ಭಾರತ್ ಬಂದ್ ಬದಲು, ಕೃಷಿ ಕಾಯ್ದೆಗಳ ಶವಯಾತ್ರೆ ಪ್ರತಿಭಟನೆ: ಕುರುಬೂರು ಶಾಂತಕುಮಾರ್
ಬೆಂಗಳೂರು, ಮಾರ್ಚ್ 25: ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಕೃಷಿ ತಿದ್ದುಪಡಿ ಕಾಯ್ದೆಯನ್ನು ಕೂಡಲೇ ಹಿಂತೆಗೆದುಕೊಳ್ಳಬೇಕೆಂದು ಆಗ್ರಹಿಸಿ ಮಾ.26ರ ಭಾರತ್ ಬಂದ್ ಬದಲು, ರಾಜ್ಯಾದ್ಯಂತ ಕೃಷಿ ಕಾಯ್ದೆಗಳ ಶವಯಾತ್ರೆ ಪ್ರತಿಭಟನೆ ನಡೆಸಲು ತೀರ್ಮಾನಿಸಲಾಗಿದೆ ಎಂದು ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಅಧ್ಯಕ್ಷ ಕುರುಬೂರು ಶಾಂತಕುಮಾರ್ ತಿಳಿಸಿದ್ದಾರೆ.
ಕಳೆದ ಆರು ತಿಂಗಳಿಂದ ಕರ್ನಾಟಕದಲ್ಲಿ 3 ರಿಂದ 4 ಬಾರಿ ಬಂದ್ ಆಚರಣೆ ಮಾಡಲಾಗಿದೆ. ಇದಕ್ಕೆ ರಾಜ್ಯದ ಜನರು, ರೈತರು ಅಂದು ಅಭೂತಪೂರ್ವ ಬೆಂಬಲ ನೀಡಿದ್ದಾರೆ. ಆದರೆ ಈ ಬಾರಿ ರಾಷ್ಟ್ರೀಯ ಸಂಯುಕ್ತ ಕಿಸಾನ್ ಮೋರ್ಚಾ ಕರೆ ನೀಡಿರುವ ಮಾ.26ರ ಭಾರತ್ ಬಂದ್ ಬಗ್ಗೆ ಪೂರ್ವಯೋಜಿತವಾಗಿ ರಾಜ್ಯದ ಎಲ್ಲ ರೈತ, ಜನಪರ ಸಂಘಟನೆಗಳು ಚರ್ಚಿಸದೆ ಇರುವ ಕಾರಣ, ಯಶಸ್ವಿ ಬಂದ್ ನಡೆಸುವ ಬಗ್ಗೆ ತೀರ್ಮಾನ ಕೈಗೊಳ್ಳಲು ಸಾಧ್ಯವಾಗಿಲ್ಲ ಎಂದರು.
ಹೀಗಾಗಿ ನಾವು ರಾಜ್ಯದಲ್ಲಿ ಬಂದ್ ಕಾರ್ಯಕ್ರಮದ ಬದಲು ಎಲ್ಲಾ ಜಿಲ್ಲೆಗಳಲ್ಲಿ ಕೃಷಿ ಕಾಯ್ದೆಗಳ ಶವಯಾತ್ರೆ ಪ್ರತಿಭಟನೆ ನಡೆಸಲು ತೀರ್ಮಾನಿಸಿದ್ದೇವೆ. ರಾಷ್ಟ್ರೀಯ ಕಿಸಾನ್ ಸಂಯುಕ್ತ ಮೋರ್ಚಾ ಕರೆಯನ್ನು ಈ ರೀತಿಯಲ್ಲಿ ಕರ್ನಾಟಕದ ರೈತರು ಬೆಂಬಲಿಸಲಿದ್ದೇವೆ ಎಂದು ಕುರುಬೂರು ಶಾಂತಕುಮಾರ್ ತಿಳಿಸಿದ್ದಾರೆ.

ಶಿವಮೊಗ್ಗ ಕಿಸಾನ್ ಮಹಾ ಪಂಚಾಯತ್ ಸಭೆಯಲ್ಲಿ ಮಾತನಾಡಿದ ರಾಷ್ಟ್ರೀಯ ರೈತ ಮುಖಂಡ ರಾಕೇಶ್ ಟಿಕಾಯತ್ ಅವರ ಮೇಲೆ ಪೊಲೀಸರು ಕ್ರಿಮಿನಲ್ ಮೊಕದ್ದಮೆ ದಾಖಲಿಸಿರುವುದು ಖಂಡನೀಯವೆಂದರು.
ಪ್ರಜಾಸತ್ತಾತ್ಮಕ ಹೋರಾಟದ ದಮನಕಾರಿ ನೀತಿ ರೈತ ಚಳವಳಿ ಪ್ರಬಲವಾಗುತ್ತಿರುವುದನ್ನು ಸಹಿಸಿಕೊಳ್ಳಲು ಸಾಧ್ಯವಾಗದೆ, ಸರ್ಕಾರ ವಾಮಮಾರ್ಗದ ಮೂಲಕ ಚಳವಳಿಯನ್ನು ಹತ್ತಿಕ್ಕಲು ಯತ್ನಿಸುತ್ತಿದೆ ಎಂದು ಕಿಡಿಕಾರಿದ್ದಾರೆ. ರಾಜ್ಯ ಸರ್ಕಾರ ಕೂಡಲೇ ಕ್ರಿಮಿನಲ್ ಮೊಕದ್ದಮೆ ವಾಪಸ್ ಪಡೆಯಬೇಕು ಎಂದು ಆಗ್ರಹಿಸಿದರು.












Click it and Unblock the Notifications