ಸಂಸತ್ ಎದುರು ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ಗೆ ತೋರಿದ ಫಲಕದಲ್ಲಿ ಏನಿತ್ತು?
ನವದೆಹಲಿ, ಜುಲೈ 20: "ರೈತರ ಕಠಿಣ ಪರಿಶ್ರಮದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸುವುದರ ಬದಲಿಗೆ ಕೇಂದ್ರ ಸರ್ಕಾರವು ಅವರನ್ನು ಅವಮಾನಿಸುತ್ತಿದೆ," ಸಂಸತ್ ಎದುರಿಗೆ ಶಿರೋಮಣಿ ಅಕಾಲಿ ದಳದ ಅಧ್ಯಕ್ಷ ಸುಖ್ಬೀರ್ ಸಿಂಗ್ ಬಾದಲ್ ಇಂಥದೊಂದು ಬೋರ್ಡ್ ಅನ್ನು ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಮುಂದೆ ಪ್ರದರ್ಶಿಸಿದರು.
ಕೇಂದ್ರ ಸರ್ಕಾರ ವಿವಾದಿತ ಕೃಷಿ ಕಾಯ್ದೆಗಳನ್ನು ರದ್ದುಗೊಳಿಸುವಂತೆ ರೈತರು ನಿರಂತರವಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ. ಸರ್ಕಾರ ಮಾತ್ರ ಅದ್ಯಾವುದರ ಬಗ್ಗೆ ತಲೆ ಕೆಡಿಸಿಕೊಳ್ಳದೇ ರೈತರನ್ನು ಅವಮಾನಿಸುತ್ತಿದೆ ಎಂದು ಸಂಸದರು ಆರೋಪಿಸಿದ್ದಾರೆ. ಮುಂಗಾರು ಅಧಿವೇಶನದ ಎರಡನೇ ದಿನವೂ ಸಂಸತ್ ಎದುರಿಗೆ ಶಿರೋಮಣಿ ಅಕಾಲಿ ದಳ ಸಂಸದರು ಕೃಷಿ ಕಾಯ್ದೆಗಳನ್ನು ರದ್ದುಗೊಳಿಸುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಿದರು.
ಕಳೆದ ನವೆಂಬರ್.26ರಿಂದ ನವದೆಹಲಿಯ ಸಿಂಘು ಗಡಿ, ಟಿಕ್ರಿ ಗಡಿ ಮತ್ತು ಘಾಜಿಪುರ್ ಗಡಿ ಪ್ರದೇಶಗಳಲ್ಲಿ ರೈತರು ನಿರಂತರವಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ. ಪಂಜಾಬ್, ಹರಿಯಾಣ, ಮತ್ತು ಉತ್ತರ ಪ್ರದೇಶದ ಸಾವಿರಾರು ರೈತರು ಕೃಷಿ ಕಾಯ್ದೆಗಳ ವಿರುದ್ಧ ಕೂಗು ಎತ್ತಿದ್ದಾರೆ. ರಾಷ್ಟ್ರ ರಾಜಧಾನಿಯಲ್ಲಿ ಮೈಕೊರೆಯುವ ಚಳಿ, ಕೊರೊನಾವೈರಸ್ ಭೀತಿಯ ನಡುವೆಯೂ ಜಗ್ಗದೇ ಕುಗ್ಗದೇ ಕೃಷಿ ಕಾಯ್ದೆ ವಿರುದ್ಧ ಪ್ರತಿಭಟನೆ ಮುಂದುವರಿಸುತ್ತಿದ್ದಾರೆ.

ಕಾಂಗ್ರೆಸ್-ಆಪ್ ಇಬ್ಬಗೆ ನೀತಿ:
"ನಿನ್ನೆಯ ದಿನ ಲೋಕಸಭೆಯಲ್ಲಿ ಕಾಂಗ್ರೆಸ್ ಪಕ್ಷವು ಕೃಷಿ ಕಾಯ್ದೆ ಹೊರತುಪಡಿಸಿ ಬೇರೆ ವಿಷಯಗಳನ್ನು ಪ್ರಸ್ತಾಪಿಸಿದೆ. ಕೃಷಿ ಕಾಯ್ದೆ ಕುರಿತು ಪ್ರಸ್ತಾಪವಾಗುತ್ತಿದ್ದಂತೆ ಆಪ್ ಮತ್ತು ಕಾಂಗ್ರೆಸ್ ಪಕ್ಷದ ಸಂಸದರು ಸದನದಿಂದ ಹೊರ ನಡೆದರು. ಅವರು ಇಬ್ಬಗೆ ನೀತಿಯನ್ನು ಅನುಸರಿಸುತ್ತಿದ್ದು, ಶಿರೋಮಣಿ ಅಕಾಲಿ ದಳ ಮಾತ್ರ ರೈತರ ಪರ ಧ್ವನಿ ಎತ್ತಿದೆ. ಇಂದೂ ಕೂಡ ಸದನದಲ್ಲಿ ನಾವು ವಿವಾದಿತ ಕಾಯ್ದೆ ಬಗ್ಗೆ ಪ್ರಸ್ತಾಪಿಸಲಿದ್ದೇವೆ," ಎಂದು ಶಿರೋಮಣಿ ಅಕಾಲಿ ದಳದ ಸಂಸದೆ ಹರ್ ಸಿಮ್ರತ್ ಕೌರ್ ಬಾದಲ್ ತಿಳಿಸಿದ್ದಾರೆ.
ವಿವಾದಿತ ಕೃಷಿ ಕಾಯ್ದೆಗಳು ಯಾವುವು?:
ಕೇಂದ್ರ ಸರ್ಕಾರ ಜಾರಿಗೊಳಿಸಲು ಮುಂದಾಗಿರುವ ವಿವಾದಿತ ರೈತರ ಉತ್ಪಾದನೆ ವ್ಯಾಪಾರ ಮತ್ತು ವಾಣಿಜ್ಯ (ಪ್ರಚಾರ ಮತ್ತು ಸೌಲಭ್ಯ) ಕಾಯ್ದೆ, ಬೆಲೆ ಭರವಸೆ ಮತ್ತು ಕೃಷಿ ಸೇವೆಗಳ ಕಾಯ್ದೆ (ಸಬಲೀಕರಣ ಮತ್ತು ಸಂರಕ್ಷಣೆ) ಒಪ್ಪಂದ ಹಾಗೂ ಅಗತ್ಯ ಸರಕುಗಳ (ತಿದ್ದುಪಡಿ) ಕಾಯ್ದೆಗಳ ವಿರುದ್ಧ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ.












Click it and Unblock the Notifications