ರೈತರಿಂದ ಇಂದು ಬೆಂಗಳೂರು-ಮೈಸೂರು ಹೆದ್ದಾರಿ ಬಂದ್
ಮಂಡ್ಯ, ಆಗಸ್ಟ್ 13 : ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಸಂಚರಿಸುವ ಜನರಿಗೆ ಇಂದು ಸಂಚಾರ ದಟ್ಟಣೆ ಬಿಸಿ ತಟ್ಟಲಿದೆ. ಕರ್ನಾಟಕ ರಾಜ್ಯ ರೈತ ಸಂಘವು ಇಂದು ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದ್ದು ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯನ್ನು ತಡೆಯಲಿದೆ.
ಕಬ್ಬಿಗೆ ಬೆಲೆ ನಿಗದಿ ಮಾಡಬೇಕು ಹಾಗೂ ಸಕ್ಕರೆ ಕಾರ್ಖಾನೆಗಳನ್ನು ಕೂಡಲೇ ಆರಂಭಿಸಬೇಕು ಎಂದು ಒತ್ತಾಯಿಸಿ ರೈತ ಸಂಘವು ಗುರುವಾರ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದೆ. ಬೆಂಗಳೂರು-ಮೈಸೂರು ಹೆದ್ದಾರಿ ರಸ್ತೆ ತಡೆ ನಡೆಸಿ ಪ್ರತಿಭಟನೆ ಮಾಡುವುದಾಗಿ ಸಂಘದ ಸದಸ್ಯರು ಈಗಾಗಲೇ ಘೋಷಿಸಿದ್ದಾರೆ. [ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹಂಪ್ ತೆರವು]

ಬೆಳಗ್ಗೆ 11ರಿಂದ ಸಂಜೆ 5 ಗಂಟೆವರೆಗೂ ಶ್ರೀರಂಗಪಟ್ಟಣ, ಮದ್ದೂರು, ಮಂಡ್ಯ ಮುಂತಾದ ಸ್ಥಳಗಳಲ್ಲಿ ಎತ್ತಿನಗಾಡಿ, ಜಾನುವಾರುಗಳ ಸಮೇತ ಸಾವಿರಾರು ರೈತರು ರಸ್ತೆಗೆ ಇಳಿಯಲಿದ್ದು, ಬೃಹತ್ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲಿದ್ದಾರೆ. [ರೈತ ಆತ್ಮಹತ್ಯೆ, ಲೋಕಸಭೆಯಲ್ಲಿ ಯಡಿಯೂರಪ್ಪ ಘರ್ಜನೆ]
ಬರಪೀಡಿತ ಜಿಲ್ಲೆ ಎಂದು ಘೋಷಿಸಿ : ಮಂಡ್ಯವನ್ನು ಬರಪೀಡಿತ ಜಿಲ್ಲೆ ಎಂದು ಘೋಷಣೆ ಮಾಡಬೇಕು ಎಂದು ವಿವಿಧ ರೈತ ಸಂಘಟನೆಗಳು ಒತ್ತಾಯಿಸಿವೆ. ರೈತರ ಸರಣಿ ಆತ್ಮಹತ್ಯೆ, ಮಳೆಯ ಕೊರತೆ, ಬಿತ್ತನೆಗೆ ತೀವ್ರ ಹಿನ್ನಡೆಯಾಗಿದೆ. ಆದರೆ, ಜಿಲ್ಲೆಯ ಮಂಡ್ಯ ತಾಲೂಕನ್ನು ಮಾತ್ರ ಬರಪೀಡಿತ ಎಂದು ಘೋಷಣೆ ಮಾಡಿರುವುದಕ್ಕೆ ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. [ರಾಜ್ಯದ 98 ಬರಪೀಡಿತ ತಾಲೂಕುಗಳ ಪಟ್ಟಿ]
ಮಳೆಯ ಕೊರತೆಯಿಂದಾಗಿ ಈ ಬಾರಿ ಕೆಆರ್ಎಸ್ ಜಲಾಶಯ ತುಂಬಿಲ್ಲ. ಸಾಲಬಾಧೆಯಿಂದಾಗಿ 40ಕ್ಕೂ ಹೆಚ್ಚು ರೈತರು ಜಿಲ್ಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಆದ್ದರಿಂದ ಬರಪೀಡಿತ ಎಂದು ಘೋಷಣೆ ಮಾಡಬೇಕು ಎಂದು ರೈತರು ಒತ್ತಾಯಿಸಿದ್ದಾರೆ.












Click it and Unblock the Notifications