ಮೇ 23ರ ನಂತರ 1.5 ಲಕ್ಷ ರೈತರ 900 ಕೋಟಿ ಸಾಲಮನ್ನಾ ಬಿಡುಗಡೆ
ಬೆಂಗಳೂರು, ಮೇ 8: ರೈತರ ಸಾಲ ಮನ್ನಾ ಬಗ್ಗೆ ಸುದ್ದಿಯ ನಿರೀಕ್ಷೆಯಲ್ಲಿ ಇರುವವರಿಗೆ ಇಲ್ಲೊಂದು ಸಿಹಿ ಸುದ್ದಿ ಇದೆ. 1.5 ಲಕ್ಷ ರೈತರ ಸುಮಾರು 900 ಕೋಟಿ ರುಪಾಯಿ ಸಾಲಮನ್ನಾ ಮೊತ್ತ ಬಿಡುಗಡೆಗೆ ಸಿದ್ಧವಾಗಿದ್ದು ಮೇ 23ರ ಲೋಕಸಭಾ ಚುನಾವಣೆ ನಂತರ ರಾಜ್ಯ ಸರಕಾರದಿಂದ ಬಿಡುಗಡೆ ಮಾಡಲಾಗುವುದು.
ಸಾಲ ಮನ್ನಾ ಯೋಜನೆ ಬಗ್ಗೆ ಚರ್ಚಿಸಲು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಬುಧವಾರ ಉನ್ನತ ಮಟ್ಟದ ಸಭೆ ಕರೆದಿದ್ದರು. 2018 ರ ಡಿಸೆಂಬರ್ ತಿಂಗಳಿನಿಂದ ರೈತರ ಸಾಲವನ್ನು ಹಂತಹಂತವಾಗಿ ಖಾತೆಗೆ ಭರ್ತಿ ಮಾಡಲಾಗುತ್ತಿದೆ. ಈವರೆಗೆ ಸಹಕಾರ ಸಂಘಗಳ 8.3 ಲಕ್ಷ ರೈತರಿಗೆ 3500 ಕೋಟಿ ಸಾಲ ಮನ್ನಾ ಮೊತ್ತವನ್ನು ಬಿಡುಗಡೆ ಮಾಡಲಾಗಿದೆ ಎಂದು ತಿಳಿಸಲಾಯಿತು.
ಇನ್ನು ವಾಣಿಜ್ಯ ಬ್ಯಾಂಕುಗಳಲ್ಲಿ 7.5 ಲಕ್ಷ ರೈತರಿಗೆ 3930 ಕೋಟಿ ರುಪಾಯಿ ಬಿಡುಗಡೆ ಮಾಡಲಾಗಿದೆ. 1.5 ಲಕ್ಷ ರೈತರ ಸುಮಾರು 900 ಕೋಟಿ ರುಪಾಯಿ ಸಾಲ ಮನ್ನಾ ಮೊತ್ತ ಬಿಡುಗಡೆಗೆ ಸಿದ್ಧವಾಗಿದ್ದು, ಮೇ 23ರ ನಂತರ ಬಿಡುಗಡೆ ಮಾಡಲಾಗುವುದು ಎಂದು ಅಧಿಕಾರಿಗಳು ತಿಳಿಸಿದರು.

ಸಹಕಾರ ಸಂಘಗಳಲ್ಲಿ ರೈತರು ನಿಯಮಾವಳಿಗಳಂತೆ ಅರ್ಹತೆ ಪಡೆದ ದಿನದಂದು ಅವರ ಖಾತೆಗೆ ಹಣ ಬಿಡುಗಡೆ ಮಾಡಲಾಗುತ್ತಿದೆ ಎಂದು ಸಹಕಾರ ಇಲಾಖೆಯ ಪ್ರಧಾನ ಕಾರ್ಯದರ್ಶಿ ನಾಗಾಂಬಿಕಾ ದೇವಿ ತಿಳಿಸಿದರು. ಒಟ್ಟಾರೆಯಾಗಿ ವಾಣಿಜ್ಯ ಬ್ಯಾಂಕು ಹಾಗೂ ಸಹಕಾರಿ ಬ್ಯಾಂಕುಗಳ 15.5 ಲಕ್ಷ ರೈತರ 7417 ಕೋಟಿ ರುಪಾಯಿ ಮನ್ನಾ ಮಾಡಲಾಗಿದೆ ಎಂದು ಆರ್ಥಿಕ ಇಲಾಖೆಯ ಹೆಚ್ಚುವರಿ ಪ್ರಧಾನ ಕಾರ್ಯದರ್ಶಿ ಐ.ಎಸ್.ಎನ್. ಪ್ರಸಾದ್ ತಿಳಿಸಿದರು.
ರೈತರ ಸಾಲ ಮನ್ನಾ ಯೋಜನೆಯನ್ನು ವೈಜ್ಞಾನಿಕವಾಗಿ ಅನುಷ್ಠಾನಗೊಳಿಸಲಾಗುತ್ತಿದ್ದು, ನಿಯಮಗಳ ವ್ಯಾಪ್ತಿಯಲ್ಲಿ ಬರುವ ಎಲ್ಲ ರೈತರ ಸಾಲಮನ್ನಾ ಈ ಆರ್ಥಿಕ ವರ್ಷದಲ್ಲೇ ಆಗಲಿದೆ ಎಂದು ಅವರು ತಿಳಿಸಿದರು. ರೈತರ ಸಾಲ ಮನ್ನಾ ಯೋಜನೆಗೆ ಹಣಕಾಸು ಕೊರತೆ ಇಲ್ಲ ಹಾಗೂ ಈಗಾಗಲೇ ಪ್ರಕಟಿಸಿರುವ ಯೋಜನಗಳಿಗೆ ಸಾಲ ಮನ್ನಾದಿಂದ ಯಾವುದೇ ಅಡ್ಡಿಯೂ ಆಗುವುದಿಲ್ಲ ಎಂದು ಅವರು ಸ್ಪಷ್ಟ ಪಡಿಸಿದರು.
ಸಾಲಮನ್ನಾ ಯೋಜನೆಯ ಅನುಷ್ಠಾನವನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿ, ಪ್ರಕ್ರಿಯೆಯನ್ನು ವಾರಕ್ಕೊಮ್ಮೆ ಪರಿಶೀಲಿಸುವಂತೆ ಸಹಕಾರ ಸಚಿವರಿಗೆ ಹಾಗೂ ಸಹಕಾರ ಮತ್ತು ಆರ್ಥಿಕ ಇಲಾಖೆಯ ಅಧಿಕಾರಿಗಳಿಗೆ ಮುಖ್ಯಮಂತ್ರಿಗಳು ಸೂಚಿಸಿದರು. ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ, ಸಹಕಾರ ಸಚಿವ ಬಂಡೆಪ್ಪ ಕಾಶೆಂಪೂರ, ಪಶುಸಂಗೋಪನಾ ಸಚಿವ ನಾಡಗೌಡ ಹಾಗೂ ಸಹಕಾರ ಹಾಗೂ ಹಣಕಾಸು ಇಲಾಖೆಯ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.












Click it and Unblock the Notifications