀರ್ಮಾನಿಸಿದೆ.
ಆಗಸ್ಟ್ 31ರೊಳಗೆ ವಿವಾದಿತ ಕೃಷಿ ಕಾಯ್ದೆಗಳನ್ನು ರದ್ದುಗೊಳಿಸುವುದು ಮತ್ತು ಕನಿಷ್ಠ ಬೆಂಬಲ ಬೆಲೆ ನಿಗದಿಗೊಳಿಸುವುದಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ಎದುರಿಗೆ ರೈತರು ಹಲವು ಬೇಡಿಕೆಗಳನ್ನು ಇರಿಸಿದ್ದರು. ರೈತರ ಬೇಡಿಕೆ ಈಡೇರಿಸುವಲ್ಲಿ ಸರ್ಕಾರ ಹಿಂದೇಟು ಹಾಕಿರುವುದನ್ನು ಖಂಡಿಸಿ ಇದೀಗ ದೇಶದಲ್ಲಿ ಧರಣಿ ನಡೆಸುವ ಎಚ್ಚರಿಕೆಯನ್ನು ನೀಡಲಾಗಿದೆ.
ಬೆಳೆಗಳ ಕನಿಷ್ಠ ಬೆಂಬಲ ಬೆಲೆಯನ್ನು (ಎಂಎಸ್ಪಿ) ವೆಚ್ಚದ ಆಧಾರದ ಮೇಲೆ ನಿರ್ಧರಿಸಬೇಕು. ಹೊಸ ಕೃಷಿ ಕಾನೂನುಗಳಿಂದ ಉಂಟಾದ ವಿವಾದವನ್ನು ಪರಿಹರಿಸಲು ರೈತರು ಎತ್ತಿರುವ ಕಾಳಜಿಯನ್ನು ಗಮನದಲ್ಲಿಟ್ಟುಕೊಂಡು ಹೊಸ ಕಾನೂನು ರೂಪಿಸಬೇಕು ಎಂದು ಭಾರತೀಯ ಕಿಸಾನ್ ಸಂಘ ಆಗ್ರಹಿಸಿದೆ.

ಸಪ್ಟೆಂಬರ್ 8ರಂದು ರಾಷ್ಟ್ರವ್ಯಾಪಿ ಧರಣಿ:
ದೇಶದ ರೈತರು ಇಟ್ಟಿರುವ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸಪ್ಟೆಂಬರ್ 8ರಂದು ದೇಶಾದ್ಯಂತ ಸಾಂಕೇತಿಕ ಧರಣೆಯನ್ನು ನಡೆಸಲಾಗುವುದು. ಈ ಮೊದಲು ರೈತರ ಬೇಡಿಕೆಗಳನ್ನು ಈಡೇರಿಸಲು ಪ್ರಧಾನಮಂತ್ರಿ ನರೇಂದ್ರ ಮೋದಿ ಸರ್ಕಾರಕ್ಕೆ ಆಗಸ್ಟ್ 31ರವರೆಗೆ ಸಮಯಾವಕಾಶ ನೀಡಲಾಗಿತ್ತು. ಆದರೆ ಸರ್ಕಾರದಿಂದ ಯಾವುದೇ ಸಕಾರಾತ್ಮಕ ಸೂಚನೆಗಳಿಲ್ಲದ ಕಾರಣ, ನಾವು ಸೆಪ್ಟೆಂಬರ್ 8 ರಂದು ಧರಣಿ ನಡೆಸುತ್ತೇವೆ "ಎಂದು ಬಿಕೆಎಸ್ ಖಜಾಂಚಿ ಯುಗಲ್ ಕಿಶೋರ್ ಮಿಶ್ರಾ ತಿಳಿಸಿದ್ದಾರೆ. ರೈತರ ಸಂಕಷ್ಟಗಳ ಬಗ್ಗೆ ಜನರಿಗೆ ತಿಳಿಸಲು ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ದಿನ ಪತ್ರಿಕಾಗೋಷ್ಠಿಗಳನ್ನು ನಡೆಸಲಾಗುವುದು ಎಂದು ಅವರು ಹೇಳಿದ್ದಾರೆ.
ದೆಹಲಿಯ ಗಡಿಯಲ್ಲಿ ರೈತರ ನಿರಂತರ ಹೋರಾಟ
ಕಳೆದ ನವೆಂಬರ್.26ರಿಂದ ನವದೆಹಲಿಯ ಸಿಂಘು ಗಡಿ, ಟಿಕ್ರಿ ಗಡಿ ಮತ್ತು ಘಾಜಿಪುರ್ ಗಡಿ ಪ್ರದೇಶಗಳಲ್ಲಿ ರೈತರು ನಿರಂತರವಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ. ಪಂಜಾಬ್, ಹರಿಯಾಣ, ಮತ್ತು ಉತ್ತರ ಪ್ರದೇಶದ ಸಾವಿರಾರು ರೈತರು ಕೃಷಿ ಕಾಯ್ದೆಗಳ ವಿರುದ್ಧ ಕೂಗು ಎತ್ತಿದ್ದಾರೆ. ಮೂರು ವಿವಾದಿತ ಕೃಷಿ ಕಾಯ್ದೆಗಳನ್ನು ರದ್ದುಗೊಳಿಸುವಂತೆ ಆಗ್ರಹಿಸಿ ದೆಹಲಿಯ ಜಂತರ್ ಮಂತರ್ ನಲ್ಲಿ ರೈತರು ಪ್ರತಿಭಟನೆ ನಡೆಸಿದರು.
ರೈತರು ವಿರೋಧಿಸುತ್ತಿರುವ ಕೃಷಿ ಕಾಯ್ದೆಗಳು ಯಾವುವು?:
ಕೇಂದ್ರ ಸರ್ಕಾರ ಜಾರಿಗೊಳಿಸಲು ಮುಂದಾಗಿರುವ ವಿವಾದಿತ ರೈತರ ಉತ್ಪಾದನೆ ವ್ಯಾಪಾರ ಮತ್ತು ವಾಣಿಜ್ಯ (ಪ್ರಚಾರ ಮತ್ತು ಸೌಲಭ್ಯ) ಕಾಯ್ದೆ, ಬೆಲೆ ಭರವಸೆ ಮತ್ತು ಕೃಷಿ ಸೇವೆಗಳ ಕಾಯ್ದೆ (ಸಬಲೀಕರಣ ಮತ್ತು ಸಂರಕ್ಷಣೆ) ಒಪ್ಪಂದ ಹಾಗೂ ಅಗತ್ಯ ಸರಕುಗಳ (ತಿದ್ದುಪಡಿ) ಕಾಯ್ದೆಗಳ ವಿರುದ್ಧ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ.












Click it and Unblock the Notifications